ಕುಮಾರಸ್ವಾಮಿ ಮಾತಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಮಾತಿಗೆ ಬದ್ಧವಾಗಿರದ ಹೆಚ್.ಡಿ.ಕುಮಾರಸ್ವಾಮಿ ಮಾತಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚ್ಯವಾಗಿ ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆಶಿ, ತಮ್ಮ ಮಾತಿಗೆ ನಿಲ್ಲದ, ಪರ್ಯಾಯ ಒಕ್ಕಲಿಗ ಮಠ ಸೃಷ್ಟಿಸಿದವರು ಮಾತಿಗೆ ಬದ್ಧರಾಗಿ ನಡೆದುಕೊಂಡಿಲ್ಲ. ಮಠದ ಸ್ವಾಮೀಗಳನ್ನು ಬಿಟ್ಟಿಲ್ಲ. ಎರಡು ಮಠ ಮಾಡಿದ್ದಾರೆ. ಈಗ ದಿನಬೆಳಗಾದರೆ ಮಠಕ್ಕೆ ಹೋಗಿ ಭೇಟಿ ಮಾಡುತ್ತಾರೆ. ಅವರು ತಮ್ಮ ಮಾತಿಗೆ ಎಂದಿಗೂ ಬದ್ಧರಾಗಿರುವುದಿಲ್ಲ. ಹೀಗಾಗಿ ಅವರ ಮಾತನ್ನು ನಾವು ಗಂಭೀರವಾಗಿ ಪರಿಗಣಿಸುವುದಿಲ್ಲ. ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಟೀಕಿಸುವುದಿರಲೀ, ಅವರು ಟೀಕೆ ಮಾಡದ ವಿಚಾರವೇ ಇಲ್ಲ. ಮೇಕೆದಾಟು ಪಾದಯಾತ್ರೆ ಟೀಕೆ ಮಾಡಿದ್ದವರು ಈಗ ಮೇಕೆದಾಟು ಯೋಜನೆ ಜಾರಿಗೆ ಶಪಥ ಮಾಡುವುದಾಗಿ ಹೇಳಿದ್ದಾರೆ.

ಯಡಿಯೂರಪ್ಪನವರ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದು, ಕುಮಾರಸ್ವಾಮಿ ಬಗ್ಗೆ ಯಡಿಯೂರಪ್ಪ ಮತ್ತು ಯಡಿಯೂರಪ್ಪ ಬಗ್ಗೆ ದೇವೇಗೌಡ ಅವರು ಮಾತನಾಡಿದ್ದನ್ನು ನಾವು ನೋಡಿದ್ದೇವೆ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇದೇ ಯೋಗೇಶ್ವರ್, ಅಶ್ವತ್ಥ್ ನಾರಾಯಣ, ಅಶೋಕ್ ಅವರೇ ಬಿಜೆಪಿ-ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದರು. ಕುಮಾರಸ್ವಾಮಿ ಈಗ ಅವರ ಜತೆಗೆಯೇ ಮೈತ್ರಿ ಮಾಡಿಕೊಂಡಿದ್ದಾರೆ. ಸರ್ಕಾರ ಕೆಡವಿದವರು ಅವರು. ಆದರೆ ಈಗ ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ: “ಹಿಂದೂಗಳು ವೋಟ್ ನಮಗೆ ಬೇಡ” ಸಿಎಂ ಸಿದ್ದರಾಮಯ್ಯ ಕುರಿತು ಸುಳ್ಳು ಸುದ್ದಿ ಹಂಚಿಕೆ

ಒಕ್ಕಲಿಗರ ಸ್ವಾಮೀಜಿಗಳನ್ನು ಭೇಟಿ ಮಾಡಿದರೆ ಸಮುದಾಯದ ಮತಗಳು ವಿಭಜನೆ ಆಗುತ್ತವೆಯೇ ಎಂದು ಕೇಳಿದಾಗ, “ಒಕ್ಕಲಿಗರು ಮತ್ತು ಸ್ವಾಮೀಜಿಗಳು ದಡ್ಡರಲ್ಲ. ಸ್ವಾಮೀಜಿಗಳ ಬಳಿ ಬರುವವರಿಗೆ ವಿಭೂತಿ, ಹೂವಿನ ಹಾರ ಹಾಕಿ ಕಳಿಸುತ್ತಾರೆ. ಅವರು ನಮ್ಮ ಪರ, ಅವರ ಪರ ಇಬ್ಬರ ಪರವೂ ಮಾಡುವುದಿಲ್ಲ. ಸ್ವಾಮೀಜಿಗಳು ಬುದ್ಧಿವಂತರು ರಾಜಕೀಯದಲ್ಲಿ ಅವರು ಹಸ್ತಕ್ಷೇಪ ಮಾಡುವುದಿಲ್ಲ. ಜನತಾದಳದವರು ಮಠವನ್ನು ಇಬ್ಭಾಗ ಮಾಡಿರುವ ಬಗ್ಗೆ ಸ್ವಾಮೀಜಿಗಳಿಗೆ ಅರಿವಿದೆ. ನಮ್ಮ ಜನ ಕೂಡ ಇದನ್ನು ಗಮನಿಸುತ್ತಾರೆ. ಮೈತ್ರಿ ಸರ್ಕಾರ ಪತನವಾದ ಬಳಿಕ ನಮ್ಮ ಸಮಾಜದ ಸಿಎಂ ಅವರನ್ನು ಇಳಿಸಿ ಬಿಟ್ಟಿರಲ್ಲ ಎಂದು ಸ್ವಾಮೀಜಿಗಳು ಬಿಜೆಪಿಯರನ್ನು ಪ್ರಶ್ನಿಸಬಹುದಿತ್ತಲ್ಲವೇ? ಇದನ್ನು ಕೇಳುವ ಶಕ್ತಿ ಸ್ವಾಮೀಜಿಗಳಿಗೆ ಇದೆಯೋ ಇಲ್ಲವೋ ಗೊತ್ತಿಲ್ಲ. ಒಕ್ಕಲಿಗ ಮುಖ್ಯಮಂತ್ರಿಯನ್ನು ಕೆಳಗಿಳಿಸಿದವರನ್ನೇ ಇಂದು ಸ್ವಾಮೀಜಿಯವರ ಬಳಿ ಕರೆದುಕೊಂಡು ಹೋಗಿ ಆಶೀರ್ವಾದ ಪಡೆಯುತ್ತಿದ್ದಾರಲ್ಲವೇ?

ಎಂಟು ಮಂದಿ ಒಕ್ಕಲಿಗರಿಗೆ ಲೋಕಸಭಾ ಟಿಕೆಟ್ ನೀಡಿದ್ದೇವೆ. ನಾನು ಡಿಸಿಎಂ ಮತ್ತು ಪಕ್ಷದ ಅಧ್ಯಕ್ಷನಾಗಿದ್ದೇನೆ. ನಾವೆಲ್ಲಾ ಸಮಾಜದ ಮತ್ತು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡಲು ತಯಾರಿದ್ದೇವೆ. ಭವಿಷ್ಯದ ಬಗೆಗಿನ ಮಾತುಗಳು ನಮಗೆ ಏಕೆ? ನಮ್ಮ ಸಮಾಜದವರು ದಡ್ಡರಲ್ಲ.”ಒಕ್ಕಲಿಗ ನಾಯಕರನ್ನು ಒಗ್ಗೂಡಿಸುತ್ತೇವೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಎಲ್ಲರೂ ಅವರವರ ಬದುಕು ನೋಡಿಕೊಳ್ಳುತ್ತಾರೆ. ನಾವು ಈಗಾಗಲೇ ಅಧಿಕಾರದಲ್ಲಿದ್ದೇವೆ. ಅದಾದ ನಂತರ ಮುಂದಿನ ಐದು ವರ್ಷವೂ ನಾವೇ ಇರುತ್ತೇವೆ. ಮುಂದೆ ನಾವು ಗೆಲ್ಲುವುದಿಲ್ಲ ಎಂದು ಈ ರೀತಿ ಹೇಳುತ್ತಿದ್ದಾರೆ. ನಮ್ಮಿಂದಾಗಿ ಅವರು ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. ಸಿದ್ಧಾಂತವನ್ನೇ ಕುಮಾರಸ್ವಾಮಿ ಅವರು ಮಾರಿಕೊಂಡಿದ್ದಾರೆ. ಕುಮಾರಸ್ವಾಮಿ ಅವರ ವಿಚಾರ ಬಿಡಿ. ಆದರೆ ದೇವೇಗೌಡರಿಗೆ ಅಳಿಯನನ್ನು ಬಿಜೆಪಿಯಿಂದ ನಿಲ್ಲಿಸುವ ಪರಿಸ್ಥಿತಿ ಬರಬಾರದಿತ್ತು. ಅವರ ಸ್ಥಿತಿ ನೋಡಿ ಬೇಸರವಾಗುತ್ತದೆ” ಎಂದು ತಿಳಿಸಿದರು.

ಮೈತ್ರಿ ಸರ್ಕಾರ ಬೀಳಿಸಿದವರು ಬಿಜೆಪಿಯಲ್ಲ ಕಾಂಗ್ರೆಸಿಗರು ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರು ವಿಶ್ವನಾಥ್, ನಾರಾಯಣ ಗೌಡರನ್ನು ಭೇಟಿ ಮಾಡಿದ್ದಾರೆ. ಯೋಗೇಶ್ವರ್, ಅಶ್ವತ್ಥ್ ನಾರಾಯಣ, ಯಡಿಯೂರಪ್ಪ ಅವರನ್ನು ತಬ್ಬಾಡುತ್ತಿದ್ದಾರೆ. ಜನಕ್ಕೆ ಇದಕ್ಕಿಂತ ಸಾಕ್ಷಿ ಬೇರೇನು ಬೇಕು? ಕುಮಾರಸ್ವಾಮಿ ಅವರು ಆಗ ಏನು ಮಾತನಾಡಿದ್ದರು?” ಎಂದು ಕೇಳಿದರು.

“ದೇವೇಗೌಡರು ನಾಲ್ಕು ಸೀಟ್ ಬಗ್ಗೆ ಹೇಳುತ್ತಾ ಇದ್ದಾರೆ. ಒಂದು ಸ್ಥಾನವೂ ಗೆಲ್ಲುವುದಿಲ್ಲ. ಬಿಜೆಪಿಯ ಸೀಟನ್ನು ಜೆಡಿಎಸ್ ಸೀಟ್ ಎಂದು ಹೇಳುತ್ತಿದ್ದಾರೆ. ಮಂಜುನಾಥ್ ಅವರು ಈ ತೀರ್ಮಾನ ನನ್ನದಲ್ಲ ಅವರಿಬ್ಬರದೇ ಎಂದಿದ್ದಾರೆ. ಜೆಡಿಎಸ್ ನಾಲ್ಕು ಸ್ಥಾನ ಗೆಲ್ಲುತ್ತದೆ ಎಂದು ಹೇಳುತ್ತಿದ್ದ ತಜ್ಞರು ಮತ್ತು ಮಾಧ್ಯಮದವರು ಏಕೆ ಮಾತನಾಡುತ್ತಿಲ್ಲ?. ಮಾಧ್ಯಮದವರು ಸಹ ವಸ್ತುನಿಷ್ಠವಾಗಿ ವರದಿ ಮಾಡುತ್ತಿಲ್ಲ. ಇದನ್ನು ಖಡಾಖಂಡಿತವಾಗಿ ಹೇಳುತ್ತಿದ್ದೇನೆ ಹಾಗೂ ಬಹಳ ತಾಳ್ಮೆಯಿಂದ ವೀಕ್ಷಣೆ ಮಾಡುತ್ತಿದ್ದೇನೆ” ಎಂದು ಸೂಕ್ಷ್ಮವಾಗಿ ಡಿಕೆಶಿವಕುಮಾರ್‌ ಹೇಳಿದರು.

Donate Janashakthi Media

Leave a Reply

Your email address will not be published. Required fields are marked *