ರಾಮನಗರ: ರಾಮನಗರ ಹೊರವಲಯದ ಹೆಲ್ತ್ ಸಿಟಿಯಲ್ಲಿರುವ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮಾದರಿ ಮೆಟ್ರಿಕ್ ನಂತರದ ಪುರುಷರ ಹಾಸ್ಟೆಲ್ನಲ್ಲಿ ಬರೋಬ್ಬರಿ 15 ಕ್ವಿಂಟಲ್ ಗೋಧಿಯನ್ನು ಜೆಸಿಬಿ ಮೂಲಕ ಗುಂಡಿ ತೋಡಿ ಮುಚ್ಚಿದ್ದೂ, ಬಡ ವಿದ್ಯಾರ್ಥಿಗಳ ಹೊಟ್ಟೆ ತುಂಬಿಸಬೇಕಾದ ಆಹಾರ ವಾರ್ಡನ್ ದಿವ್ಯ ನಿರ್ಲಕ್ಷ್ಯದಿಂದ ಮಣ್ಣು ಪಾಲಾದ ಘಟನೆ ನಡೆದಿದೆ. ರಾಮನಗರ
ಸರ್ಕಾರಿ ಹಾಸ್ಟೆಲ್ ವಾರ್ಡನ್ ದಿವ್ಯ ನಿರ್ಲಕ್ಷ ಹಾಗೂ ಅಸಡ್ಡೆಯಿಂದಾಗಿ ಬಡ ವಿದ್ಯಾರ್ಥಿಗಳ ಹೊಟ್ಟೆ ಸೇರಬೇಕಾದ ಗೋಧಿ ಮಣ್ಣು ಪಾಲಾಗಿದೆ. ಅಂದಹಾಗೆ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮಾದರಿ ಮೆಟ್ರಿಕ್ ನಂತರದ ಪುರುಷರ ಈ ಒಂದು ಹಾಸ್ಟೆಲ್ನಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ 125 ವಿದ್ಯಾರ್ಥಿಗಳಿದ್ದಾರೆ.
15 ಕ್ವಿಂಟಲ್ ಗೋಧಿ ಮಣ್ಣುಪಾಲು
ವಿದ್ಯಾರ್ಥಿಗಳ ಹಸಿವು ನೀಗಿಸಲು ರಾಜ್ಯ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಡಿ 30 ಕ್ವಿಂಟಲ್ ಗೋಧಿ ಸರಬರಾಜು ಆಗಿತ್ತು. ಈ ಗೋಧಿಯನ್ನು ಸರಿಯಾಗಿ ಬಳಕೆ ಮಾಡದ ಹಾಸ್ಟೆಲ್ ವಾರ್ಡನ್ ಯೋಗಿಶ್, ಹುಳು ಹಿಡಿದಿದೆ ಎಂದು ತಾಲ್ಲೂಕು ಬಿಸಿಎಂ ಅಧಿಕಾರಿಗಳ ಗಮನಕ್ಕೆ ತಂದಿದ್ದರು.
ಇದಕ್ಕೆ ಕಾರಣ ಕೇಳಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಬಳಿಕ ಅಧಿಕಾರಿಗಳ ಸೂಚನೆಯಂತೆ 15 ಕ್ವಿಂಟಲ್ ಗೋಧಿಯನ್ನು ಸ್ವಚ್ಚಗೊಳಿಸಿ ಕನಕಪುರ ಹಾಸ್ಟೆಲ್ಗೆ ರವಾನಿಸಿ, ಉಳಿದ ಗೋಧಿಯನ್ನು ಬಳಸುವಂತೆ ಸೂಚಿಸಲಾಗಿತ್ತು. ಆದರೆ ಆ ಉಳಿದ ಗೋಧಿಯನ್ನು ಬಳಸದೆ ಹುಳು ಹಿಡಿಯುವಂತೆ ಮಾಡಿದ್ದರು. ಬಳಿಕ ಹಾಸ್ಟೆಲ್ ಹಿಂಭಾಗದಲ್ಲಿ ಜೆಸಿಬಿ ಮೂಲಕ ಗುಂಡಿ ತೆಗೆಸಿ ಮುಚ್ಚಿ ಹಾಕಿಸಿದ್ದರು. ರಾಮನಗರ
ಇದನ್ನೂ ಓದಿ: ಬೆಂಗಳೂರು | ಸೆಪ್ಟೆಂಬರ್ 25 ರಂದು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ನ್ಯಾಯ ಸಮಾವೇಶ
ಬಿಸಿಎಂ ಇಲಾಖೆಯ ತಾಲೂಕು ಅಧಿಕಾರಿಯನ್ನ ಸ್ಥಳಕ್ಕೆ ಕರೆಸಲಾಗಿತ್ತು. ಸ್ಥಳಕ್ಕೆ ಬಂದ ಬಿಸಿಎಂ ಇಲಾಖೆ ತಾಲೂಕು ಅಧಿಕಾರಿ ಮಧುಮಲಾ, ಜೆಬಿಸಿ ಮೂಲಕ ಸ್ಥಳದಲ್ಲಿ ಗುಂಡಿ ತೆಗಿಸಿದಾಗ ಬಡ ವಿದ್ಯಾರ್ಥಿಗಳ ಹೊಟ್ಟೆ ಸೇರಬೇಕಿದ್ದ ಗೋಧಿ ಮಣ್ಣುಪಾಲಾಗಿರುವುದು ಬೆಳಕಿಗೆ ಬಂದಿದೆ.
ಅಂದಹಾಗೆ ಕಳೆದ ವರ್ಷ ಕೂಡ ಇದೇ ಹಾಸ್ಟೆಲ್ನ ವಾರ್ಡನ್ ಆಗಿದ್ದ ಯೋಗಿಶ್, 15 ಕ್ವಿಂಟಲ್ ಅಷ್ಟು ವಿದ್ಯಾರ್ಥಿಗಳ ಆಹಾರವನ್ನ ಹಾಳು ಮಾಡಿದ್ದ. ಇದೀಗ ಸುಮಾರು 30 ಕ್ವಿಂಟಲ್ ಗೋಧಿಯನ್ನ ಹುಳು ಹಿಡಿಯುವಂತೆ ಮಾಡಿದ್ದಾನೆ. ಇನ್ನು ಒಂದು ವೇಳೆ ಹಾಸ್ಟೆಲ್ನಲ್ಲಿ ಹೆಚ್ಚುವರಿ ಆಹಾರ ಪದಾರ್ಥ ಇದ್ದರೇ, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಬೇರೊಂದು ಹಾಸ್ಟೆಲ್ಗೆ ಶಿಫ್ಟ್ ಮಾಡಬಹುದಿತ್ತು.
ಅಲ್ಲಿರುವ ವಿದ್ಯಾರ್ಥಿಗಳ ಹೊಟ್ಟೆಯನ್ನಾದರೂ ತುಂಬಿಸುತ್ತಿತ್ತು. ಆದರೆ ವಾರ್ಡನ್ ಯೋಗಿಶ್ನ ಅಸಡ್ಡೆ, ದಿವ್ಯಾ ನಿರ್ಲಕ್ಷ್ಯದಿಂದ ರಾಶಿ ರಾಶಿ ಗೋಧಿ ಮಣ್ಣಪಾಲಾಗಿದೆ. ಈ ಸುದ್ದಿ ಖಾಸಗಿವಾಹಿನಿಯಲ್ಲಿ ಪ್ರಸಾರ ಅಗಿತ್ತು, ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಲು ಸಹ ತಾಲೂಕು ಅಧಿಕಾರಿ ಮಧುಮಲಾ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ನೋಡಿ: ಬಿಹಾರದಲ್ಲಿ ಸರ್ (SIR) ಸೃಷ್ಟಿಸಿದ ಸುಳ್ಳು ಕಥೆಗಳು – ವಿಶ್ಲೇಷಣೆ : ಗುರುರಾಜ ದೇಸಾಯಿ Janashakthi Media
