ಮಾರ್ಚ್‌ 21 ಸಾರಿಗೆ ನೌಕರರಿಂದ ಮುಷ್ಕರ; ಬಸ್‌ ರಸ್ತೆಗಿಳಿಯೋದು ಡೌಟ್‌!

ಬೆಂಗಳೂರು: ವೇತನ ಪರಿಷ್ಕರಣೆ ಸೇರಿ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮಾರ್ಚ್‌ 21ರಿಂದ ಬಸ್‌ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ಧರಿಸಿದ್ದಾರೆ. ಇದರಿಂದ ಯುಗಾದಿ ಹಬ್ಬಕ್ಕೆ ಮುನ್ನವೇ ರಾಜ್ಯಾದ್ಯಂತ 23 ಸಾವಿರ ಬಸ್‌ಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ.

ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಫೆಡರೇಷನ್‌, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್‌ (ಸಿಐಟಿಯು), ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಯುನೈಟೆಡ್‌ ಎಂಪ್ಲಾಯೀಸ್‌ ಯೂನಿಯನ್‌, ಕೆಎಸ್‌ಆರ್‌ಟಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನೌಕರರ ಸಂಘ, ಕೆಎಸ್‌ಆರ್‌ಟಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವನ್ನೊಳಗೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಒಮ್ಮತದ ನಿರ್ಣಯ ಕೈಗೊಂಡಿದೆ.

ಮುಷ್ಕರದ ಕುರಿತಂತೆ  ಮಂಗಳವಾರ ನಡೆದ  ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಫೆಡರೇಷನ್‌ನ ಅಧ್ಯಕ್ಷ ಎಚ್‌ವಿ ಅನಂತಸುಬ್ಬರಾವ್‌,  ಹಾಗೂ  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್‌ನ ಪ್ರಧಾನ ಕಾರ್ಯದರ್ಶಿ ಎಚ್‌. ಎಸ್‌, ಮಂಜುನಾಥ್‌ ”ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುವಂತೆ ಹಲವು ಸಲ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಫೆ. 21ರಂದು ನಡೆದ ಅಂಬಾರಿ ಉತ್ಸವ ಬಸ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ವಿಧಾನ ಮಂಡಲದ ಅಧಿವೇಶನ ಮುಗಿದ ಕೂಡಲೇ ಸಭೆ ಕರೆದು ಬೇಡಿಕೆಗಳನ್ನು ಈಡೇರಿಸುವುದಾಗಿ ಸಿಎಂ ಭರವಸೆ ನೀಡಿದ್ದರು. ಆದರೆ, ಈವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ,” ಎಂದು ಹೇಳಿದರು.

‘ಸಾರಿಗೆ ಸಚಿವ ಶ್ರೀರಾಮುಲು ಅವರು ಮಾರ್ಚ್‌ 8ರಂದು ಸಭೆ ಕರೆದು, ಮೂಲ ವೇತನದ ಶೇ 10ರಷ್ಟು ಹೆಚ್ಚಳದ ಭರವಸೆಗೆ ನಾವು ಸಮ್ಮತಿಸಲಿಲ್ಲ. ಈ ಹಿನ್ನೆಲೆಯಲ್ಲಿಎರಡು ದಿನಗಳೊಳಗೆ ಮತ್ತೊಮ್ಮೆ ಸಭೆ ನಡೆಸಿ, ಅಂತಿಮ ತೀರ್ಮಾನ ಪ್ರಕಟಿಸುವುದಾಗಿ ಹೇಳಿದರು. ಆದರೆ, ಈವರೆಗೆ ಸಭೆ ಕರೆದಿಲ್ಲ,” ಎಂದರು.

ಇದನ್ನೂ ಓದಿ : ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲ: ಜ.24ರಿಂದ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

”ಸರಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳ ಮಾಡಿದೆ. ಸಾರಿಗೆ ನೌಕರರಿಗೆ 2016ರ ಜ. 1ರಿಂದ ಅನ್ವಯವಾಗುವಂತೆ ಶೇ 12.5ರಷ್ಟು ವೇತನ ಹೆಚ್ಚಳ ಮಾಡಲಾಗಿತ್ತು. ಇದಾಗಿ 3 ವರ್ಷ 3 ತಿಂಗಳು ಕಳೆದರೂ ಸಂಬಳ ಪರಿಷ್ಕರಿಸಿಲ್ಲ. ಕೈಗಾರಿಕಾ ಒಪ್ಪಂದದನ್ವಯ 2020ರ ಜ. 1ರಿಂದ ವೇತನ ಪರಿಷ್ಕರಣೆಯಾಗಬೇಕಿತ್ತು. ಸಾರಿಗೆ ನಿಗಮಗಳ ಆಡಳಿತ ವರ್ಗದ ನೀತಿಗಳಿಂದಾಗಿ ಎಲ್ಲ ನಿಗಮಗಳು ನಷ್ಟದಲ್ಲಿವೆಯೇ ಹೊರತು ಅಧಿಕಾರಿ, ನೌಕರರ ಕೆಲಸದಿಂದ ಅಲ್ಲ,” ಎಂದು ತಿಳಿಸಿದರು.

ಮಾರ್ಚ್‌ 20ರ ರಾತ್ರಿಯಿಂದಲೇ ಸಿಗಲ್ಲ ಬಸ್‌! 

”ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳು ಶುರುವಾಗುತ್ತಿವೆ. ಚುನಾವಣೆ ಘೋಷಣೆಗೆ ಮುನ್ನವೇ ವೇತನ ಪರಿಷ್ಕರಣೆಗೆ ಸರಕಾರ ಕ್ರಮ ವಹಿಸಬೇಕಿದೆ. ಆದ ಕಾರಣ, ಸರಕಾರದ ಒತ್ತಡ ಹೇರಲು ಮಾ. 21ರ ಬೆಳಗ್ಗೆ 6 ರಿಂದ ಎಲ್ಲಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ. ಮಾ. 20ರ ರಾತ್ರಿಯಿಂದಲೇ ಬಸ್‌ಗಳು ರಸ್ತೆಗಿಳಿಯುವುದಿಲ್ಲ,” ಎಂದು ಹೇಳಿದರು.

 ನೌಕರರ ಬೇಡಿಕೆಗಳೇನು ?
  • ಮೂಲ ವೇತನಕ್ಕೆ ಬಿ.ಡಿ.ಎ ವಿಲೀನಗೊಳಿಸಿ, ಮೂಲ ವೇತನವನ್ನು ಶೇ.25ರಷ್ಟು ಹೆಚ್ಚಿಸಬೇಕು.
  • ವೇತನ ಹೆಚ್ಚಳವು ಪರಿಷ್ಕೃತ ಮೂಲ ವೇತನದ ಶೇ.3ರಷ್ಟಿರಬೇಕು.
  • ಆಯ್ಕೆ ಶ್ರೇಣಿ ಹಾಗೂ ಉನ್ನತ ಶ್ರೇಣಿಗಳ ವೇತನ ಶ್ರೇಣಿಯನ್ನೂ ಮೇಲಿನಂತೆಯೇ ಸಿದ್ಧಪಡಿಸಬೇಕು. ವೇತನ ಬಡ್ತಿ ದರವು ಪರಿಷ್ಕೃತ ಮೂಲ ವೇತನದ ಶೇ 3ರಷ್ಟಿರಬೇಕು. ಆಯ್ಕೆ ಶ್ರೇಣಿ ಬಡ್ತಿಯನ್ನು ಸೇವಾವಧಿಯ ಪ್ರತಿ 10 ವರ್ಷಕ್ಕೆ ನೀಡಬೇಕು.
  • ಎಲ್ಲನೌಕರರಿಗೂ ಹಾಲಿ ಇರುವ ಬಾಟಾ, ಮಾಸಿಕ, ದೈನಂದಿನ (ಕ್ಯಾಷ್‌, ರಿಪಾಸ್ಟ್‌, ಬಟ್ಟೆ ತೊಳೆಯುವ, ರಾತ್ರಿ ಪಾಳಿ, ಪ್ರೋತ್ಸಾಹ ಭತ್ಯೆ) ಭತ್ಯೆಗಳನ್ನು ಐದು ಪಟ್ಟು ಜಾಸ್ತಿ ಮಾಡಬೇಕು.
  • ಹೊಲಿಗೆ ಭತ್ಯೆ, ಶೂ, ಜೆರ್ಸಿ, ರೈನ್‌ ಕೋಟ್‌ಗೆ ನೀಡುವ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಬೇಕು.
  • ಎಲ್ಲ ನಿರ್ವಾಹಕರಿಗೂ ಕ್ಯಾಷಿಯರ್‌ಗಳಿಗೆ ಸಮಾನವಾದ ನಗದು ಪ್ರೋತ್ಸಾಹಧನ ನೀಡಬೇಕು.
  • 2021ರ ಏಪ್ರಿಲ್‌ನಲ್ಲಿ ಮುಷ್ಕರ ನಡೆಸಿದ ಸಂದರ್ಭದಲ್ಲಿ ಸೇವೆಯಿಂದ ವಜಾಗೊಳಿಸಿದ ನೌಕರರನ್ನು ಷರತ್ತಿಲ್ಲದೆ ಮರು ನೇಮಕ ಮಾಡಬೇಕು.
  • ವರ್ಗಾವಣೆ ಶಿಕ್ಷೆಗೆ ಒಳಗಾದ ಸಿಬ್ಬಂದಿ, ನೌಕರರನ್ನು ಮೂಲ ಘಟಕಕ್ಕೆ ಮರು ನಿಯೋಜಿಸಬೇಕು.
  • ಮುಷ್ಕರದ ವೇಳೆ ಎಫ್‌ಐಆರ್‌ ದಾಖಲಿಸಿರುವ ನೌಕರರನ್ನು ಕೆಲಸಕ್ಕೆ ವಾಪಸ್‌ ತೆಗೆದುಕೊಳ್ಳಬೇಕು.
  • ಜಂಟಿ ಕ್ರಿಯಾ ಸಮಿತಿಯಿಂದ ಜ. 24ರಂದು ಸಲ್ಲಿಸಿರುವ ಬೇಡಿಕೆಗಳನ್ನು ಆಡಳಿತ ವರ್ಗದವರು ಚರ್ಚಿಸಿ, ವಿಳಂಬವಿಲ್ಲದೇ ಈಡೇರಿಸಬೇಕು.
  • ಕೈಗಾರಿಕಾ ವಿವಾದ ಕಾಯಿದೆ 1947ರ ಅನ್ವಯ ಜಂಟಿ ಕ್ರಿಯಾ ಸಮಿತಿಯ ಜತೆ ಕೈಗಾರಿಕಾ ಒಪ್ಪಂದ ಮಾಡಬೇಕು. ಇದು 2020ರ ಜ. 1 ರಿಂದ 2023ರ ಡಿ. 31ರವರೆಗೆ ಜಾರಿಯಲ್ಲಿರಬೇಕು ಮುಂತಾದವು.
Donate Janashakthi Media

Leave a Reply

Your email address will not be published. Required fields are marked *