ರೈತ-ಕಾರ್ಮಿಕ ಹೋರಾಟದ ಪ್ರಚಾರಾಂದೋಲನ ಭಾಗವಾಗಿ ಸಿಐಟಿಯು ಪಾದಯಾತ್ರೆ

ಮಂಗಳೂರು: ಕ್ವಿಟ್ ಇಂಡಿಯಾ ಚಳುವಳಿಯ ನೆನಪಿನ ಅಂಗವಾಗಿ ರೈತ ಕಾರ್ಮಿಕರ  ಸಖ್ಯತೆಯಲ್ಲಿ ಬೃಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ಮಂಗಳೂರು ನಗರದಲ್ಲಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು) ನೇತೃತ್ವದಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಪಾದಯಾತ್ರೆ ಉದ್ಘಾಟಿಸಿದ ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ ಮಾತನಾಡಿ “ಪ್ರಧಾನಿ ನರೇಂದ್ರ ಮೋದಿ ಸರಕಾರ  ಪ್ರತೀ ಹೆಜ್ಜೆಯಲ್ಲಿಯೂ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ದೇಶದ ಆರ್ಥಿಕತೆಯನ್ನು ಸರ್ವನಾಶಗೊಳಿಸುತ್ತಿದೆ. ಜನತೆಯ ಹಿತ ಕಾಪಾಡುವ ಬದಲು ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ. ಆ ಮೂಲಕ ದೇಶದ ಅಮೂಲ್ಯ ಸಂಪತ್ತುಗಳನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಧಾರೆ ಎರೆದು ಕೊಡುತ್ತಿದೆ. ರೈತ ವಿರೋಧಿ ಮಸೂದೆಗಳನ್ನು ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಸರಕಾರವು ದೇಶದ ಕೃಷಿರಂಗವನ್ನೇ ಬುಡಮೇಲುಗೊಳಿಸುತ್ತಿದೆʼʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ರೈತ-ಕೂಲಿಕಾರ-ಕಾರ್ಮಿಕರ ಸಮಸ್ಯೆ ಇತ್ಯರ್ಥ್ಯಕ್ಕಾಗಿ ಜಂಟಿ ಆಂದೋಲನ

ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ ʻʻಅಂದು ಈಸ್ಟ್ ಇಂಡಿಯಾ ಕಂಪೆನಿಯ ಮೂಲಕ ದೇಶದ ಸಂಪತ್ತನ್ನು ದೋಚಿದ ಬ್ರಿಟೀಷರ ವಿರುದ್ದ ದೇಶದ ಜನತೆ ಸಮರಧೀರ ಹೋರಾಟ ನಡೆಸಿದರೆ. ಇಂದು ನಮ್ಮ ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯುತ್ತಿರುವ ನೂರಾರು ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ದೇಶದ ರೈತ ಕಾರ್ಮಿಕರು ಒಂದಾಗಿ ಪ್ರಬಲ ಚಳುವಳಿ ರೂಪಿಸಬೇಕಾಗಿದೆʼʼ ಎಂದು ಹೇಳಿದರು.

ಪಾದಯಾತ್ರೆಯಲ್ಲಿ  ಸಿಐಟಿಯು  ಜಿಲ್ಲಾ ಮುಖಂಡರಾದ ಜಯಂತಿ ಶೆಟ್ಟಿ, ಭಾರತಿ ಬೋಳಾರ, ಜಯಲಕ್ಷ್ಮಿ, ಸಂತೋಷ್ ಆರ್.ಎಸ್, ಅಶೋಕ್ ಸಾಲ್ಯಾನ್, ಕ್ರಷ್ಣ ತಣ್ಣೀರು ಬಾವಿ, ಅನ್ವರ್ ಶೇಕ್ ಮುಂತಾದವರು ಉಪಸ್ಥಿತರಿದ್ದರು.

Donate Janashakthi Media

Leave a Reply

Your email address will not be published. Required fields are marked *