ಆಯೋಗದ ವರದಿ ಬಂದ ನಂತರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಿಗದಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎಗೆ ಮೀಸಲಾತಿ ನೀಡಿಕೆ ಸಂಬಂಧಿಸದಂತೆ ಹಿಂದುಳಿದ ವರ್ಗಗಳ ಆಯೋಗ ವರದಿ ನೀಡಿದ ನಂತರ ರಾಜ್ಯ ಸರ್ಕಾರ ಕಾನೂನು ಬದ್ದವಾಗಿ ಯಾರಿಗೂ ಅನ್ಯಾಯವಾಗದಂತೆ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನಸಭೆ ಕಪಾಲದ ಶೂನ್ಯವೇಳೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಸಂಬಂಧಿಸಿದ ವಿಚಾರವನ್ನು ಪ್ರಸ್ತಾಪಿಸಿದರು. ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಂಚಮಸಾಲಿ ಸಮುದಾಯ, ವಾಲ್ಮೀಕಿ ಸಮುದಾಯ, ಪರಿಶಿಷ್ಟ ಜಾತಿ/ಪಂಗಡ ಸೇರಿದಂತೆ ಅನೇಕ ಸಮುದಾಯಗಳು ಮೀಸಲಾತಿ ಹೆಚ್ಚಳದ ಬಗ್ಗೆ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ಏನೇ ಕ್ರಮಕೈಗೊಂಡರೂ ಅದು ಕಾನೂನು ಬದ್ದವಾಗಿರಬೇಕು. ಹಾಗಾಗಿ ಯಾರಿಗೂ ಕೂಡ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಬೇಕೆಂದು ಹಲವು ದಿನಗಳಿಂದ ಹೋರಾಟ ಮಾಡಲಾಗುತ್ತಿದೆ. ಇದು ತಪ್ಪು ಎಂದು ನಾನು ಹೇಳುವುದಿಲ್ಲ. ಆಯೋಗದವರು ಈಗಾಗಲೇ 10ರಿಂದ 12 ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದಾರೆ. ಇನ್ನು ಹಲವು ಜಿಲ್ಲೆಗಳಿಗೆ ಭೇಟಿ ಕೊಟ್ಟು ಮಾಹಿತಿಯನ್ನು ಸಂಗ್ರಹಿಸಬೇಕಾಗಿದೆ. ಆದಷ್ಟು ಶೀಘ್ರ ವರದಿ ಸಲ್ಲಿಸಬೇಕೆಂದು ಆಯೋಗಕ್ಕೆ ಈಗಾಗಲೇ ಸೂಚಿಸಲಾಗಿದೆ. ವರದಿ ಬಂದ ನಂತರ ಕ್ರಮವಹಿಸಲಾಗುವುದು. ವೈಜ್ಞಾನಿಕವಾಗಿ ಮಾಡಬೇಕಿರುವ ಕ್ರಮಗಳನ್ನು ಅನುಸರಿಸಬೇಕಿರುವುದರಿಂದ  ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದರು.

ಈ ಹಿಂದೆಯೂ ಮೀಸಲಾತಿ ಹೆಚ್ಚಳ ಬೇಡಿಕೆ ಬಂದಾಗ ಶೇ. 50ರಿಂದ 60ಕ್ಕೆ ಹೆಚ್ಚಳ ಮಾಡಬೇಕೆಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಯಿತು. ಆದರೆ ರಾಜ್ಯ ಸರ್ಕಾರ ನೀಡಿದ ದತ್ತಾಂಶಗಳು ಸರಿಯಿಲ್ಲವೆಂದು ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್ ಎರಡೂ ಅಂಗಗಳು ತಿರಸ್ಕಾರ ಮಾಡಿವೆ. ಪುನಃ ಇದು ಆಗದಂತೆ ಎಚ್ಚರಿಕೆಯ ಹೆಜ್ಜೆ ಇಡಬೇಕಾಗಿದೆ ಎಂದರು.

ಕರ್ನಾಟಕದಲ್ಲಿ ಪ್ರಸ್ತುತ ವಿವಿಧ ಸಮುದಾಯಗಳಿಗೆ ಶೇ. 50ರಷ್ಟು ಮೀಸಲಾತಿ ಪ್ರಮಾಣವಿದೆ. ಇಂದಿರಾ ಸಹನಿ ಪ್ರಕರಣದಲ್ಲಿ ಮೀಸಲಾತಿ ಶೇ. 50ರಷ್ಟು ಮೀರಬಾರದೆಂದು ಸುಪ್ರೀಂ ಕೋರ್ಟ್‍ನ ಸಾಂವಿಧಾನಿಕ ಪೀಠದ ತೀರ್ಪು ಇದೆ. ನಮ್ಮ ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಶೇ. 34ರಷ್ಟು ಮೀಸಲಾತಿ ಕೊಡಲಾಗಿದೆ. ಬೇರೆ ರಾಜ್ಯಗಳಲ್ಲಿ ಎಲ್ಲಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈಗ ಪ್ರತಿಯೊಂದು ಸಮುದಾಯ ಮೀಸಲಾತಿ ಬಗೆಗಿನ ಸಾಂವಿಧಾನಿಕ ಸೌಲಭ್ಯಗಳ ಬಗ್ಗೆ ಅರಿತುಕೊಂಡಿವೆ. ಹೀಗಾಗಿ ಎಸ್ಸಿ-ಎಸ್ಟಿಯವರು ಮೀಸಲಾತಿ ಹೆಚ್ಚಳ, ವಾಲ್ಮೀಕಿ ಸಮುದಾಯ, ಹಾಲುಮತ ಸಮುದಾಯದವರು 2ಎ, ಪ್ರವರ್ಗ-1ರಲ್ಲಿ ಇರುವವರು ಎಸಿ, ಮರಾಠ, ಕ್ಷತ್ರೀಯದವರು 2ಎ, 3ಬಿನಲ್ಲಿರುವವರು ಹಿಂದುಳಿದ ವರ್ಗಕ್ಕೆ ಕೇಳುತ್ತಿದ್ದಾರೆ. ಯಾವುದೇ ವರ್ಗಕ್ಕೆ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ಕಾನೂನು ಕ್ರಮಗಳಿವೆ. ಸುಪ್ರೀಂಕೋರ್ಟ್ ಈ ಬಗ್ಗೆ ಹಲವಾರು ಬಾರಿ ಅನೇಕ ತೀರ್ಪುಗಳನ್ನು ನೀಡಿದೆ. ಅವಕಾಶ ವಂಚಿತರು, ಶೈಕ್ಷಣಿಕವಾಗಿ ಹಿಂದುಳಿದ ಸಮಾಜಕ್ಕೆ ಮೀಸಲಾತಿ ನೀಡಬೇಕು ಎಂಬ ಅಭಿಪ್ರಾಯಗಳಿವೆ.

ಪಂಚಮಸಾಲಿ ಸಮುದಾಯದ ಮೀಸಲಾತಿ ಸಂಬಂಧ ಎರಡು ಸಮಿತಿಗಳ ಶಿಫಾರಸ್ಸು ನಮ್ಮ ಮುಂದಿದೆ. ಇದರ ನಡುವೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೂ ವರದಿ ನೀಡುವಂತೆ ಸೂಚಿಸಿದ್ದೇವೆ. ಇದು ಸೂಕ್ಷ್ಮ ವಿಷಯ. ಕಾನೂನು ಚೌಕಟ್ಟಿನೊಳಗೆ ಅಂಕಿಸಂಖ್ಯೆಗಳ ಆಧಾರದ ಮೇಲೆ ತೀರ್ಮಾನ ಕೈಗೊಳ್ಳಬೇಕು, ಯಾವುದೇ ಸಮುದಾಯಕ್ಕೂ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು. ಹೀಗಾಗಿ ಸರ್ಕಾರ ಆತುರವಾಗಿ ಯಾವುದೇ ನಿರ್ಧಾರ ಕೈಗೊಳ್ಳದೆ ಎಚ್ಚರಿಕೆಯಿಂದ ತೀರ್ಮಾನಿಸಬೇಕಿದೆ ಎಂದರು.

Donate Janashakthi Media

Leave a Reply

Your email address will not be published. Required fields are marked *