ಮೇಕೆದಾಟು ಅಣೆಕಟ್ಟೆ ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್‌ನಿಂದ ಪಾದಯಾತ್ರೆ

ಕನಕಪುರ: ಮೇಕೆದಾಟು ಅಣೆಕಟ್ಟೆ ಅನುಷ್ಠಾನಕ್ಕೆ ಆಗ್ರಹಿಸಿ ಪಾದಯಾತ್ರೆ ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಅದರ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ಜಲಾನಯನ ಪ್ರದೇಶ ಹಾಗೂ ಬೆಂಗಳೂರಿನ ಕಾಂಗ್ರೆಸ್ ಮುಖಂಡರ ಸಭೆಯನ್ನು ಡಿಸೆಂಬರ್‌ 13ರಂದು ಸಂಜೆ ಬೆಂಗಳೂರಿನಲ್ಲಿ ಕರೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಶಾಸಕರನ್ನು ಹೊರತುಪಡಿಸಿ ಪಕ್ಷದ ಮುಖಂಡರು ಈ ಭಾಗವಹಿಸಲಿದ್ದಾರೆ. ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳು, ಸಮನ್ವಯಕಾರರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಮುಖಂಡರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪಾದಯಾತ್ರೆಯಲ್ಲಿ ಭಾಗವಹಿಸುವವರು ಆನ್‌ಲೈನ್ ನಲ್ಲಿ ತಮ್ಮ ಫೋಟೋ ಸಮೇತ ಹೆಸರು ನೋಂದಣಿ ಮಾಡಿಸಬೇಕು. ಒಂದು ದಿನ, ಎರಡು ದಿನ, ಮೂರು ದಿನದಿಂದ ಪಾದಯಾತ್ರೆ ಮುಗಿಯುವವರೆಗೂ ಎಷ್ಟು ದಿನ ಬೇಕಾದರೂ ಅವರು ಪಾದಯಾತ್ರೆಯಲ್ಲಿ ಭಾಗವಹಿಸಬಹುದು. ಒಂದು ದಿನ ನಡೆಯುವವರಿಗೆ ಒಂದು, ಎರಡು ದಿನ ನಡೆಯುವವರಿಗೆ ಬೇರೆ, ಹತ್ತು ದಿನ ನಡೆಯುವವರಿಗೆ ಬೇರೆ – ಹೀಗೆ ಪಾದಯಾತ್ರೆಯಲ್ಲಿ ಭಾಗವಹಿಸುವವರಿಗೆ ಪಕ್ಷದಿಂದ ಸರ್ಟಿಫಿಕೇಟ್ ಕೊಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಕಾವೇರಿ ಜಲಾನಯನ ಪ್ರದೇಶದ ರೈತರು ಹಾಗೂ ಬೆಂಗಳೂರು ಜನರ ಹಿತದೃಷ್ಟಿಯಿಂದ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ಸಿಗೆ ಹೆಚ್ಚು ಸ್ಥಾನ

ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಒಗ್ಗಟ್ಟು ಪ್ರದರ್ಶಿಸಿದೆ. ನಾವು ನಿರೀಕ್ಷೆ ಮಾಡಿದ್ದಕ್ಕಿಂಥ ಹೆಚ್ಚಿನ ಸೀಟುಗಳನ್ನು ರಾಜ್ಯದಲ್ಲಿ ಗೆಲ್ಲಲಿದ್ದೇವೆ. ಹಿಂದಿನ ವಿಧಾನ ಪರಿಷತ್ ಚುನಾವಣೆಯಲ್ಲಿ ಕಳೆದುಕೊಂಡಿದ್ದ ಸೀಟುಗಳನ್ನೂ ಗೆಲ್ಲುವ ಸೂಚನೆ, ಸಾಧ್ಯತೆಗಳಿವೆ.‌ ಬಿಜೆಪಿಗೆ ಎಂತಹ ಪರಿಸ್ಥಿತಿ ಎದುರಾಗಿದೆ ಎಂದರೆ, ಯಡಿಯೂರಪ್ಪನವರು ಹತಾಶರಾಗಿ ಜೆಡಿಎಸ್ ಬೆಂಬಲ ಯಾಚಿಸುತ್ತಿದ್ದಾರೆ. ಬಿಜೆಪಿ ರಾಜ್ಯದಲ್ಲಿ ತನ್ನ ಶಕ್ತಿ ಕಳೆದುಕೊಂಡಿರುವುದಕ್ಕೆ ಇದು ಸಾಕ್ಷಿ.

ಅವರು ಬೆಂಬಲ ಕೇಳಬಾರದು ಅಂತ ಅಲ್ಲ. ಅದು ಅವರ ಹಕ್ಕು. ನಾವೂ ಪಕ್ಷಾತೀತವಾಗಿ ಬೆಂಬಲ ಕೇಳಿದ್ದೇವೆ. ಬಿಜೆಪಿ, ಜೆಡಿಎಸ್, ಪಕ್ಷೇತರರು ಎಲ್ಲರೂ ಕಾಂಗ್ರೆಸ್ ಬೆಂಬಲಿಸಿ ಎಂದಿದ್ದೇವೆ. ಆದರೆ ಯಡಿಯೂರಪ್ಪನವರು ಕಾಂಗ್ರೆಸ್ ಪಕ್ಷವನ್ನು ಧೂಳೀಪಟ ಮಾಡುತ್ತೇವೆ, 15 ವರ್ಷ ವಿರೋಧ ಪಕ್ಷದಲ್ಲೇ ಕೂರಿಸುತ್ತೇವೆ ಎಂದೆಲ್ಲ ಹೇಳಿದ್ದಾರೆ. ಹಾಗೆ ಹೇಳಿದವರು ಹೋಗಿ ಜೆಡಿಎಸ್ ಬೆಂಬಲ ಕೇಳಿದ್ದಾರೆ. ಇದು ಬಿಜೆಪಿ ದುಸ್ಥಿತಿ ಮತ್ತು ಶಕ್ತಿ ಕುಂದಿರುವುದನ್ನು ತೋರಿಸುತ್ತದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಕಾಂಗ್ರೆಸ್ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ. ಸರಕಾರದ ಯಂತ್ರ ದುರುಪಯೋಗ ಆಗಿರುವುದರಿಂದ ಒಂದೆರಡು ಕಡೆ ಹೆಚ್ಚು-ಕಮ್ಮಿ ಆಗಬಹುದು. ಆದರೂ ಕಾಂಗ್ರೆಸ್ಸಿಗೆ ಹೆಚ್ಚು ಸ್ಥಾನಗಳು ಬರಲಿವೆ ಎಂದರು.

Donate Janashakthi Media

Leave a Reply

Your email address will not be published. Required fields are marked *