ಪೋಕ್ಸೋ ಪ್ರಕರಣಗಳ ವಿಚಾರಣೆಗೆ ಎಲ್ಲಾ ಜಿಲ್ಲೆಗಳಲ್ಲೂ ನ್ಯಾಯಾಲಯಗಳ ಸ್ಥಾಪನೆ

ಬೆಳಗಾವಿ: ಫೋಕ್ಸೋ ಕಾಯ್ದೆ ಅನ್ವಯ ಮಕ್ಕಳ ಮೇಲಿನ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ವಿರುದ್ಧ ದಾಖಲಾಗುವ ಪ್ರಕರಣಗಳ ತ್ವರಿತ ವಿಚಾರಣೆಯನ್ನು ನಡೆಸಲು ಈಗಾಗಲೇ ಪ್ರತಿ ಜಿಲ್ಲೆಗೊಂದು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಉತ್ತರಿಸಿದರು.

ಬೆಳಗಾವಿಯ ಸುವರ್ಣ ಸೌಧದಲ್ಲಿ  ವಿಧಾನಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತರ ವೇಳೆ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಈ ಬಗ್ಗೆ ಪ್ರಶ್ನೆ ಮಾಡಿದರು. ಸಚಿವರು ಉತ್ತರ ನೀಡಿ, ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪೊಕ್ಸೋ ಕಾಯ್ದೆಯನ್ನು ಅನುಷ್ಠಾನ ಮಾಡಲಾಗುತ್ತಿದೆ. ಈ ಪ್ರಕರಣಗಳಲ್ಲಿ ನೊಂದವರ ಪರವಾಗಿ ನ್ಯಾಯಾಲಯಗಳಲ್ಲಿ ಸಮರ್ಥವಾಗಿ ವಾದ ಮಂಡಿಸಲು ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಲಾಗಿದೆ ಎಂದರು.

ಇದನ್ನು ಓದಿ: ಕಿತ್ತೂರು ಕೋಟೆ ಪುನರ್ ನಿರ್ಮಾಣಕ್ಕೆ ಕ್ರಮ – ಬಸವರಾಜ ಬೊಮ್ಮಾಯಿ

ಪೊಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಜಾಮೀನು ಸಿಗುವುದಿಲ್ಲ. ಬಿಡುಗಡೆಯೂ ಕಡಿಮೆ. ಶಿಕ್ಷೆ ಪ್ರಮಾಣ ಹೆಚ್ಚು. ಪರಿಚಿತರಿಂದ ಮಕ್ಕಳ ಮೇಲೆ ದೌರ್ಜನ್ಯ ನಡೆಯುವುದು ಹೆಚ್ಚಾಗುತ್ತಿದೆ. ಪೊಲೀಸ್ ಇಲಾಖೆಯಿಂದ ಸಾಮಾಜಿಕ ಜಾಗೃತಿ ಮೂಡಿಸಲಾಗುವುದು. ಮಹಿಳಾ ಸಹಾಯವಾಣಿ, ಮಕ್ಕಳ ಸಹಾಯವಾಣಿ, ಸ್ಪಂದನಾ ಸಹಾಯವಾಣಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಪೊಲೀಸರ ಗಸ್ತು ಪ್ರಮಾಣ ಹೆಚ್ಚಳ ಮಾಡಲಾಗಿದೆ. ದಾಖಲಾಗುವ ಪ್ರಕರಣಗಳ ಕುರಿತಂತೆ ವಿಳಂಬ ಮಾಡದೇ ಚಾರ್ಜ್‍ಶೀಟ್ ಸಲ್ಲಿಸಲು ಸೂಚಿಸಲಾಗಿದೆ.

ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಕೆಎಸ್‍ಆರ್‌ಪಿಯಿಂದ ವತಿಯಿಂದ ಕರಾಟೆ ತರಬೇತಿಗಳನ್ನು ನೀಡಲಾಗುತ್ತಿದೆ. ಚೆನ್ನಮ ಪಡೆ, ಓಬವ್ವ ಪಡೆ, ಶರವಾತಿ ಪಡೆ ಹೆಸರಲ್ಲಿ ಕರಾಟೆ ತರಬೇತಿ ನೀಡಲಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ 2019- 20ನೇ ಸಾಲಿನಲ್ಲಿ 700 ಲಕ್ಷ ರೂ.ಗಳು ಮತ್ತು 2020-21 ರಲ್ಲಿ 100 ಲಕ್ಷಗಳ ಅನುದಾನವನ್ನು ನಿರ್ಭಯ ಯೋಜನೆಯಡಿ ಬಿಡುಗಡೆ ಮಾಡಿದ್ದು, ಸದರಿ ಅನುದಾನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ 800 ಪೊಲೀಸ್ ಠಾಣೆಗಳಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮುಂದುವರೆದು ಸದರಿ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ 250 ಲಕ್ಷ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *