ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆ ಮೂಲಕ ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ವಿತರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳ ಕುರಿತು ಪಾಲಿಕೆ ಕೇಂದ್ರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಸುಮಾರು 27,000 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದ್ದು, ಎಲ್ಲರಿಗೂ ಶೀಘ್ರ ಗುರುತಿನ ಚೀಟಿ ವಿತರಣೆ ಮಾಡಲು ಸೂಚಿಸಲಾಯಿತು.
ಇದನ್ನೂ ಓದಿ: ರಶ್ಮಿಕಾಗೆ ಕರ್ನಾಟಕ ಎಲ್ಲಿದೆ ಗೊತ್ತಿಲ್ಲ – ಶಾಸಕ ರವಿ ಗಣಿಗ ಕೆಂಡ
ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಯಾವ ಮಾದರಿಯಲ್ಲಿ ಇರಬೇಕು ಎಂಬುದನ್ನು ಅಂತಿಮಗೊಳಿಸಿ, ಎಲ್ಲರಿಗೂ ಗುರುತಿನ ಚೀಟಿ ನೀಡಬೇಕು. ಆ ಬಳಿಕ ಗುರುತಿಸಿರುವಂತಹ ವ್ಯಾಪಾರ ವಲಯಗಳಲ್ಲಿ, ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕೆಂದು ಸೂಚಿಸಿದರು.
ಸಮೀಕ್ಷೆ ತ್ವರಿತವಾಗಿ ನಡೆಸಿ:
ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷಾ ಕಾರ್ಯ ನಡೆಯುತ್ತಿದೆ. ಈ ಪೈಕಿ ಆಯಾ ವಲಯ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷಾ ಕಾರ್ಯ ಪರಿಣಾಮಕಾರಿಯಾಗಿ ನಡೆಸುವುದರ ಜೊತೆಗೆ ತ್ವರಿತಗತಿಯಲ್ಲಿ ಗುರುತಿಸುವ ಕಾರ್ಯವನ್ನು ನಡೆಸಲು ಸೂಚನೆ ನೀಡಿದರು.
ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ:
ಕಲ್ಯಾಣ ವಿಭಾಗದಡಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಪೈಕಿ ಯಾವ್ಯಾವ ಕಾರ್ಯಕ್ರಮಗಳಿಗೆ ಎಷ್ಟು ಅರ್ಜಿಗಳು ಬಂದಿವೆ ಎಂಬುದನ್ನು ವಲಯವಾರು ಪರಿಶೀಲಿಸಬೇಕು. ಆ ಬಳಿಕ ಅರ್ಹ ಫಲಾನುಭವಿಗಳಿಗೆ ಕಾರ್ಯಕ್ರಮಗಳನ್ನು ತಲುಪಿಸುವ ಕೆಲಸ ಮಾಡಬೇಕೆಂದು ಸೂಚಿಸಿದರು.
ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ಅರ್ಚನಾ, ರಮ್ಯಾ, ಕರೀಗೌಡ, ಸ್ನೇಹಲ್, ದಿಗ್ವಿಜಯ್ ಬೋಡ್ಕೆ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ನೋಡಿ: ವಿಶ್ವವಿದ್ಯಾಲಯಗಳ ಸ್ಥಾಪನೆ, ಮುಚ್ಚುವಿಕೆಯ ರಾಜಕೀಯ ಮೇಲಾಟ, ಬಲಿಪಶುಗಳಾದ ವಿದ್ಯಾರ್ಥಿಗಳು….