ಕೋವಿಡ್-19 ಅಸಮರ್ಪಕ ನಿರ್ವಹಣೆ: ಕೇಂದ್ರ ಸರ್ಕಾರದ ವಿರುದ್ಧ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಟೀಕೆ

ಮಿಡ್‌ವೀಕ್‌ ಮ್ಯಾಟರ್ಸ್‌’ ನಲ್ಲಿ ಆಕ್ರೋಶ ಹೊರಹಾಕಿದ ಡಾ. ಪ್ರಭಾಕರ

ಕೋವಿಡ್‌-19 ಸಾಂಕ್ರಾಮಿಕ ನಿರ್ವಹಣೆಯ ವಿಚಾರವಾಗಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪತಿ, ಡಾ. ಪರಕಾಲ ಪ್ರಭಾಕರ ಅವರು ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.

ಕೋವಿಡ್‌-19 ನಿರ್ವಹಣೆ ಕುರಿತಂತೆ ಮೂರು ದಿನಗಳ ಅವರ ಅಧಿಕೃತ ಯೂಟ್ಯೂಬ್ ಖಾತೆ ‘ಮಿಡ್‌ವೀಕ್‌ ಮ್ಯಾಟರ್ಸ್‌’ ನಲ್ಲಿ ಮಾತನಾಡಿದ್ದಾರೆ. ಆ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಒಟ್ಟು ಒಂದು ಲಕ್ಷ ಮೂವತ್ತೆರಡು (1,32,000) ಜನ ವೀಕ್ಷಣೆ ಮಾಡಿದ್ದಾರೆ.

ಪ್ರಭಾಕರ್ ಅವರು, ‘ರಾಜಕೀಯ ನಾಯಕರು ಜನರ ಭಾವನೆಗಳಿಗೆ ಸ್ಪಂದಿಸುವ ಗುಣ ಕಳೆದು ಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಮಾತಿನ ವೈಖರಿ, ಚಾಣಾಕ್ಷ ನಡೆಗಳಿಂದ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಕೌಶಲ್ಯಗಳನ್ನು ಸಿದ್ಧಿಸಿಕೊಂಡಿದ್ದಾರೆ. ಹೊಣೆಗಾರಿಕೆ, ಪಾರದರ್ಶಕತೆಯನ್ನು ಕಾಯ್ದುಕೊಳ್ಳುವವರು ಭಾರತದ ಇತಿಹಾಸದಲ್ಲಿ ದಾಖಲಾಗುತ್ತಾರೆ. ಪ್ರಧಾನಿ ಮೋದಿ ಈಗಲಾದರೂ ಸೂಕ್ತವಾದುದನ್ನು ಆರಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಭಾರತದಲ್ಲಿ ಕೋವಿಡ್ ಲಸಿಕೆ ಉತ್ಪಾದನೆ ಮತ್ತು ಪೂರೈಕೆ ಪ್ರಮಾಣ ಹೇಗಿದೆ?

‘ನಮ್ಮ ರಾಜಕೀಯ ಮತ್ತು ಧಾರ್ಮಿಕ ಮುಖಂಡರು ಇದ್ಯಾವುದನ್ನೂ ತಲೆಗೆ ಹಾಕಿ ಕೊಂಡಂತಿಲ್ಲ. ರಾಜಕೀಯದವರಿಗೆ ಚುನಾವಣೆ ಮುಖ್ಯ. ಧಾರ್ಮಿಕ ಮುಖಂಡರಿಗೆ ತಮ್ಮ ಆಚರಣೆಗಳು ಮುಖ್ಯವೆನಿಸಿದೆ. ಚುನಾವಣಾ ರ‍್ಯಾಲಿ ಗಳಲ್ಲಿ ಪ್ರಧಾನಿ, ಕೇಂದ್ರ ಸಚಿವರು, ಪ್ರತಿಪಕ್ಷಗಳ ನಾಯಕರು ಭಾಗಿಯಾಗುತ್ತಾರೆ. ಕುಂಭಮೇಳದಲ್ಲಿ ಸಾವಿರಾರು ಜನ ಶಾಹಿಸ್ನಾನ ಮಾಡುತ್ತಾರೆ. ಸಿಪಿಐಎಂ ಮತ್ತು ಕಾಂಗ್ರೆಸ್ ಪಕ್ಷಗಳು ರ‍್ಯಾಲಿಗಳನ್ನು ರದ್ದುಪಡಿಸಿ ಜನರ ಬಗ್ಗೆ ಕಾಳಜಿ ತೋರಿಸಿದವು. ಆದರೆ ವಿವಿಧ ಪಕ್ಷಗಳ ಅಭ್ಯರ್ಥಿಗಳು ಕೋವಿಡ್‌ ನಡುವೆಯೇ ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದಲ್ಲಿ ಭಾಗಿಯಾದರು. ಚುನಾವಣಾ ರ‍್ಯಾಲಿ ಹಾಗೂ ಕುಂಭಮೇಳಗಳನ್ನು ಕೆಲವರು ಸಮರ್ಥಿಸಿಕೊಂಡರು. ಇದು ನಿಜಕ್ಕೂ ಬೇಸರದ ಸಂಗತಿ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಭಾರತವು ಈಗ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದೆ. ಕಳೆದ ಒಂದು ವಾರದ ವಿದ್ಯಮಾನಗಳನ್ನು ಗಮನಿಸಿದರೆ, ನಾವು ಎಂಥ ಪರಿಸ್ಥಿತಿ ಯಲ್ಲಿ ಇದ್ದೇವೆ, ಕೇಂದ್ರ ಸರ್ಕಾರದ ಸಿದ್ಧತೆ ಹೇಗಿದೆ, ರಾಜಕೀಯ ವ್ಯವಸ್ಥೆಯ ಹೊಣೆಗಾರಿಕೆ ಯಾವ ಮಟ್ಟದಲ್ಲಿದೆ ಎಂಬುದರ ಬಗ್ಗೆ ಚಿತ್ರಣ ಸಿಗುತ್ತದೆ ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ : “ವೈದ್ಯಲೋಕವೇ ಅಸಹಾಯಕ ಸ್ಥಿತಿಯಲ್ಲಿದೆ” ಕಣ್ಣೀರಿಟ್ಟ ವೈದ್ಯೆ

‘ಕಳೆದ ವರ್ಷ ಕೋವಿಡ್‌ಗೆ ಒಳಗಾದ ಕುಟುಂಬದ ಸದಸ್ಯನ ಚಿಕಿತ್ಸೆಗಾಗಿ ಅನೇಕರು ಜೀವಮಾನದ ಗಳಿಕೆಯನ್ನೆಲ್ಲಾ ವ್ಯಯಿಸಿದ್ದಾರೆ. ಎರಡನೇ ಅಲೆಯು ಇನ್ನಷ್ಟು ಭೀಕರವಾಗಿದೆ. ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲಿದೆ ಎಂದು ವೈದ್ಯರು ಹೇಳುತ್ತಿದ್ದಾರೆ. ಈಗಾಗಲೇ ಆಸ್ಪತ್ರೆಗಳ ಹೊರಗೆ ರೋಗಿಗಳು, ಅವರ ಸಂಬಂಧಿಕರ ಸಾಲುಗಟ್ಟಿ ನಿಂತಿದ್ದಾರೆ. ಸ್ಮಶಾನಗಳಲ್ಲಿ ಹೆಣ ಸುಡಲು ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಮನಕಲಕುತ್ತಿವೆ ಎಂದಿದ್ದಾರೆ.

‘ಎರಡನೇ ಅಲೆಯನ್ನು ಎದುರಿಸಲು ನಾವು ಸಿದ್ಧರಾಗಿಲ್ಲ ಎಂಬುದು ಸ್ಪಷ್ಟ. ‍ಲಸಿಕೆ ನೀಡಿಕೆಯಲ್ಲಿ ಹಿಂದೆ ಬೀಳುತ್ತಿದ್ದೇವೆ. ಸಿದ್ಧತೆಯ ಬಗ್ಗೆ ಏನೇ ಕೇಳಿದರೂ ಉತ್ತರಿಸುವ ಮನಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಇಲ್ಲ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನೀಡಿದ ಸಲಹೆಗಳಿಗೆ ಕೇಂದ್ರದ ಆರೋಗ್ಯ ಸಚಿವರಿಂದ ಅಸಡ್ಡೆಯ ಉತ್ತರ ಸಿಕ್ಕಿತು. ಸಮಸ್ಯೆ ಬಗ್ಗೆ ಆಳವಾಗಿ ಯೋಚಿಸದಿದ್ದರೆ ಹೀಗಾಗುತ್ತದೆ’ ಎಂದು ಪ್ರಭಾಕರ ಅವರು ಟೀಕಿಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *