ಬೆಂಗಳೂರು-ಮೈಸೂರು ಅಭಿವೃದ್ದಿ ಜೊತೆ ಕಲ್ಯಾಣ ಕರ್ನಾಟಕ ಭಾಗವನ್ನು ಅಭಿವೃದ್ಧಿ ಮಾಡಿ – ಮಲ್ಲಿಕಾರ್ಜುನ ಖರ್ಗೆ

ಯಾದಗಿರಿ: ನಮ್ಮ ಸರ್ಕಾರವು ಬೆಂಗಳೂರನ್ನು ಸಿಂಗಾಪುರ ಮಾಡುವತ್ತ ಹೆಜ್ಜೆ ಇಟ್ಟಿರುವುದು ಸಂತೋಷದ ವಿಚಾರ. ಆದರೆ, ಕಲ್ಯಾಣ ಕರ್ನಾಟಕ ಭಾಗವನ್ನು ಬೆಂಗಳೂರು-ಮೈಸೂರು ಮಾದರಿಯಲ್ಲಿ ಅಭಿವೃದ್ದಿ ಮಾಡಿದರೆ ಇಲ್ಲಿನ ಜನ ರಾಜ್ಯ ಸರ್ಕಾರಕ್ಕೆ ಚಿರಋುಣಿಯಾಗಿರುತ್ತಾರೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಜೂನ್‌ 14 ಶನಿವಾರದಂದು ಹೇಳಿದರು. ಬೆಂಗಳೂರು

ಯಾದಗಿರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ‘ಆರೋಗ್ಯ ಅವಿಷ್ಕಾರ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಿದ್ದರಾಮಯ್ಯನವರ ಮೈಸೂರು ಮತ್ತು ಡಿ.ಕೆ.ಶಿವಕುಮಾರ್‌ ಅವರ ಬೆಂಗಳೂರಿನಂತೆ ಈ ಪ್ರದೇಶದ ಅಭಿವೃದ್ಧಿ ಮಾಡಿದರೆ ಜನ ನಿಮ್ಮನ್ನು ಮರೆಯಲ್ಲ ಎಂದು ವೇದಿಕೆ ಮೇಲಿದ್ದ ಸಿಎಂ., ಡಿಸಿಎಂಗೆ ಅವರು ಸಲಹೆ ನೀಡಿದರು.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5,000 ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 2025-26ನೇ ಸಾಲಿಗೆ 5,000 ಕೋಟಿ ರೂ. ಅನುದಾನ ನೀಡಿದ್ದಾರೆ. ಅಷ್ಟೂ ಹಣವನ್ನು ಇದೇ ವರ್ಷದಲ್ಲಿ ಖರ್ಚು ಮಾಡುವ ಮೂಲಕ ಈ ಪ್ರದೇಶದ ಜನರ ಅಭ್ಯುದಯಕ್ಕೆ ಶ್ರಮಿಸಬೇಕು. ಇಂದಿಲ್ಲಿ ಚಾಲನೆ ನೀಡಿದ ಎಲ್ಲಾ ಕೆಲಸಗಳನ್ನು ಇದೇ ವರ್ಷದಲ್ಲಿ ಪೂರ್ಣಗೊಳಿಸಿ. ಮುಂದಿನ ವರ್ಷ ಮತ್ತೆ ಹೊಸ ಯೋಜನೆಗಳತ್ತ ಮುಂದಾಗಿ ಎಂದು ಸಲಹೆ ನೀಡಿದರು.

ಈ ಭಾಗದಲ್ಲಿ ಶಿಕ್ಷಕರ ಕೊರತೆ ಇದೆ. ಹೀಗಾಗಿ, ಇಲ್ಲಿನ ಶಿಕ್ಷಣ ವ್ಯವಸ್ಥೆ, ಗುಣಮಟ್ಟ ಕುಂಠಿತವಾಗಿದೆ. ಗಣಿತ, ವಿಜ್ಞಾನ, ಆಂಗ್ಲ ಶಿಕ್ಷಕರ ಕೊರತೆ ಹೆಚ್ಚಿದೆ. ಬೇರೆ ಪ್ರದೇಶದಿಂದ ಇಲ್ಲಿಗೆ ನೇಮಕವಾಗುವ ಶಿಕ್ಷಕರು ಒಂದೇ ವರ್ಷದಲ್ಲಿ ವರ್ಗಾವಣೆ ಮಾಡಿಕೊಂಡು ಹೋಗುವ ದುಃಸ್ಥಿತಿ ಇಲ್ಲಿದೆ. ಪರಿಣಾಮ ಎಸ್.ಎಸ್.ಎಲ್.ಸಿ, ಪಿ.ಯು.ಸಿಯಲ್ಲಿ ಈ ಪ್ರದೇಶದ ಜಿಲ್ಲೆಗಳನ್ನು ರ‍್ಯಾಂಕ್ ಪಟ್ಟಿಯಲ್ಲಿ ಕೆಳಗಿನಿಂದ ನೋಡಬೇಕಾದ ಅನಿವಾರ್ಯತೆ ಇದೆ.

ಈ ಭಾಗದಲ್ಲಿ ಉದ್ಯೋಗ ನೇಮಕಾತಿಗೆ 371ಜೆ ಕಾಯ್ದೆಯಲ್ಲಿ ಹಣಕಾಸು ಇಲಾಖೆ ಅನುಮೋದನೆ ಪಡೆಯುವ ಅವಶ್ಯಕತೆ ಇಲ್ಲ. ಹೀಗಾಗಿ, ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಿ ಸ್ಥಳೀಯರಿಗೆ ಉದ್ಯೋಗ ನೀಡುವತ್ತ ಗಮನ ಹರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಅವರು ಆಗ್ರಹಿಸಿದರು.

ಇದನ್ನೂ ನೋಡಿ: ವಚನಾನುಭವ 29| ಜೀವನದಲ್ಲಿ ಸಜ್ಜನವೇ ಮಜ್ಜನ Janashakthi Media

Donate Janashakthi Media

Leave a Reply

Your email address will not be published. Required fields are marked *