ಸರಕಾರಕ್ಕೆ ಬೆಲೆ ಏರಿಕೆ ಬಿಸಿ: ಟಾಂಗಾ ಮೂಲಕ ವಿಧಾನಸೌಧಕ್ಕೆ ಆಗಮಿಸಿದ ಕಾಂಗ್ರೆಸ್‌ ನಾಯಕರು

ಬೆಂಗಳೂರು: ವಿಧಾನಮಂಡಲ ಅಧಿವೇಶನ ಇಂದು ಮುಕ್ತಾಯವಾಗಲಿದೆ. ಕಲಾಪದ ಕಡೆಯ ದಿನದಂದು ಸಹ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಹೋರಾಟ ಮುಂದುವರೆಸಿರುವ ಕಾಂಗ್ರೆಸ್‌ ಪಕ್ಷವು ಪಕ್ಷದ ನಾಯಕರು ಟಾಂಗಾ ಏರುವ ಮೂಲಕ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿದ್ದಾರೆ.

ಬೆಂಗಳೂರಿನ ಕಾಂಗ್ರೆಸ್‌ ಕಚೇರಿಯಿಂದ ವಿಧಾನಸೌಧದವರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾಯಾಧ್ಯಕ್ಷರುಗಳು ಸೇರಿದಂತೆ ಹಲವರು ಟಾಂಗಾದ ಮೂಲಕ ಮೆರವಣಿಗೆ ನಡೆಸಿದರು.

ಇಂದು ಜಂಟಿ ಅಧಿವೇಶನ ನಡೆಯುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಸರಕಾರವನ್ನು ಬಿಸಿ ಮುಟ್ಟಿಸಿದ್ದಾರೆ.

ಇದನ್ನು ಓದಿ: ಬೆಲೆ ಏರಿಕೆ ವಿರುದ್ಧ ಸೈಕಲ್‌ ಮೂಲಕ ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ-ಡಿಕೆಶಿ

ಪೆಟ್ರೋಲಿಯಂ ಬೆಲೆಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ವಿವಿಧ ರೀತಿಯ ಹೋರಾಟವನ್ನು ಮುಂದುವರೆಸಿರುವ ಕಾಂಗ್ರೆಸ್ ಪಕ್ಷವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ರಕ್ತ ಹೀರುತ್ತಿದೆ, ಸಾಮಾನ್ಯ ಮತ್ತು ಬಡ ವರ್ಗಗಳ ಜನರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಡೆಸಲು ಕಷ್ಟವಾಗುತ್ತಿದೆ, ಹಲವು ಕಡೆಗಳಲ್ಲಿ ಜನರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದರು.

ಸೆಪ್ಟೆಂಬರ್ 13 ರಿಂದ 10 ದಿನಗಳ ಕಾಲ ನಡೆದ ವಿಧಾನ ಮಂಡಲ ಅಧಿವೇಶನದ ಎರಡೂ ಸದನಗಳಲ್ಲಿ ಕಾಂಗ್ರೆಸ್ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕಡಿಮೆ ಇರುವಾಗ ಅದರ ಲಾಭ ಮಾತ್ರ ಜನಸಾಮಾನ್ಯರಿಗೆ ಸಿಗುವಂತೆ ಮಾಡಿಲ್ಲ. ಪೆಟ್ರೋಲ್ ಬೆಲೆ 100 ರ ಗಡಿ ದಾಟಿದೆ, ಡೀಸೆಲ್ 94 ಆಗಿದೆ, ಅಡುಗೆ ಅನಿಲ 880 ರೂ. ಆಗಿದೆ. ಇದರಿಂದ ಇತರೆ ದಿನಬಳಕೆ ವಸ್ತುಗಳ ಬೆಲೆಯೂ ಹೆಚ್ಚಾಗಿದೆ ಎಂದು ಕಾಂಗ್ರೆಸ್‌ ಪಕ್ಷದ ಆರೋಪವಾಗಿದೆ.

ವಿಧಾನ ಮಂಡಲ ಅಧಿವೇಶನ ಆರಂಭಿಕ ದಿನದಂದು ಎತ್ತಿನ ಗಾಡಿಯಲ್ಲಿ ಆಗಮಿಸಿದ್ದ ಕಾಂಗ್ರೆಸ್ ನಾಯಕರು ಕಳೆದ ಸೋಮವಾರದಂದು ಸೈಕಲ್ ಏರಿ ಸದನಕ್ಕೆ ಆಗಮಿಸಿದರು. ಆ ಮೂಲಕ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ ಪಕ್ಷದ ವಿರೋಧಿಸಿ ಹೋರಾಟವನ್ನು ಮುಂದುವರೆಸಿದೆ.

ವಿಧಾನಸೌಧ ಬಳಿ ಮಾತನಾಡಿದ ಡಿ.ಕೆ.ಶಿವಕುಮಾರ್ ʻಲೋಕಸಭಾ ಸ್ಪೀಕರ್ ಅವರನ್ನು ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಲು ಬಂದಿದ್ದಾರೆ. ಕಾಂಗ್ರೆಸ್‌ ಪಕ್ಷದ ವಿರೋಧವು ಇದೆ. ನಾವು ಎಷ್ಟೇ ಹೇಳಿದರೂ ಎಮ್ಮೆ ಚರ್ಮದ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ, ಸರ್ಕಾರಕ್ಕೆ ಕಣ್ಣು, ಕಿವಿ, ಬಾಯಿ ಯಾವುದೂ ಇಲ್ಲ. ನಮ್ಮ ಹೋರಾಟ ನಿರಂತರವಾಗಲಿದೆ. ಅಕ್ಟೋಬರ್ ತಿಂಗಳಿನಲ್ಲಿಯೂ ರಾಜ್ಯದ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿಯೂ ಹೋರಾಟ ಮಾಡಲಿದ್ದೇವೆ ಎಂದರು.

ಇದನ್ನು ಓದಿ: ಎತ್ತಿನಗಾಡಿಯ ಮೂಲಕ ಅಧಿವೇಶನಕ್ಕೆ ಬಂದ ಸಿದ್ದರಾಮಯ್ಯ & ಡಿ.ಕೆ. ಶಿವಕುಮಾರ್

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ ಇಂದಿ ಹಮ್ಮಿಕೊಂಡಿರುವ ಹೋರಾಟ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮೂರನೇ ಹೋರಾಟವಾಗಿದೆ. ಇವತ್ತು ಟಾಂಗಾ ಗಾಡಿ ಮೇಲೆ ಬಂದು ಪ್ರತಿಭಟನೆ ಮಾಡಿದ್ದೇವೆ. ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಯಾದ ಮೇಲೆ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಜನಸಾಮಾನ್ಯರು, ರೈತರು, ಕಾರ್ಮಿಕರು, ಬಡವರಿಗೆ ಬದುಕು ದುಸ್ತರವಾಗಿದೆ ಎಂದರು.

ಜನಸಾಮಾನ್ಯರ ತಿಂಗಳ ಸರಾಸರಿ ಖರ್ಚುವೆಚ್ಚ ಇಂದು 15 ಸಾವಿರಕ್ಕೂ ಹೆಚ್ಚಾಗಿದೆ. ಪಿಂಚಣಿ ಪಡೆಯುವರಿಗೆ, ಜನಸಾಮಾನ್ಯರ ಆದಾಯ ಮಾತ್ರ ಹೆಚ್ಚಾಗಿಲ್ಲ. ಹೀಗಿರುವಾಗ ಬಡ ಮತ್ತು ಮಧ್ಯಮ ವರ್ಗದವರು ಜೀವನ ನಡೆಸುವುದು ಹೇಗೆ, ಇಡೀ ಪರಿಸ್ಥಿತಿ ಅಸ್ತವ್ಯಸ್ತವಾಗುತ್ತಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಯಾವತ್ತಿಗೂ ಜನಸಾಮಾನ್ಯರ ಪರವಾಗಿದೆ, ಬಿಜೆಪಿಯವರಂತೆ ಕಾರ್ಪೊರೇಟರ್‌ಗಳ ಪರವಾಗಿಲ್ಲ, ಶ್ರೀಮಂತರ ಮೇಲೆ ಹೆಚ್ಚಿನ ತೆರಿಗೆ ಹಾಕಲಿ, ಜನಸಾಮಾನ್ಯರ ಜೀವನದ ಮೇಲೆ ಬರೆ ಎಳೆಯುವುದು ಏಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಸರ್ಕಾರ ಬೆಲೆ ಇಳಿಸಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರಿಯಲಿದೆ. ಜನರು ಕೂಡ ಈ ಕೆಟ್ಟ ಸರ್ಕಾರ ಕಿತ್ತೊಗೆಯಲು ಸಜ್ಜಾಗಬೇಕು ಎಂದು ಕಾಂಗ್ರೆಸ್ ನಾಯಕರು ನಾಡಿನ ಜನರಲ್ಲಿ ಮನವಿ ಮಾಡಿದ್ದಾರೆ.

Donate Janashakthi Media

One thought on “ಸರಕಾರಕ್ಕೆ ಬೆಲೆ ಏರಿಕೆ ಬಿಸಿ: ಟಾಂಗಾ ಮೂಲಕ ವಿಧಾನಸೌಧಕ್ಕೆ ಆಗಮಿಸಿದ ಕಾಂಗ್ರೆಸ್‌ ನಾಯಕರು

  1. The entire Government machinery is inoperative, for instance the phone numbers given to the public, in the Government helpline none of them are working

    Shameless Government. None of the Governments tilldate were as shameless as the BJP led governments

Leave a Reply

Your email address will not be published. Required fields are marked *