ಗುವಾಹಟಿ: ಏಪ್ರಿಲ್ 13 ಭಾನುವಾರದಂದು ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಅಸ್ಸಾಂನ ಕ್ಯಾಚರ್ ಜಿಲ್ಲೆಯ ಸಿಲ್ಚಾರ್ ಪಟ್ಟಣದಲ್ಲಿ ನಡೆದ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆದಿದ್ದು, ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಲಾಠಿ ಪ್ರಹಾರ ನಡೆಸಿವೆ. ಗುವಾಹಟಿ
“ಕೆಲವು ಪ್ರತಿಭಟನಾಕಾರರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಕನಿಷ್ಠ ಬಲಪ್ರಯೋಗ ಮಾಡಿದವು” ಎಂದು ಕ್ಯಾಚರ್ ಎಸ್ಪಿ ನೋಮಲ್ ಮಹಾಟ್ಟಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ತಕ್ಷಣ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು. ಆದರೆ ಕಾನೂನು ಕೈಗೆತ್ತಿಕೊಳ್ಳಲು ಯತ್ನಿಸಿದ ಕೆಲವು ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಲ್ಲು ತೂರಾಟದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಭೋವಿ ಅಭಿವೃದ್ಧಿ ನಿಗಮ ಹಗರಣ: ನಿರ್ದೇಶಕಿ ಲೀಲಾವತಿ ಬಂಧನ
ಅಸ್ಸಾಂನಲ್ಲಿ ಸುಮಾರು ಶೇ 40ರಷ್ಟು ಮುಸ್ಲಿಂ ಜನಸಂಖ್ಯೆ ಇದ್ದರೂ, ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಯಾವುದೇ ಪ್ರತಿಭಟನೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಸಿಲ್ಚಾರ್ನಲ್ಲಿ ಭಾನುವಾರ ನಡೆದ ಪ್ರತಿಭಟನೆಗಳನ್ನು ಖಂಡಿಸಿದ ಶರ್ಮಾ, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ನಿಷೇಧಾಜ್ಞೆ ಜಾರಿ:
ಘಟನೆಯ ಬಳಿಕ ಹಿಂಸಾಚಾರವನ್ನು ತಡೆಗಟ್ಟುವ ಪ್ರಯತ್ನದ ಭಾಗವಾಗಿ, ಕ್ಯಾಚರ್ ಜಿಲ್ಲಾ ಆಯುಕ್ತ ಮೃದುಲ್ ಯಾದವ್, ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ, ಪೂರ್ವಾನುಮತಿ ಇಲ್ಲದೇ 5 ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳು ಸೇರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಇದನ್ನೂ ನೋಡಿ: ಸಾಮಾನ್ಯರ ಜೇಬಿಗೆ ಕನ್ನ, ಶ್ರೀಮಂತರಿಗೆ ಮೃಷ್ಟಾನ್ನ Janashakthi Media