ಬೆಂಗಳೂರು: ಭಾರತದ ರಾಷ್ಟ್ರೀಯ ಕಾನೂನು ಶಾಲೆ ವಿಶ್ವವಿದ್ಯಾಲಯ (ಎನ್ಎಲ್ಎಸ್ಐಯು) 2026ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗಾಗಿ ಸೆಪ್ಟೆಂಬರ್ 12ರಂದು ನಿಗದಿಯಾಗಿದ್ದ 34ನೇ ವಾರ್ಷಿಕ ಘಟಿಕೋತ್ಸವವನ್ನು ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಭಾರತೀಯ ವಕೀಲರ ಪರಿಷತ್ (ಬಿಸಿಐ) ಅಧ್ಯಕ್ಷ ಮಾನನ್ ಕುಮಾರ್ ಮಿಶ್ರಾ ಅವರನ್ನು ಘಟಿಕೋತ್ಸವಕ್ಕೆ ಆಹ್ವಾನಿಸಿರುವುದಕ್ಕೆ ವಿದ್ಯಾರ್ಥಿಗಳು ಹಾಗೂ ಹಳೆಯ ವಿದ್ಯಾರ್ಥಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ವಿಶ್ವವಿದ್ಯಾಲಯ ಈ ನಿರ್ಧಾರ ಕೈಗೊಂಡಿದೆ. ಸಿಜೆಐ
ಆಗಸ್ಟ್ 27ರಂದು ಹೊರಡಿಸಿರುವ ಪ್ರಕಟಣೆಯಲ್ಲಿ, “ತಪ್ಪಿಸಲಾಗದ ಪರಿಸ್ಥಿತಿಗಳಿಂದ” 34ನೇ ವಾರ್ಷಿಕ ಘಟಿಕೋತ್ಸವವನ್ನು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ವಿಶ್ವವಿದ್ಯಾಲಯ ತಿಳಿಸಿದೆ. ಈ ಹಿಂದೆ ಆಗಸ್ಟ್ 3ರಂದು ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಸೆಪ್ಟೆಂಬರ್ 12ರಂದು ನಡೆಯಲಿದೆ ಎಂದು ಮಾಹಿತಿ ನೀಡಲಾಗಿತ್ತು.
ಘಟಿಕೋತ್ಸವ ರದ್ದಾದರೂ 2026ನೇ ಸಾಲಿನ ವಿದ್ಯಾರ್ಥಿಗಳ ಪದವಿ ಪ್ರದಾನಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ. ವಿಶ್ವವಿದ್ಯಾಲಯದ ಆಡಳಿತ ಮಂಡಳಿಗಳ ಅಗತ್ಯ ಅನುಮೋದನೆ ಪಡೆದ ಬಳಿಕ ವಿದ್ಯಾರ್ಥಿಗಳಿಗೆ ಘಟಿಕೋತ್ಸವಕ್ಕೆ ಹಾಜರಾಗದೇ ಪದವಿ ಪ್ರದಾನ ಮಾಡುವ ಕ್ರಮ ಅನುಸರಿಸಲಾಗುವುದು ಎಂದು ಎನ್ಎಲ್ಎಸ್ಐಯು ತಿಳಿಸಿದೆ. ವಿದ್ಯಾರ್ಥಿಗಳು ಪ್ರಮಾಣಪತ್ರವನ್ನು ವಿಶ್ವವಿದ್ಯಾಲಯದಿಂದ ನೇರವಾಗಿ ಪಡೆದುಕೊಳ್ಳಬಹುದು ಅಥವಾ ಅಂಚೆ ಮೂಲಕ ಪಡೆಯುವ ಆಯ್ಕೆಯನ್ನು ನೀಡಲಾಗಿದೆ.
700ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳ ವಿರೋಧ
ಸಿಜೆಐ ಸೂರ್ಯಕಾಂತ್ ಮತ್ತು ಬಿಸಿಐ ಅಧ್ಯಕ್ಷ ಮಾನನ್ ಕುಮಾರ್ ಮಿಶ್ರಾ ಅವರ ಭಾಗವಹಿಸುವಿಕೆಗೆ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದರು. ಆಗಸ್ಟ್ 15ರಂದು ಹೊರಬಂದ ಹೇಳಿಕೆಗೆ 165 ಪದವಿ ವಿದ್ಯಾರ್ಥಿಗಳು, 409 ಹಾಲಿ ವಿದ್ಯಾರ್ಥಿಗಳು ಮತ್ತು 128 ಹಳೆಯ ವಿದ್ಯಾರ್ಥಿಗಳು ಸಹಿ ಹಾಕಿದ್ದರು.
ಹೈದರಾಬಾದ್ನ ನಲ್ಸಾರ್ ಕಾನೂನು ವಿಶ್ವವಿದ್ಯಾಲಯದ 2026ನೇ ಸಾಲಿನ ಪದವೀಧರರ ನೋಂದಣಿಗೆ ಬಿಸಿಐ ತಾತ್ಕಾಲಿಕವಾಗಿ ನಿರ್ಬಂಧ ಹೇರಿದ್ದ ಪ್ರಕರಣವೂ ಈ ವಿರೋಧಕ್ಕೆ ಪ್ರಮುಖ ಕಾರಣವಾಗಿತ್ತು. ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿನ ವಿಚಾರದಲ್ಲಿ ಬಿಸಿಐ ಕೈಗೊಂಡ ಕ್ರಮವನ್ನು ಪ್ರಶ್ನಿಸಲಾಗಿತ್ತು.
ನಲ್ಸಾರ್ ಪ್ರಕರಣದಲ್ಲಿ ಬಿಸಿಐ ರಾಜ್ಯ ವಕೀಲರ ಪರಿಷತ್ತುಗಳಿಗೆ 2026ನೇ ಸಾಲಿನ ಪದವೀಧರರನ್ನು ವಕೀಲರಾಗಿ ನೋಂದಾಯಿಸದಂತೆ ಸೂಚಿಸಿತ್ತು. ಬಳಿಕ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಸಿಐ ತನ್ನ ನಿರ್ಧಾರವನ್ನು ಹಿಂಪಡೆದು, ವಿದ್ಯಾರ್ಥಿಗಳು ತಮಗೆ ಇಷ್ಟವಾದ ರಾಜ್ಯ ವಕೀಲರ ಪರಿಷತ್ತಿನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶ ನೀಡಿತ್ತು.
ಇದನ್ನೂ ಓದಿ : ನವೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಆಕ್ಷೇಪ ಏನು?
ನಲ್ಸಾರ್ ವಿದ್ಯಾರ್ಥಿಗಳ ವಿರುದ್ಧ ಬಿಸಿಐ ಕೈಗೊಂಡ ಕ್ರಮವು ವಿದ್ಯಾರ್ಥಿಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರತಿಭಟನೆಯ ಹಕ್ಕಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಎನ್ಎಲ್ಎಸ್ಐಯು ವಿದ್ಯಾರ್ಥಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ಆಕ್ಷೇಪಿಸಿದ್ದರು. ಇದೇ ಹಿನ್ನೆಲೆಯಲ್ಲಿ ಸಿಜೆಐ ಸೂರ್ಯಕಾಂತ್ ಮತ್ತು ಬಿಸಿಐ ಅಧ್ಯಕ್ಷರನ್ನು ಘಟಿಕೋತ್ಸವಕ್ಕೆ ಆಹ್ವಾನಿಸಿರುವುದನ್ನು ಮರುಪರಿಶೀಲಿಸುವಂತೆ ಅವರು ವಿಶ್ವವಿದ್ಯಾಲಯವನ್ನು ಒತ್ತಾಯಿಸಿದ್ದರು.
ಈ ಬೆಳವಣಿಗೆಗೆ ಸಂಬಂಧಿಸಿದಂತೆ ಸಿಜೆಐ ಸೂರ್ಯಕಾಂತ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವೂ ಬಿಸಿಐ ಕ್ರಮವನ್ನು ಪ್ರಶ್ನಿಸಿತ್ತು. ವಿದ್ಯಾರ್ಥಿಗಳಿಗೆ ಪ್ರತಿಭಟಿಸುವ ಹಕ್ಕಿದೆ ಎಂದು ನ್ಯಾಯಾಲಯ ಹೇಳಿತ್ತು. ಸಿಜೆಐ ಸೂರ್ಯಕಾಂತ್ ಅವರು ವಿದ್ಯಾರ್ಥಿಗಳು ಮತ್ತು ತಮ್ಮ ನಡುವಿನ ವಿಚಾರದಲ್ಲಿ ಬಿಸಿಐ ಮಧ್ಯಪ್ರವೇಶಿಸುವ ಅಗತ್ಯವೇನು ಎಂದು ಪ್ರಶ್ನಿಸಿದ್ದರು.
ಇದೀಗ ವಿದ್ಯಾರ್ಥಿಗಳ ವಿರೋಧದ ನಡುವೆ ಬೆಂಗಳೂರಿನ ಎನ್ಎಲ್ಎಸ್ಐಯು ತನ್ನ ವಾರ್ಷಿಕ ಘಟಿಕೋತ್ಸವವನ್ನೇ ರದ್ದುಗೊಳಿಸಿರುವುದು ದೇಶದ ಪ್ರಮುಖ ಕಾನೂನು ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ವಿಶ್ವವಿದ್ಯಾಲಯದ ಸ್ವಾಯತ್ತತೆ ಕುರಿತ ಚರ್ಚೆಗೆ ಮತ್ತಷ್ಟು ಕಾರಣವಾಗಿದೆ.
ಇದನ್ನೂ ನೋಡಿ : ಬೀದಿ ವ್ಯಾಪಾರಿಗಳ ಬದುಕು ಕಟ್ಟಿಕೊಡುವವರು ಯಾರು? ಸುಪ್ರೀಂ ಕೋರ್ಟ್ ಹೇಳಿರುವುದು ಏನು? Janashakthi Media
