ಪೆಗಾಸಸ್ ಬೇಹುಗಾರಿಕೆ ಪ್ರಕರಣ: ನಾಳೆ ಸುಪ್ರೀಂ ಕೋರ್ಟ್​ನಿಂದ ತೀರ್ಪು ಪ್ರಕಟಣೆ

ನವದೆಹಲಿ: ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪೆಗಾಸಸ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ನಾಳೆ (ಅಕ್ಟೋಬರ್‌ 27ರಂದು) ತೀರ್ಪು ಪ್ರಕಟಿಸಲಿದೆ.

ಸರ್ಕಾರಿ ಏಜೆನ್ಸಿಗಳಿಂದ ಅನಧಿಕೃತವಾಗಿ ಫೋನ್ ಕದ್ದಾಲಿಕೆ ಮಾಡಲು ಪೆಗಾಸಸ್ ಬೇಹುಗಾರಿಕೆ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಆರೋಪ ಮಾಡಿದ್ದವು. ಈ ಹಿನ್ನೆಲೆಯಲ್ಲಿ ತನಿಖೆ ಮಾಡಲು ತಾಂತ್ರಿಕ ತಜ್ಞರ ಸಮಿತಿಯನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 23ರಂದು ಹೇಳಿತ್ತು. ಆ ಸಮಿತಿಯ ರಚನೆ ಕುರಿತು ಶೀಘ್ರದಲ್ಲೇ ಆದೇಶ ಹೊರಡಿಸುವುದಾಗಿಯೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ತಿಳಿಸಿದ್ದರು.

ಇಸ್ರೇಲಿ ಸಂಸ್ಥೆ ಎನ್‌ಎಸ್‌ಒ ಗ್ರೂಪ್ ಅಭಿವೃದ್ಧಿಪಡಿಸಿದ ಪೆಗಾಸಸ್ ಎಂಬ ಬೇಹುಗಾರಿಕೆ ತಂತ್ರಾಂಶವನ್ನು ಬಳಸಿ ಭಾರತದ ಹಲವಾರು ಪ್ರಮುಖರ ಫೋನ್‌ಗಳನ್ನು ಕದ್ದಾಲಿಕೆ ಮಾಡಲಾಗಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಸಲು ಸಮಿತಿಯನ್ನು ಸ್ಥಾಪಿಸಲು ಅನುಮತಿ ನೀಡುವಂತೆ ಕೇಂದ್ರವು ಈ ಹಿಂದೆ ನ್ಯಾಯಾಲಯವನ್ನು ಕೋರಿತ್ತು.

ಸೆಪ್ಟೆಂಬರ್ 13ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಈ ಪ್ರಕರಣದಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಯನ್ನು ಕೋರಿ ಸಲ್ಲಿಸಿದ ಅರ್ಜಿಗಳ ಬಗೆಗಿನ ಆದೇಶವನ್ನು ಕಾಯ್ದಿರಿಸಿತ್ತು.

Donate Janashakthi Media

Leave a Reply

Your email address will not be published. Required fields are marked *