ಬಿಜೆಪಿಗೆ ದೊಡ್ಡ ಹಿನ್ನೆಡೆ ತಂದ ಮಾಡಾಳು ಪ್ರಕರಣ; ದಾವಣಗೆರೆಗೆ ಶಾ ಭೇಟಿ ಏಕಾಏಕಿ ರದ್ದು!

ಬೆಂಗಳೂರು : ಟೆಂಡರ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪ್ರಕರಣದಿಂದ ಮುಜಗರಕ್ಕೆ ಸಿಲುಕಿರುವ ಬಿಜೆಪಿ ಅಮಿತ್ ಷಾ ಅವರ ಕರ್ನಾಟಕ ಭೇಟಿಯನ್ನು ಮುಂದೂಡಲಾಗಿದೆ.

ಕೇಂದ್ರ ಗೃಹ ಸಚಿವರಾಗಿರುವ ಅಮಿತ್ ಷಾ ಇದೇ ತಿಂಗಳ 12ರಂದು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿಗೆ ಆಗಮಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿರುವ ಎಂ.ಪಿ.ರೇಣುಕಾಚಾರ್ಯ ಅವರು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಕಾರ್ಯಕ್ರಮಕ್ಕೆ ಅಮಿತ್ ಷಾ ಅವರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಲಾಗಿತ್ತು.

ಇದನ್ನೂ ಓದಿ : ಗಡಿ ವಿವಾದ: ಉಭಯ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಭೆ ನಿಗದಿ

ಸುಮಾರು ಒಂದು ಲಕ್ಷ ಕಾರ್ಯಕರ್ತರನ್ನು ಸೇರಿಸಲು ಬಿಜೆಪಿ ತಯಾರಿ ನಡೆಸಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಪ್ರಮುಖರಿಗೆ ಆಹ್ವಾನವನ್ನೂ ಸಹ ನೀಡಲಾಗಿತ್ತು.
ಆದರೆ ಟೆಂಡರ್ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಹಾಗೂ ಬಿಡಬ್ಲ್ಯುಎಸ್‍ಎಸ್‍ಬಿ ಮುಖ್ಯ ಲೆಕ್ಕ ಪರಿಶೋಧಕ ಪ್ರಶಾಂತ್ ಮಾಡಾಳ್ ಹಾಗೂ ಇತರೆ ಆರೋಪಿಗಳು ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಪಾಲಾದರು.
ಇದೀಗ ಸ್ವತಃ ಮಾಡಾಳ್ ಅವರೇ ಬಂಧನದ ಭೀತಿ ಎದುರಿಸುತ್ತಿದ್ದು ಕಳೆದ 5 ದಿನಗಳಿಂದ ನಾಪತ್ತೆಯಾಗಿದ್ದಾರೆ.

ಮಾ.12ರಂದು ಅಮಿತ್ ಷಾ ಬರುವ ವೇಳೆಗೆ ಮಾಡಾಳ್ ಲೋಕಾಯುಕ್ತ ಪೊಲೀಸರ ಬಂಧಿಸಿದರೆ ಅದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಲಿದೆ ಎಂದೇ ವ್ಯಾಖ್ಯಾನಿಸಲಾಗಿದೆ. ಹೊನ್ನಾಳಿಯು ಚನ್ನಗಿರಿ ಕ್ಷೇತ್ರಕ್ಕೆ ಹೊಂದಿಕೊಂಡಿರುವುದರಿಂದ ಮಾಡಾಳ್ ಬಂಧನ ಸಹಜವಾಗಿ ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿ ಅಮಿತ್ ಷಾ ಅವರಿಗೆ ಮುಜುಗರವಾಗಲಿದೆ. ಇದೆಲ್ಲವನ್ನೂ ಲೆಕ್ಕಾಚಾರ ಹಾಕಿಯೇ ಹೊನ್ನಾಳಿಯ ಕಾರ್ಯಕ್ರಮವನ್ನು ಸದ್ಯಕ್ಕೆ ಮುಂದೂಡಲಾಗಿದೆ. ಕರ್ನಾಟಕಕ್ಕೆ ಮಾ.12ರಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಆಗಮಿಸಬೇಕಿತ್ತು. ಅಂದು ಅವರು ಶಿವಮೊಗ್ಗ ಜಿಲ್ಲೆಯ ಹೊನ್ನಾಳಿಯಲ್ಲಿ ಶಾಸಕ ಎಂ.ಪಿ .ರೇಣುಕಾಚಾರ್ಯ ಅವರು ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಕರ್ನಾಟಕ ರಾಜ್ಯ ಲೋಕಾಯಕ್ತ ದಾಳಿಯ ಕಾರಣದಿಂದಾಗಿ ಅಮಿತ್ ಶಾ ಸಮಾರಂಭ ಮುಂಡೂಡಲಾಗಿದೆ.

ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಈ ಅಮಿತ್ ಶಾ ಅವರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಾಂಡಗಳು, ಕುರುಬರಹಟ್ಟಿ, ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ 12 ಜಿಲ್ಲೆಗಳ ಸುಮಾರು 53 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಬೇಕಿತ್ತು. ಕೇಂದ್ರ ಸಚಿವರ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಕಾರಿ, ಶಾಸಕ ರೇಣುಕಾಚಾರ್ಯ ಸೇರಿದಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯ ಕಾರ್ಯ ನಿರ್ವಣಾಕಾರಿಗಳು ಸಮಾರಂಭದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.  ಇದೀಗ ಮಾಡಾಳ ವಿರೂಪಾಕ್ಷಪ್ಪ ಪ್ರಕರಣದಿಂದ ಏಕಾಏಕಿ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ.

Donate Janashakthi Media

Leave a Reply

Your email address will not be published. Required fields are marked *