25 ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದ ಮುಸ್ಲಿಂ ಅಂಗಡಿ ಮಾಲೀಕರಿಗೆ ಬೆದರಿಕೆ ಆರೋಪ; ಉತ್ತರಾಖಂಡದಲ್ಲಿ ಉದ್ವಿಗ್ನತೆ

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಸುಮಾರು 25 ವರ್ಷಗಳಿಂದ ವ್ಯಾಪಾರ ನಡೆಸುತ್ತಿರುವ ಮುಸ್ಲಿಂ ಅಂಗಡಿ ಮಾಲೀಕರೊಬ್ಬರಿಗೆ ಬೆದರಿಕೆ ಹಾಕಿ, ಅಂಗಡಿ ನಡೆಸದಂತೆ ತಡೆಹಿಡಿಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹಲವರು ಆಗ್ರಹಿಸಿದ್ದಾರೆ. ಮುಸ್ಲಿಂ

ಅಂಗಡಿ ಮಾಲೀಕರ ಆರೋಪದ ಪ್ರಕಾರ, ಜೂನ್ 18ರಂದು ಕೆಲವರು ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ್ದು, ಅಂಗಡಿಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೆ, ಕೋಮು ಪ್ರಚೋದನಕಾರಿ ಘೋಷಣೆಗಳನ್ನು ಕೂಗಿ, ಜೀವ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಅವರು ದೂರಿದ್ದಾರೆ.

ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಂಗಡಿ ಮಾಲೀಕರು ಆರೋಪಿಸಿದ್ದಾರೆ. ಬಳಿಕ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಭದ್ರತೆಯ ಭರವಸೆ ದೊರೆತ ಹಿನ್ನೆಲೆಯಲ್ಲಿ ಜುಲೈ 9ರಂದು ಮತ್ತೆ ಅಂಗಡಿ ತೆರೆದಿದ್ದಾಗಿ ಅವರು ತಿಳಿಸಿದ್ದಾರೆ.

ಆದರೆ, ಅಂಗಡಿ ಪುನರಾರಂಭಿಸಿದ ಕೆಲವೇ ಸಮಯದಲ್ಲಿ ಮತ್ತೆ ಕೆಲವರು ಬಂದು, “ಹಿಂದೂ ಪ್ರದೇಶದಲ್ಲಿ ಮುಸ್ಲಿಂ ಮಾಲೀಕತ್ವದ ಅಂಗಡಿ ನಡೆಸಲು ಅವಕಾಶ ನೀಡುವುದಿಲ್ಲ” ಎಂದು ಬೆದರಿಕೆ ಹಾಕಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇದರಿಂದ ತಮ್ಮ ಸುರಕ್ಷತೆಯ ದೃಷ್ಟಿಯಿಂದ ಮತ್ತೊಮ್ಮೆ ಅಂಗಡಿ ಮುಚ್ಚಬೇಕಾಯಿತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕೇರಳ ಬಜೆಟ್: ಭ್ರಷ್ಟಾಚಾರದ ಆರೋಪ, ಖಾಸಗೀಕರಣದ ದಾರಿ ಮತ್ತು ಅಭಿವೃದ್ಧಿ ಮಾದರಿಯ ಪ್ರಶ್ನೆಗಳು

ಘಟನೆಗೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಧಾರ್ಮಿಕ ಗುರುತಿನ ಆಧಾರದ ಮೇಲೆ ಹಲವು ದಶಕಗಳಿಂದ ವ್ಯಾಪಾರ ನಡೆಸುತ್ತಿರುವ ವ್ಯಕ್ತಿಯನ್ನು ವ್ಯಾಪಾರ ಮಾಡದಂತೆ ತಡೆಯುವುದು ಆತಂಕಕಾರಿ ಬೆಳವಣಿಗೆ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ಬಗ್ಗೆ ಉತ್ತರಾಖಂಡ ಪೊಲೀಸ್ ಹಾಗೂ ಡೆಹ್ರಾಡೂನ್ ಪೊಲೀಸ್ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಜಾಲತಾಣ ಬಳಕೆದಾರರು ಒತ್ತಾಯಿಸಿದ್ದಾರೆ. ಆದರೆ, ಈ ಆರೋಪಗಳಿಗೆ ಸಂಬಂಧಿಸಿದಂತೆ ಉತ್ತರಾಖಂಡ ಪೊಲೀಸ್ ಅಥವಾ ಡೆಹ್ರಾಡೂನ್ ಪೊಲೀಸ್ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ಇದನ್ನೂ ನೋಡಿ : “ಭೂಗಳ್ಳರ ಸರ್ಕಾರ!” ಜನಾಕ್ರೋಶ ಸಮಾವೇಶದಲ್ಲಿ ಜಿ.ಎನ್. ನಾಗರಾಜರ ಆಕ್ರೋಶ Janashakthi Media

Donate Janashakthi Media

Leave a Reply

Your email address will not be published. Required fields are marked *