ಬೆಳಗಾವಿ: ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯಾಗಿ ಘೋಷಿಸಬೇಕು. ಕಾರ್ಯದರ್ಶಿ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಿ, ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿಕೇಂದ್ರವಾಗಿಸಬೇಕು. ‘ಕಿತ್ತೂರು ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ರಚಿಸಬೇಕು. ಇಲ್ಲದಿದ್ದರೆ ಹೈಕೋರ್ಟ್ ಧಾರವಾಡ ಪೀಠಕ್ಕಾಗಿ ಮಾಡಿದ ಹೋರಾಟದ ಮಾದರಿಯಲ್ಲೇ ಪ್ರತಿಭಟನೆ ತೀವ್ರಗೊಳಿಸಲಾಗುವುದು’ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಮತ್ತು ಉತ್ತರ ಕರ್ನಾಟಕ ವಿಕಾಸ ವೇದಿಕೆ ನಾಯಕರು ಎಚ್ಚರಿಕೆ ನೀಡಿದರು.
ಇದನ್ನೂ ಓದಿ : ಟ್ರಂಪ್ ಸುಂಕಗಳ ಪ್ರಹಾರಕ್ಕೆ ಜಿಎಸ್ಟಿ ಇಳಿಕೆ ಪರಿಹಾರ ನೀಡದು
ಅ.23ರಿಂದ ಆರಂಭವಾಗಲಿರುವ ಕಿತ್ತೂರು ಉತ್ಸವದಲ್ಲಿ ಈ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ನ.1ರಿಂದ ಬೇಡಿಕೆಗಳನ್ನು ಬೆಂಬಲಿಸಿ ಪ್ರತಿಭಟನೆ ತೀವ್ರಗೊಳಿಸುತ್ತೇವೆ. ಇದಕ್ಕೆ ಪೂರ್ವಭಾವಿಯಾಗಿ ಅ.31ರಂದು ಸುವರ್ಣ ವಿಧಾನಸೌಧದ ಮುಂದೆ ಒಂದು ದಿನ ಪ್ರತಿಭಟನೆ ನಡೆಸುತ್ತೇವೆ’ ಎಂದು ಇಲ್ಲಿ ಶನಿವಾರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಬಿ.ಡಿ.ಹಿರೇಮಠ, ‘14 ವರ್ಷ ಚಳವಳಿ ನಡೆಸಿದ ನಂತರ ಧಾರವಾಡದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಯಿತು. ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರವನ್ನಾಗಿ ಮಾಡಬೇಕೆಂದು ಒಂದು ದಶಕಕ್ಕೂ ಹೆಚ್ಚು ಸಮಯದಿಂದ ಪ್ರತಿಭಟಿಸುತ್ತಿದ್ದೇವೆ. ಆದರೆ, ಯಾವುದೇ ಪ್ರಗತಿ ಕಂಡುಬಂದಿಲ್ಲ. ಈ ಭಾಗದ ಚುನಾಯಿತ ಪ್ರತಿನಿಧಿಗಳು ನಮ್ಮ ಬೇಡಿಕೆ ನಿರ್ಲಕ್ಷಿಸುತ್ತಿದ್ದಾರೆ’ ಎಂದು ದೂರಿದರು.
ಉತ್ತರ ಕರ್ನಾಟಕ ವಿಕಾಸ ವೇದಿಕೆ ಸಂಚಾಲಕ ಅಶೋಕ ಪೂಜಾರಿ, ‘ಸುವರ್ಣ ವಿಧಾನಸೌಧ ಆಡಳಿತಾತ್ಮಕ ಶಕ್ತಿಕೇಂದ್ರವಾದ ನಂತರ ಕಿತ್ತೂರು ಕರ್ನಾಟಕ ಅಭಿವೃದ್ಧಿ ಹೊಂದಲಿದೆ. ಈ ಬಾರಿಯ ಕಿತ್ತೂರು ಉತ್ಸವವನ್ನು ವಿಭಾಗೀಯ ಕಾರ್ಯಕ್ರಮವಾಗಿ ಆಚರಿಸಬೇಕು’ ಎಂದು ಒತ್ತಾಯಿಸಿದರು.
ಉತ್ತರ ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷ ಭೀಮಪ್ಪ ಗಡಾದ, ‘ಈ ಭಾಗದ ಜನರು ಕೆಲಸಕ್ಕಾಗಿ ಬೆಂಗಳೂರಿಗೆ ಹೋಗುವುದನ್ನು ತಡೆಯಲು ಇಲ್ಲಿಗೆ ಪ್ರತ್ಯೇಕ ಸಚಿವಾಲಯ ಅಗತ್ಯವಿದೆ’ ಎಂದರು.
ಇದನ್ನೂ ನೋಡಿ : KIADB | ಸುವರ್ಣ ಚಾನೆಲ್ ರಾಜೀವ್ ಚಂದ್ರಶೇಖರ್ ಕುಟುಂಬದ ಹಗರಣಗಳ ಬಗ್ಗೆ ದೂರು ದಾಖಲಿಸಿದ ವಕೀಲ Janashakthi Media
