ಸಂಸತ್‌ ಅಧಿವೇಶನ: 14 ತಿಂಗಳು ಕಳೆದರೂ ಲಖಿಂಪುರ ಖೇರಿ ಸಂತ್ರಸ್ತರಿಗೆ ಸಿಕ್ಕಿಲ್ಲ ಪರಿಹಾರ

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಸಮರಶೀಲ ಹೋರಾಟದ ಅವಧಿಯಲ್ಲಿ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಜರುಗಿದ ಹಿಂಸಾಚಾರ ಪ್ರಕರಣದಲ್ಲಿ ಗಾಯಗೊಂಡ ರೈತರು ಹಾಗೂ ಮೃತಪಟ್ಟ ರೈತ ಕುಟುಂಬಗಳಿಗೆ ಸರ್ಕಾರ ಘೋಷಿಸಿದ ಪರಿಹಾರ ಸಿಗದಿರುವ ಬಗ್ಗೆ ರಾಜ್ಯಸಭೆ ಅಧಿವೇಶನದಲ್ಲಿ ಚರ್ಚೆಗೆ ಬಂದಿತು.

ಇಂದು(ಡಿಸೆಂಬರ್‌ 09) ಶೂನ್ಯ ವೇಳೆಯಲ್ಲಿ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ)ಯ ಜಯಂತ್‌ ಚೌಧರಿ ವಿಚಾರವನ್ನು ಪ್ರಸ್ತಾಪಿಸಿ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ವಾಹನ ಹರಿಸಿ ನಾಲ್ವರು ರೈತರು ಮೃತಪಟ್ಟಿರುವ ಭೀಕರ ಘಟನೆ ನಡೆದಿತ್ತು. ಭಾರೀ ವಿರೋಧ ಮತ್ತು ಪ್ರತಿಭಟನೆಗಳ ಮೂಲಕ ನಂತರದಲ್ಲಿ, ಸರ್ಕಾರವು  ಮೃತ ರೈತ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಹಾಗೂ ಗಾಯಗೊಂಡವರಿಗೆ ₹10 ಲಕ್ಷ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿತ್ತು ಎಂದು ವಿವರಿಸಿದರು. ಅಲ್ಲದೆ, ತಕ್ಷಣ ಸಂತ್ರಸ್ತರಿಗೆ ಪರಿಹಾರ ಒದಗಿಸುವಂತೆ ಒತ್ತಾಯಿಸಿದರು.

ಕಳೆದ ವರ್ಷ 2021ರ ಅಕ್ಟೋಬರ್‌ 03ರಂದು ನಡೆದ ಹಿಂಸಾಚಾರದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಣತೆ 13 ಜನರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿ ನ್ಯಾಯಾಲದ ವಿಚಾರಣೆ ಹಂತದಲ್ಲಿದೆ. ಹಿಂಸಾಚಾರ ಘಟನೆಯಲ್ಲಿ ಗಾಯಗೊಂಡ ರೈತರಿಗೆ ಪರಿಹಾರ ಮತ್ತು ಮೃತಪಟ್ಟ ರೈತರ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡುವ ಭರವಸೆಯನ್ನು ರಾಜ್ಯ ಸರ್ಕಾರ ಇನ್ನೂ ಪೂರ್ಣಗೊಳಿಸಿಲ್ಲ ಎಂದು ಪ್ರಶ್ನಿಸಲಾಯಿತು.

ಇತ್ತೀಚಿಗೆ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಈ ವಿಚಾರವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕೊಟ್ಟ ಉತ್ತರದಲ್ಲಿ ಭರವಸೆಗಳನ್ನು ಪೂರೈಸುವ ನಿಟ್ಟಿನಲ್ಲಿ ಯಾವುದೇ ಕ್ರಮಕೈಗೊಳ್ಳದಿರುವುದು ತಿಳಿದುಬಂದಿದೆ ಎಂದು ಸಂಸದ ಜಯಂತ್‌ ಚೌಧರಿ ಹೇಳಿದರು.

ಭರವಸೆಗಳನ್ನು ಪೂರೈಸುವ ನಿಟ್ಟಿನಲ್ಲಿ ಯಾಕೆ ಇದುವರೆಗೆ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಪ್ರಶ್ನಿಸಿದ ಅವರು, ತಕ್ಷಣ ಸಂತ್ರಸ್ತರಿಗೆ ಪರಿಹಾರ ಹಾಗೂ ಮೃತ ರೈತರ ಕುಟುಂಬ ಸದಸ್ಯರಿಗೆ ಉದ್ಯೋಗ ಒದಗಿಸಬೇಕು ಎಂದು ಒತ್ತಾಯಿಸಿದರು.

Donate Janashakthi Media

Leave a Reply

Your email address will not be published. Required fields are marked *