ಮೇ 10 ರಿಂದ 24ರ ವರೆಗೆ ರಾಜ್ಯದ್ಯಂತ ಲಾಕ್‌ಡೌನ್: ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ಕೋವಿಡ್–19 ಎರಡನೇ ಅಲೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆ ನಿಯಂತ್ರಿಸುವ ಸಲುವಾಗಿ ರಾಜ್ಯದಲ್ಲಿ ಮೇ 10 ರಿಂದ 24ರ ವರೆಗೆ ಲಾಕ್‌ಡೌನ್ ಘೋಷಿಸಲಾಗಿದೆ.

ಸಚಿವರು ಮತ್ತು ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಾಕ್‌ಡೌನ್ ನಿರ್ಧಾರ ಪ್ರಕಟಿಸಿದರು.

ಕೆಲವು ದಿನಗಳಿಂದ ಕೊರೊನಾ ಹೊಸ ಪ್ರಕರಣಗಳು ಸಾಕಷ್ಟು ಏರುಗತಿಯಲ್ಲಿ ದಾಖಲಾಗುತ್ತಿದ್ದರಿಂದ ಕೊರನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಮತ್ತಷ್ಟು ಹರಡದಂತೆ ಬಿಗಿಕ್ರಮಗಳನ್ನು ಕೈಗೊಂಡಿರುವ ಸರಕಾರ ಇಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಬೆಳಿಗ್ಗೆಯಿಂದ ಅಧಿಕಾರಿಗಳು, ಸಚಿವರುಗಳೊಂದಿಗೆ ಸತತ ಸಭೆಗಳನ್ನು ನಡೆಸಿ ಇಂದು ಸಂಜೆಯೊಂದಿಗೆ ಅಧಿಕೃತವಾಗಿ ಸಂದೇಶ ರವಾನೆಯಾಗಿದೆ.

 

ಪರಿಷ್ಕೃತ ಮಾರ್ಗಸೂಚಿ ಕೆಲವು ಸೂಚನೆಗಳು

* ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ 50 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಪಾಸಿಟಿವಿಟಿ ದರವೂ ಹೆಚ್ಚಾಗಿದೆ.

* ರಾಜ್ಯ ಸರ್ಕಾರವು ಕೋವಿಡ್-19 ನಿಯಂತ್ರಣಕ್ಕಾಗಿ ಏಪ್ರಿಲ್ 26 ರಂದು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆದರೆ, ಇದೀಗ ಸೋಂಕು ಹರಡುವುದನ್ನು ತಡೆಗಟ್ಟಲು ಇನ್ನಷ್ಟು ಕಟ್ಟುನಿಟ್ಟಿನ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ.

* ಹೊಸ ಮಾರ್ಗಸೂಚಿಯು ಮೇ 10ರ ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯ ವರೆಗೆ ಜಾರಿಯಲ್ಲಿರಲಿದೆ.

* ಟ್ಯಾಕ್ಸಿ, ಆಟೋ ರಿಕ್ಷಾಗಳು ತುರ್ತು ಸಂದರ್ಭಗಳಲ್ಲಿ ಹಾಗೂ ಮಾರ್ಗಸೂಚಿಯಲ್ಲಿ ಅನುಮತಿಸಿದ ರೀತಿಯಲ್ಲಿ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದೆ.

* ಬಸ್, ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಆದರೆ ಈಗಾಗಲೇ ನಿಗದಿಯಾಗಿರುವ ವಿಮಾನ ಮತ್ತು ರೈಲುಗಳು ಸಂಚರಿಸಲಿವೆ.

* ಆಹಾರ ಸಾಮಾಗ್ರಿ, ದಿನಸಿ ವಸ್ತುಗಳು, ಹಣ್ಣು ಮತ್ತು ತರಕಾರಿ, ಮಾಂಸ ಮತ್ತು ಮೀನಿನ ಮಳಿಗೆಗಳು ಮತ್ತು ಪಶು ಆಹಾರದ ಮಳಿಗೆಗಳು ಬೆಳಿಗ್ಗೆ 6 ರಿಂದ 10 ಗಂಟೆಯ ವರೆಗೆ ತೆರೆಯಲು ಅನುಮತಿಸಿದೆ. ಹಾಲಿನ ಬೂತ್‌ಗಳು ಹಾಗೂ ತಳ್ಳುಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಅವಕಾಶವಿದೆ.

* ಶಾಲೆ, ಕಾಲೇಜುಗಳು, ಶಿಕ್ಷಣ/ ಕೋಚಿಂಗ್ ಸಂಸ್ಥೆಗಳ ತರಗತಿಗಳು ನಡೆಯುವುದಿಲ್ಲ.

* ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಆಹಾರ ಮಳಿಗೆಗಳು ಪಾರ್ಸೆಲ್ ಹಾಗೂ ಹೋಂ ಡೆಲಿವರಿ ಸೇವೆಗಳನ್ನು ಮಾತ್ರ ಒದಗಿಸಲು ಅನುಮತಿ ನೀಡಲಾಗಿದೆ.

* ಸಿನಿಮಾ ಹಾಲ್‌ಗಳು, ಶಾಪಿಂಗ್ ಮಾಲ್‌ಗಳು, ಜಿಮ್‌, ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣ, ಈಜುಕೊಳ, ಉದ್ಯಾನವನಗಳು, ಮನರಂಜನಾ ಪಾರ್ಕ್‌ಗಳು, ಕ್ಲಬ್‌ಗಳು, ಥಿಯೇಟರ್‌ಗಳು, ಬಾರ್‌ಗಳು ಮತ್ತು ಸಭಾಂಗಣ, ಸಮುದಾಯ ಭವನಗಳಂತಹ ಸ್ಥಳಗಳು ಮುಚ್ಚಲಿವೆ.

* ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿ, ಧಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳನ್ನು ನಿಷೇಧಿಸಲಾಗಿದೆ.

* ಎಲ್ಲ ಧಾರ್ಮಿಕ ಸ್ಥಳಗಳು/ ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

* ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಮಾತ್ರ ಕಾರ್ಯ ನಿರ್ವಹಿಸಲಿವೆ.

* ಎಲ್ಲ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆಗಳಿಗೆ ಅವಕಾಶ ನೀಡಲಾಗುವುದು.

* ಎಲ್ಲಾ ತರದ ಕೃಷಿ ಹಾಗೂ ಪೂರಕ ಚಟುವಟಿಕೆಗಳಿಗೆ ಅನುವು ಮಾಡಿಕೊಡಲಾಗಿದೆ. ಜೊತೆಗೆ ಮೀನುಗಾರಿಕೆ, ಕೋಳಿ ಸಾಕಾಣಿಕೆ, ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳಿಗೂ ಅನುಮತಿಸಲಾಗಿದೆ.

* ಎಲ್ಲ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ ನೀಡಲಾಗುವುದು.

* ಸಾರ್ವಜನಿಕರ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಕೆಲವು ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ.

* ಈ ಮಾರ್ಗಸೂಚಿಯಲ್ಲಿ ಅನುಮತಿಸಿದ ಸಂದರ್ಭಗಳನ್ನು ಹೊರತು ಪಡಿಸಿ, ಸರ್ಕಾರಿ ಹಾಗೂ ಖಾಸಗಿ ಬಸ್‌ಗಳು ಹಾಗೂ ಇತರ ಪ್ರಯಾಣಿಕರ ವಾಹನಗಳ ಸಂಚಾರವನ್ನು ನಿಷೇಧಿಸಿದೆ.

* ನ್ಯಾಯಬೆಲೆ ಅಂಗಡಿಗಳು ತೆರೆಯಲಿವೆ. ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಿಗ್ಗೆ 6 ರಿಂದ 10ರ ವರೆಗೆ ತೆರೆಯಲಿವೆ. ಜನರು ಮನೆಯಿಂದ ಹೊರ ಬರುವುದನ್ನು ತಡೆಯುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆ ಒದಗಿಸುವುದನ್ನು ಉತ್ತೇಜಿಸಲಾಗುವುದು.

* ದೂರ ಸಂಪರ್ಕ, ಇಂಟರ್‌ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್‌ ಸೇವೆಗಳು ಲಭ್ಯವಾಗಲಿವೆ.

* ಐಟಿ ಮತ್ತು ಐಟಿಇಎಸ್ ಕಂಪೆನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿದ್ದು, ಇತರ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಬೇಕು.

* ಸ್ಥಳದಲ್ಲಿಯೇ ಕಾರ್ಮಿಕರು/ ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು/ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸಬಹುದು.

* ಅಗತ್ಯ ವಸ್ತುಗಳ ತಯಾರಿಕಾ ಘಟಕಗಳ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು.

* ನಿರಂತರ ಕಾರ್ಯನಿರ್ವಹಣೆಯ ಅಗತ್ಯವಿರುವ ತಯಾರಿಕಾ ಘಟಕಗಳಿಗೆ ಅನುಮತಿ ನೀಡಲಾಗುವುದು.

* ಸ್ಥಳದಲ್ಲಿಯೇ ಕಾರ್ಮಿಕರು, ಕೆಲಸಗಾರರನ್ನು ಹೊಂದಿರುವ ನಿರ್ಮಾಣ ಚಟುವಟಿಕೆಗಳಿಗೆ ಹಾಗೂ ರಸ್ತೆ ಕಾಮಗಾರಿಗಳಿಗೆ ಅನುಮತಿ ನೀಡಲಾಗುವುದು.

* ಅಂತ್ಯಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಪಾಲುಗೊಳ್ಳಲು ಅವಕಾಶ.

* ಮದುವೆ ಸಮಾರಂಭಗಳಲ್ಲಿ ಗರಿಷ್ಠ 50 ಜನರಿಗೆ ಅವಕಾಶ.

Donate Janashakthi Media

Leave a Reply

Your email address will not be published. Required fields are marked *