ಬೆಂಗಳೂರು: ವಿವಿಧ ಯೋಜನೆಗಳ ಅಡಿಯಲ್ಲಿ 2.30 ಲಕ್ಷ ಮನೆಗಳ ನಿರ್ಮಾಣವನ್ನು ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಅವರು ಬುಧವಾರ ಹೇಳಿದರು.
ಬಿಜೆಪಿ ಎಂಎಲ್ಸಿಗಳಾದ ಕೆ.ಎಸ್. ನವೀನ್ ಮತ್ತು ಎಸ್.ವಿ. ಸಂಕನೂರ್ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಬಸವ ವಸತಿ, ಡಾ. ಬಿ.ಆರ್. ಅಂಬೇಡ್ಕರ್ ನಿವಾಸ, ದೇವರಾಜ ಅರಸು ವಸತಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ 9.5 ಲಕ್ಷ ಮನೆಗಳನ್ನು ನಿರ್ಮಿಸಬೇಕಾಗಿದೆ ಎಂದು ಹೇಳಿದರು.
ಇದನ್ನು ಓದಿ :-ಕಲಬುರಗಿ| ಗುತ್ತಿಗೆದಾರರನ್ನು ಕಾಮಗಾರಿಗೆ ಸಂಬಂಧ ನಾಯಾಲಯ ವಿಚಾರಣೆ
2024-25ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ವಸತಿ ಯೋಜನೆಯಡಿ ಒಂದೇ ಒಂದು ಮನೆ ಹಂಚಿಕೆ ಮಾಡಿಲ್ಲ. 2024-25ನೇ ಸಾಲಿನಲ್ಲಿ ವಿವಿಧ ವಸತಿ ಯೋಜನೆಯಡಿ ಪ್ರಗತಿಯಲ್ಲಿರುವ ಮನೆಗಳನ್ನು ಒಳಗೊಂಡಂತೆ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ನಿರ್ಧಾರ ಮಾಡಲಾಗಿತ್ತು. ಈವರೆಗೂ 1,49,521 ಮನೆಗಳನ್ನ ಪೂರ್ಣಗೊಳಿಸಲಾಗಿದೆ.
ಕಾಮಗಾರಿ ಪೂರ್ಣಕ್ಕೆ 13,500 ಕೋಟಿ ರೂ.ಗಳಿಗೂ ಹೆಚ್ಚು ಅನುದಾನದ ಅಗತ್ಯವಿದೆ, ಹಂತ ಹಂತವಾಗಿ ನಿರ್ಮಾಣ ಕಾರ್ಯ ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುವುದು. ಮುಂದಿನ ಒಂದು ವರ್ಷದಲ್ಲಿ 2.30 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.
ವಿವಿಧ ವಸತಿ ಯೋಜನೆಯಡಿ ನೀಡಲಾಗುತ್ತಿರುವ ಸಹಾಯಧನ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆಯಿದೆ. ಸಿಎಂ ಬಳಿ ಈ ಬಗ್ಗೆ ಚರ್ಚೆ ಮಾಡಲಾಗಿದೆ. ವಸತಿ ಯೋಜನೆಯಡಿ ನೀಡಲಾಗುತ್ತಿರುವ 1.20 ಲಕ್ಷ ರೂ. ಸಹಾಯಧನ ಸಾಕಾಗುತ್ತಿಲ್ಲ. ಇದನ್ನ ಜಾಸ್ತಿ ಮಾಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ. ಸಾಮಾನ್ಯ ವರ್ಗಕ್ಕೆ 3 ಲಕ್ಷ ರೂ. ಮತ್ತು ಪರಿಶಿಷ್ಟ ಜಾತಿ-ಪಂಗಡಗಳಿಗೆ 2 ಲಕ್ಷ ರೂ. ಜಾಸ್ತಿ ಮಾಡಲು ಮನವಿ ಮಾಡಿದ್ದೇವೆ. ವಸತಿ ಯೋಜನೆ ಸಹಾಯಧನ ಹೆಚ್ಚಳ ಮಾಡುವ ಇಚ್ಛೆ ಸರ್ಕಾರಕ್ಕಿದೆ ಎಂದು ತಿಳಿಸಿದರು