ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಆಗ್ರಹ

ಬೆಂಗಳೂರು: ಹೊಸ ಸರಕಾರವು ಶಿಕ್ಷಣ ಹಕ್ಕು ಕಾಯಿದೆ ಮತ್ತು ಸಂವಿಧಾನದ ಆಶಯಗಳ ಅನ್ವಯ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಎಲ್ಲ ಬಗೆಯ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳಬೇಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಆಗ್ರಹಿಸಿದೆ.

ಸಂಘಟನೆಯ ಮಹಾಪೋಷಕರಾದ ನಿರಂಜನಾರಾಧ್ಯ ವಿ.ಪಿ,  ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು, ಶಿಕ್ಷಣ ಕ್ಷೇತ್ರವನ್ನು ಬಲಪಡಿಸಲು ರಾಜ್ಯ ಸರಕಾರ ಯೋಜನೆಗಳನ್ನು ರೂಪಿಸಬೇಕು. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಹಣ, ಸೌಲಭ್ಯ ನೀಡುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಬಲಪಡಿಸಬೇಕು ಎಂದು ಆಗ್ರಹಿಸಿದ್ದಾರೆ.  ಜೊತೆಗೆ ಈ ಹಕ್ಕೊತ್ತಾಯಗಳನ್ನು ರಾಜ್ಯ ಸರಕಾರ ಜಾರಿ ಮಾಡಲು ಮುಂದಾಗಬೇಕು ಎಂದಿದ್ದಾರೆ.

ಹಕ್ಕೊತ್ತಾಯಗಳು

• ಈಗಾಗಲೇ ಮುದ್ರವಾಗಿ ಬಿಇಒ ಕಚೇರಿಗಳನ್ನು/ಶಾಲೆಗಳಿಗೆ ತಲುಪಿರುವ ಕಲುಷಿತ ಪುಸ್ತಕಗಳನ್ನು ಯಥಾವತ್ತಾಗಿ ಮಕ್ಕಳಿಗೆ ವಿತರಿಸದಿರಲು ಸ್ಪಷ್ಟ ಸೂಚನೆಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನೀಡಬೇಕು. ಈ ಪಠ್ಯಪುಸ್ತಕಗಳಲ್ಲಿ ಬದಲಾಗಿದ್ದ ಪ್ರಮುಖ ಪಾಠಗಳನ್ನು ಮತ್ತು ಕಲಿಕಾಂಶಗಳನ್ನು ಈ ಪುಸ್ತಕಗಳಿಂದ ತೆಗೆದು ಹಾಕಿ ವಿತರಿಸಲು ಅಯಾ ವ್ಯಾಪ್ತಿಯ ಸಿ ಆರ್ ಪಿ ಮತ್ತು ಶಾಲೆಯ ಶಿಕ್ಷಕರನ್ನು ಹೊಣೆ ಮಾಡಬೇಕು.

• ಜೊತೆಗೆ, ಈ ವಿಷಯಗಳನ್ನು ಕಲಿಕೆ ಮತ್ತು ಮೌಲ್ಯಮಾಪನದಿಂದ ಕೈಬಿಡಲು ಸ್ಪಷ್ಟ ಸೂಚನೆ ನೀಡಬೇಕು . ಜೊತೆಗೆ , ಶಿಕ್ಷಣ ಹಕ್ಕು ಕಾಯಿದೆ ಅನ್ವಯ ಕಡ್ಡಾಯವಾಗಿ ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ ಅಳವಡಿಸಿಕೊಳ್ಳುವ ಮೂಲಕ ಅತ್ಯುತ್ತಮವಾಗಿ ಕಲಿಸುವಂತೆ ಸ್ಪಷ್ಟ ಮಾರ್ಗಸೂಚಿ ಹೊರಡಿಸುವುದು.

• ಈ ಎಲ್ಲಾ ಪುಸ್ತಕಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಇಂದಿನ ಬದಲಾವಣೆಗೆ ತಕ್ಕಂತೆ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಕೂಡಲೇ ಒಂದು ತಜ್ಞರ ಸಮಿತಿಯನ್ನು ರಚಿಸಬೇಕು

• ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶಿಕ್ಷಕರ ನೇಮಕಾತಿ ಮಕ್ಕಳ ಕಲಿಕೆಯನ್ನು ಪೂರ್ಣವಾಗಿ ಹಳಿ ತಪ್ಪಿಸಿದೆ . 2021-22 ನೇ ಸಾಲಿನಲ್ಲಿ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಸರಿ ಸುಮಾರು 1,41,358 . ಈ ಪೈಕಿ 13,352 ಖಾಯಂ ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ಬಹುತೇಕ ಮುಗಿದಿದ್ದು ಮುಂದಿನ ಒಂದು ವಾರದ ಒಳಗಾಗಿ ಈ ಶಿಕ್ಷಕರು ಶಾಲೆಗಳಲ್ಲಿರುವಂತೆ ತುರ್ತು ಕ್ರಮ ವಹಿಸುವುದು.

• ಸರ್ಕಾರಿ ಶಾಲೆಯಲ್ಲಿ ಮಕ್ಕಳಿದ್ದರೂ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಕೂಡಲೇ ಈ ಖಾಯಂ ಶಿಕ್ಷಕರ ನೇಮಕವಾಗಬೇಕು

• ಈಗ ನೇಮಕಾತಿ ಪ್ರಕ್ರಿಯೆಯಲ್ಲಿ ಅತಿಥಿ ಶಿಕ್ಷಕರನ್ನು ಜೂನ್ 15ರ ಒಳಗಾಗಿ ನೇಮಿಸಿಕೊಳ್ಳಲು ಯುದ್ಧೋಪಾದಿಯಲ್ಲಿ ಕ್ರಮ ವಹಿಸುವುದು. ಈ ಪ್ರಕ್ರಿಯೆಯನ್ನು ಶಾಲಾ ಹಂತದಲ್ಲಿ ಎಸ್ಡಿಎಂಸಿ ಹಾಗು ಶಿಕ್ಷಕರ ವ್ಯಾಪ್ತಿಗೆ ಹಾಗು ವಿವೇಚನೆಗೆ ಬಿಡಬೇಕು .ಇದನ್ನು ಸಂಬಂಧಿಸಿದ ಬಿ ಆರ್ ಸಿ ಮೇಲುಸ್ತುವಾರಿ ಮಾಡಬೇಕು .

• ಶಾಲೆ ಪ್ರಾರಂಭಕ್ಕೆ ಮುನ್ನ ಎಲ್ಲಾ ಮಕ್ಕಳಿಗೆ ದೊರೆಯಬೇಕಾದ ಉತ್ತೇಜಕಗಳಾದ ಸಮವಸ್ತ್ರ  ಷೂ ಮತ್ತು ಸಾಕ್ಸ್ ಗಳನ್ನು ತಕ್ಷಣ ಸಕಾಲಕ್ಕೆ ಒದಗಿಸುವುದು.

• ಶಾಲಾ ಹಂತದಲ್ಲಿ ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಸರ್ಕಾರಿ ಹಾಗು ಅನುದಾನಿತ ಶಾಲೆಗಳಲ್ಲಿ 1 ರಿಂದ 12 ನೇ ತರಗತಿಯವರೆಗೆ ಕಲಿಯುತ್ತಿರುವ ಎಲ್ಲಾ ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡುವುದು . ಇದು ಶಾಲಾ ಲಾಗಿನ್ನಲ್ಲಿಯೇ ದೊರೆಯುವಂತೆ ಮಾಡುವುದು.

• ಕಳೆದ ಮೂರ್ನಾಲ್ಕು ವರ್ಷಗಳಿಂದ ಶಾಲಾ ಅನುದಾನಗಳು ಪೂರ್ಣ ಪ್ರಮಾಣದಲ್ಲಿ ಬಾರದಿರುವುದರಿಂದ ಸೀಮೇಸುಣ್ಣ-ಬಿಳೀ ಹಾಳೆಗಳ ಖರೀದಿಯೂ ಕಷ್ಟವಾಗಿದ್ದು , ತಕ್ಷಣ ಶಾಲಾ ಅನುದಾನವನ್ನು ಬಿಡುಗಡೆ ಮಾಡಲು ಕ್ರಮ ವಹಿಸಬೇಕು.

• ಸರ್ಕಾರಿ ಶಾಲೆಗಳಲ್ಲಿ ಬಳಸುವ ವಿದ್ಯುಚ್ಛಕ್ತಿ ಹಾಗು ನೀರಿನ ಬಳಕೆಯ ಬಿಲ್ ಗಳ ಹಣವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮನ್ನಾ ಮಾಡುವುದು

• ಪ್ರೌಢ ಶಿಕ್ಷಣ ಮುಂದುವರಿಸಲು ಅನುಕೂಲವಾಗುವಂತೆ ಹೆಣ್ಣು ಹಾಗು ಗಂಡು ಮಕ್ಕಳಿಗೆ ಸಿಗುತ್ತಿದ್ದ ಬೈಸಿಕಲ್ ವಿತರಣೆ ಕಳೆದ ನಾಲ್ಕು ವರ್ಷಗಳಿಂದ (2019-200) ಸ್ಥಗಿತವಾಗಿದ್ದು ಸಾವಿರಾರು ಮಕ್ಕಳು ಶಾಲೆ ಬಿಟ್ಟಿದ್ದಾರೆ . ಆದ್ದರಿಂದ, ಕೂಡಲೇ ಮಕ್ಕಳಿಗೆ ಬೈಸಿಕಲ್ ವಿತರಿಸುವ ಪ್ರಕ್ರಿಯೆ ಪ್ರಾರಂಭಿಸಬೇಕು.

• ವಿವಿಧ ಇಲಾಖೆಗಳ ಅಡಿಯಲ್ಲಿ ನಡೆಯುತ್ತಿರುವ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಜೂನ್ ಒಂದರ ಒಳಗೆ ಎಲ್ಲಾ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಪುನರಾರಂಭಗೊಳ್ಳುವಂತೆ ಜರೂರು ಕ್ರಮ ವಹಿಸುವುದು.

• ಶುದ್ಧ ಕುಡಿಯುವ ನೀರು, ಮಕ್ಕಳ ಶೌಚಾಲಯ, ತರಗತಿ ಕೋಣೆ ಸೇರಿದಂತೆ ಮೂಲಭೂತ ಸೌಕರ್ಯಗಳು ಪ್ರಥಮ ಆದ್ಯತೆಯಾಗಬೇಕು.

• ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಭಾಗವಾಗಿ ಮಧ್ಯಾಹ್ನದ ಬಿಸಿಯೂಟದ ವೆಚ್ಚಕ್ಕೆ ಈಗಿರುವ ಪ್ರತೀ ಮಗುವಿನ ಯುನಿಟ್ ವೆಚ್ಚವನ್ನು ಹೆಚ್ಚಿಸಬೇಕು.

• ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಇಂದಿರಾ ಕ್ಯಾಂಟೀನ್ ನಲ್ಲಿ / ಮಾದರಿಯಲ್ಲಿ ಮಧ್ಯಾಹ್ನ ಉಚಿತ ಊಟ ಒದಗಿಸಬೇಕು .

• ಸಂವಿಧಾನದಲ್ಲಿನ ಮೂಲಭೂತ ಹಕ್ಕಾಗಿರುವ 21ಎ ನ್ನು ಕೊಡಮಾಡುವ ಶಿಕ್ಷಣ ಹಕ್ಕು ಕಾಯಿದೆಯನ್ನು ಸಮರ್ಪಕವಾಗಿ ಹಾಗು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಹಾಗು ನಿಗದಿತ ಸಮಯದಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲು ಹೊಸ ಸರ್ಕಾರ ಕಾಲಮಿತಿ ಯೋಜನೆ ರೂಪಿಸಬೇಕು.

• ಯಾವುದೇ ನೆಪಹೇಳಿ ಸರ್ಕಾರಿ ಶಾಲೆಗಳನ್ನು ಸಾಮೂಹಿಕವಾಗಿ ಮುಚ್ಚುವ/ ವಿಲೀನಗೊಳಿಸುವ ಪ್ರಕ್ರಿಯೆಯನ್ನುಪೂರ್ಣವಾಗಿ ನಿಲ್ಲಿಸುವುದು.

• ಬಾಲ್ಯಪೂರ್ವ ಆರೈಕೆ ಮತ್ತು ಶಿಕ್ಷಣವೂ ಒಳಗೊಂಡಂತೆ ಕನಿಷ್ಠ 12ನೆಯ ತರಗತಿಯವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ವಿಸ್ತರಿಸಲು ಸಂವಿಧಾನ ಹಾಗು ಶಿಕ್ಷಣಹಕ್ಕು ಕಾಯಿದೆಗೆ ಅಗತ್ಯ ತಿದ್ದುಪಡಿ ತರಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.

• ಮಕ್ಕಳಿಗೆ ಕ್ಷೀರ ಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರ ಯೋಜನೆಯನ್ನು ಜಾರಿಗೊಳಿಸುವುದು ಹಾಗು ರಾಜ್ಯದಲ್ಲಿ ಅಪೌಷ್ಠಿಕತೆ ತೊಡೆದು ಹಾಕಲು ಅಂಗನವಾಡಿಯಿಂದ 10 ನೇ ತರಗತಿಯ ಎಲ್ಲಾ ಮಕ್ಕಳಿಗೆ ಪ್ರತಿದಿನ ಮೊಟ್ಟೆ ವಿತರಿಸಲು ಕ್ರಮ ಕೈಗೊಳ್ಳಬೇಕು.

• ಶಾಲಾ ಹಂತದಲ್ಲಿ ಸಂವಿಧಾನ ಬದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳನ್ನು ಪ್ರಜಾಸತ್ತಾತ್ಮಕವಾಗಿ ರಚಿಸಿ ಬಲವರ್ಧನೆಗೊಳಿಸಲು ಪರಿಣಾಮಕಾರಿ ತರಬೇತಿ ಒದಗಿಸಲು ಕ್ರಮ.

• ರಾಜ್ಯ ಆಯವ್ಯಯದಲ್ಲಿ ಶಿಕ್ಷಣಕ್ಕೆ ಶೇಕಡ 20 ರಷ್ಟು ಮೀಸಲಿಡಬೇಕು.

Donate Janashakthi Media

Leave a Reply

Your email address will not be published. Required fields are marked *