ಕೋವಿಡ್‌ ಪರಿಸ್ಥಿತಿ: ಆರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಂವಾದ

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರಂಗದ ಪ್ರಕರಣಗಳ ಪರಿಸ್ಥಿತಿ ಮತ್ತು ಲಸಿಕೆ ವಿಚಾರಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಸೇರಿ ಆರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂವಾದ ಮೂಲಕ ಸಭೆಯನ್ನು ನಡೆಸಿದ್ದಾರೆ.

ಪ್ರಧಾನಮಂತ್ರಿಗಳ ನಡೆಸುತ್ತಿರುವ ಸಂವಾದದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಪಾಲ್ಗೊಂಡರು. ಕೇಂದ್ರ ಸರಕಾರದ ಪರವಾಗಿ ಗೃಹ ಸಚಿವ ಅಮೀತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಅವರು ಭಾಗವಹಿಸಿದ್ದರು.

ಇದನ್ನು ಓದಿ: ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ: ದೇಶದ 10 ರಾಜ್ಯಗಳಿಗೆ ಕೇಂದ್ರದ ತಂಡ ಭೇಟಿ

ಸಭೆಯಲ್ಲಿ ಪ್ರಮುಖವಾಗಿ ರಾಜ್ಯದಲ್ಲಿ ಕೈಗೊಳ್ಳಲಾಗುತ್ತಿವ ಕೋವಿಡ್‌ ಸಂಬಂಧಿ ಕೆಲಸಗಳ ಬಗ್ಗೆ, ರೋಗ ಪತ್ತೆ, ರೋಗಿಗಳ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯ ಮತ್ತು ಆರೈಕೆ ಒಳಗೊಂಡು ಕೋವಿಡ್‌ ಲಸಿಕೆಗಳ ಅಭಿಯಾನಗಳ ಬಗ್ಗೆ ಸಮಗ್ರವಾಗಿ ಚರ್ಚಸಲಾಗಿದೆ. 4 ಪ್ರಮುಖ ಗುರಿ ಹಾಗೂ ಅಂಶಗಳನ್ನು ಇಟ್ಟುಕೊಂಡು ನಾವು ಕೋವಿಡ್‌ ತಡೆಯಲು ಮುಂದಾಗಲು ಪ್ರಧಾನಿ ಕರೆ ನೀಡಿದ್ದಾರೆ.

ಕಳೆದ ಕೆಲ ದಿನಗಳಿಂದ ಈ ಆರು ರಾಜ್ಯಗಳಲ್ಲಿ ಶೇ.80ರಷ್ಟು ಹೊಸ ಪ್ರಕರಣಗಳು ಕಂಡುಬರುತ್ತಿವೆ. ಈ ಹಿನ್ನೆಲೆಯಲ್ಲಿ ಮೂರನೇ ಅಲೆ ತಡೆಯಲು ರಾಜ್ಯಗಳು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ಪ್ರತಿಪಾದಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕೋವಿಡ್ ಪರಿಸ್ಥಿತಿ ಹಾಗೂ ಲಸಿಕೆ ಅಭಿಯಾನದ ಕುರಿತು ಮಾಹಿತಿ ಪಡೆದುಕೊಂಡರು. ಲಾಕ್​​ಡೌನ್ ಸಡಿಲಿಕೆ ಬಳಿಕ ಕೆಲವೆಡೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಮಾರುಕಟ್ಟೆ, ಪ್ರವಾಸಿ ತಾಣಗಳಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ ಈ ಬಗ್ಗೆ ಸೂಕ್ಯವಾದ ಕ್ರಮಗಳನ್ನು ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರಮೋದಿ ಸೂಚನೆ ನೀಡಿದ್ದಾರೆ.

ನಗರ ಮತ್ತು ಪಟ್ಟಣಗಳಲ್ಲಿ ಸಂಚರಿಸುವವರು ಮಾಸ್ಕ್‌ನೊಂದಿಗೆ ಸಾಮಾಜಿಕ ಅಂತರದ ಬಗ್ಗೆಯೂ ಇನ್ನೂ ಹೆಚ್ಚಿನ ಜಾಗೃತಿಯ ಅವಶ್ಯಕತೆ ಇದೆ. ಕೋವಿಡ್ ಇನ್ನೂ ಮುಗಿದಿಲ್ಲ ಎಂಬುದನ್ನು ಜನರಿಗೆ ಅಧಿಕಾರಿಗಳು ಮನವರಿಕೆ ಮಾಡಲು ಮುಂದಾಗಬೇಕೆಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು. ಕೋವಿಡ್ ಉಸ್ತುವಾರಿ ನಿರ್ವಹಿಸುತ್ತಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ್, ಸಚಿವರಾದಾರ್‌ ಅಶೋಕ್, ಡಾ. ಸುಧಾಕರ್ ಡಿ., ಅರವಿಂದ ಲಿಂಬಾವಳಿ, ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್‌ ನಿವಾರಣೆಗಾಗಿ ಹೊಸದಾಗಿ ತೀವ್ರ ನಿಗಾ ಘಟಕ (ಐಸಿಯು) ಹಾಸಿಗೆಗಳ ವ್ಯವಸ್ಥೆ, ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಮತ್ತು ಇನ್ನಿತರೆ ಪ್ರಮುಖ ಅಗತ್ಯ ಸೌಲಭ್ಯಗಳನ್ನು ಕೈಗೊಳ್ಳಲು ಎಲ್ಲಾ ರಾಜ್ಯಗಳಿಗೆ ಹಣವನ್ನು ಬಿಡುಗಡೆಗೊಳಿಸಲಾಗುವುದು ಎಂದು ಪ್ರಧಾನಿ ಭರವಸೆ ನೀಡಿದರು.

ಇತ್ತೀಚೆಗೆ, ಕೇಂದ್ರ ಸರ್ಕಾರ ₹ 23,000 ಕೋಟಿಗೂ ಹೆಚ್ಚು ತುರ್ತು ಕೋವಿಡ್ -19 ಪ್ಯಾಕೇಜ್ ಬಿಡುಗಡೆ ಮಾಡಿದೆ ಎಂದು ಮೋದಿ ಗಮನಸೆಳೆದರು.

Donate Janashakthi Media

Leave a Reply

Your email address will not be published. Required fields are marked *