ರಾಜ್ಯ-ಜಿಲ್ಲಾ ಮುಖ್ಯ ಹೆದ್ದಾರಿ ಬದಿ ಕಟ್ಟಡ ನಿರ್ಮಾಣಕ್ಕೆ ತಡೆ: ಲೋಕೋಪಯೋಗಿ ಇಲಾಖೆ ಆದೇಶ

ಬೆಂಗಳೂರು: ರಾಜ್ಯ ಹೆದ್ದಾರಿಗಳ ಮಧ್ಯಭಾಗದಿಂದ 40 ಮೀಟರ್ ಅಂತರದವರೆಗೆ ಹಾಗೂ ಜಿಲ್ಲಾ ರಸ್ತೆಗಳ ಮಧ್ಯಭಾಗದಿಂದ 25 ಮೀಟರ್ ಅಂತರದಲ್ಲಿ ಯಾವುದೇ ಕಟ್ಟಡ ಅಥವಾ ಅಂಗಡಿಗಳನ್ನು ನಿರ್ಮಿಸುವಂತಿಲ್ಲ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳ ಅಕ್ಕಪಕ್ಕದಲ್ಲಿ ಅನಧಿಕೃತ ಕಟ್ಟಡಗಳನ್ನು ನಿರ್ಮಿಸದಂತೆ ತಡೆಗಟ್ಟಲು ಲೋಕೋಪಯೋಗಿ ಇಲಾಖೆ ಮುಂದಾಗಿದ್ದು, ಹೆದ್ದಾರಿಗಳ ಅಕ್ಕಪಕ್ಕ ನಿರ್ಮಾಣಗೊಳ್ಳುವ ಕಟ್ಟಡಗಳು ಕನಿಷ್ಠ ಪ್ರಮಾಣದ ಅಂತರ ಕಾಯ್ದುಕೊಳ್ಳಲೇ ಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಕಟ್ಟಡ ನಿರ್ಮಾಣದಲ್ಲಿ ಕನಿಷ್ಠ ಎಷ್ಟು ಅಂತರ ಕಾಯ್ದುಕೊಳ್ಳಬೇಕೆಂಬ ನಿಯಮ ಅಳವಡಿಸಲಾಗಿದೆ. ಈ ನಿಬಂಧನೆಗಳನ್ನು ಪಾಲಿಸುವುದರಿಂದ ರಸ್ತೆಗಳಲ್ಲಿ ಅತಿಕ್ರಮಣ ತಡೆಯಲು ಹಾಗೂ ವಾಹನ ಸಂಚಾರ ಸುಗಮವಾಗುತ್ತದೆ. ಅಲ್ಲದೇ ಅಪಘಾತಗಳ ಪ್ರಮಾಣವನ್ನು ಕಡಿಮೆಗೊಳಿಸಲು ಸಾಧ್ಯವಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೇ ಸಿಟಿ ಕಾರ್ಪೊರೇಷನ್, ಸಿಟಿ ಮುನ್ಸಿಪಲ್ ಕೌನ್ಸಿಲ್, ಟೌನ್ ಮುನ್ಸಿಪಲ್ ಕೌನ್ಸಿಲ್, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪರಿಮಿತಿಗಳಲ್ಲಿ ಈ ಅಂತರವನ್ನು ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂಗಡಿಯ ಅಂಚಿನಿಂದ ಕನಿಷ್ಠ 6 ಮೀಟರ್  ಕಾಯ್ದುಕೊಳ್ಳಬೇಕು. ಸಿಟಿ ಕಾರ್ಪೊರೇಷನ್ ಪರಿಮಿತಿಯಿಂದ 15 ಕಿ.ಮೀ. ದೂರದವರೆಗೆ 12 ಮೀಟರ್ ಅಂತರ ಪಾಲಿಸುವುದು ಕಡ್ಡಾಯವಾಗಿದೆ.

ಈ ನಿಯಮ ಜಾರಿಗೊಳಿಸುವ ಅಧಿಕಾರ ಲೋಕೋಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್​ಗಳಿಗೆ ವಹಿಸಲಾಗಿದೆ. ಅವರಿಗೆ ಹೆದ್ದಾರಿ ಪ್ರಾಧಿಕಾರಿ ಎಂದು ಹೆಸರಿಸಲಾಗಿದೆ. ರಸ್ತೆಯಿಂದ ಕಟ್ಟಡಗಳ ಅಂತರ ನಿಗದಿಪಡಿಸುವುದು ಹಾಗೂ ರಸ್ತೆ ಗಡಿಯನ್ನು ನಿಗದಿಪಡಿಸುವ ಜವಾಬ್ದಾರಿ ವಹಿಸಲಾಗಿದೆ.

Donate Janashakthi Media

Leave a Reply

Your email address will not be published. Required fields are marked *