3-4 ತಿಂಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ: ಸಚಿವ ಖಂಡ್ರೆ ಮಾಹಿತಿ

ಬೆಂಗಳೂರು: ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಆಡಳಿತಾವಧಿ ಪೂರ್ಣಗೊಂಡಿದ್ದು, ಮುಂದಿನ 3 ರಿಂದ 4 ತಿಂಗಳೊಳಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲವು ಗ್ರಾಮ ಪಂಚಾಯಿತಿಗಳ ವಿಲೀನ ಹಾಗೂ ಬದಲಾವಣೆ ಹಿನ್ನೆಲೆಯಲ್ಲಿ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆ ನಡೆಯುತ್ತಿದೆ. ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳಿಸಿ, ಮೀಸಲಾತಿ ಪಟ್ಟಿಯೊಂದಿಗೆ ರಾಜ್ಯ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದ ಬಳಿಕ 45 ದಿನಗಳೊಳಗೆ ಚುನಾವಣೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದರು.

ಇದನ್ನೂ ಓದಿ: ಎಸ್‌ಐಆರ್‌ಗೆ ಬೂತ್ ಮಟ್ಟದಲ್ಲಿ ತ್ವರಿತ ಹೆಲ್ಪ್‌ಡೆಸ್ಕ್ ಆರಂಭಿಸಿ: ನಾಗರಿಕ ಮತಕಾವಲು ಸಮಿತಿ ಆಗ್ರಹ

SIR ಕಾರಣದಿಂದ ವಿಳಂಬ

ರಾಜ್ಯದಲ್ಲಿ ಪ್ರಸ್ತುತ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯ ನಡೆಯುತ್ತಿದೆ. ಈ ಪ್ರಕ್ರಿಯೆಯಲ್ಲಿ ಸರ್ಕಾರಿ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಚುನಾವಣೆಗೆ ಹೆಚ್ಚುವರಿ ಸಮಯ ಬೇಕಾಗಿದೆ ಎಂದು ಸಚಿವರು ವಿವರಿಸಿದರು.

ಮನೆ ಬಾಗಿಲಿಗೆ ಇ-ಸ್ವತ್ತು

ಗ್ರಾಮೀಣ ಪ್ರದೇಶಗಳಲ್ಲಿ ಇ-ಸ್ವತ್ತು ಪಡೆಯುವಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ಗಮನಿಸಿ, SIR ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮನೆ ಬಾಗಿಲಿಗೆ ತೆರಳಿ ಇ-ಸ್ವತ್ತು ನೀಡುವ ಕಾರ್ಯಕ್ರಮ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಆದರೆ ಬಿ-ಖರಾಬು ಜಮೀನಿನಲ್ಲಿ ನಿರ್ಮಿಸಿರುವ ಲೇಔಟ್‌ಗಳಿಗೆ ಇ-ಸ್ವತ್ತು ನೀಡಲು ಕಾನೂನು ತೊಡಕುಗಳಿವೆ. ಈ ಕುರಿತು ಕಂದಾಯ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.

ಕೇಂದ್ರದ ಅನುದಾನ ಬಿಡುಗಡೆಗೆ ಒತ್ತಾಯ

15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಬರಬೇಕಿರುವ 2,186.20 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ಈಶ್ವರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು.

ತಾಂತ್ರಿಕ ಕಾರಣಗಳನ್ನು ನೀಡಿ ಅನುದಾನ ತಡೆಹಿಡಿಯುವುದು ಸರಿಯಲ್ಲ. ರಾಜ್ಯದ ಸಂಸದರು ಒಗ್ಗಟ್ಟಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದರು.

ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದನ್ನೂ ನೋಡಿ: ರಾಮ ಮಂದಿರ ಟ್ರಸ್ಟ್‌ ಹಗರಣ: ಭಕ್ತಿಯ ಹೆಸರಿನಲ್ಲಿ ಭ್ರಷ್ಟಾಚಾರ? ಹೊಣೆ ಹೊರುವರೇ ಮೋದಿ? MG ಹೆಗಡೆ | ಗುರುರಾಜ ದೇಸಾಯಿ

Donate Janashakthi Media

Leave a Reply

Your email address will not be published. Required fields are marked *