ಪರಿಶಿಷ್ಟ ಜಾತಿಗಳ ಒಳಮೀಸಲಾತಿ: ಸಚಿವ ಸಂಪುಟದ ಉಪ ಸಮಿತಿ ರಚನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿದ ಬೆನ್ನಲ್ಲೇ ಒಳ ಮೀಸಲಾತಿ ಕೂಗು ಜೋರಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಒಳಮೀಸಲಾತಿ ಕುರಿತು ಪರಿಶೀಲಿಸಿ ಸೂಕ್ತ ಶಿಫಾರಸು ಮಾಡಲು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿದೆ.

ಸದಾಶಿವ ಆಯೋಗದ ವರದಿಯ ಶಿಫಾರಸುಗಳ ಜಾರಿಗೆ ಹರಿಹರದಲ್ಲಿನ ಬಿ.ಕೃಷ್ಣಪ್ಪ ಅವರ ಸಮಾಧಿ ಬಳಿಯಿಂದ ಹೊರಟು 360 ಕಿಲೋ ಮೀಟರ್ ಕ್ರಮಿಸಿ ಭಾನುವಾರ ಬೆಂಗಳೂರಿಗೆ ಬಂದಿದ್ದ ಸಾವಿರಾರು ಮಂದಿ, ಸ್ವಾತಂತ್ರ್ಯ ಉದ್ಯಾನದಲ್ಲಿ ಹೋರಾಟ ಮುಂದುವರಿಸಿದ್ದರು. ಮನವಿ ಸ್ವೀಕರಿಸಲು ಬಂದಿದ್ದ ವಸತಿ ಸಚಿವ ವಿ.ಸೋಮಣ್ಣ ಅವರಿಗೆ ‘ಗೋ ಬ್ಯಾಕ್’ ಘೋಷಣೆ ಕೂಗಿ ವಾಪಸ್ ಕಳುಹಿಸಿದ್ದರು.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸ್ಥಳಕ್ಕೆ ಬರಬೇಕು. ಒಳ ಮೀಸಲಾತಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು. ಸ್ಥಳಕ್ಕೆ ಬರದಿದ್ದರೆ ಮುಖ್ಯಮಂತ್ರಿ ಅವರ ಮನೆಯ ಬಳಿಗೆ ಹೋಗುವುದಾಗಿ ಎಚ್ಚರಿಸಿದರು. ಧರಣಿ ಕೈಬಿಡಲು ತಿಳಿಸಿದ ಪೊಲೀಸರು, ಇದಕ್ಕೆ ಒಪ್ಪದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್‌ಗಳಲ್ಲಿ ಕರೆದೊಯ್ದರು. ಪ್ರತಿಭಟನೆ ಮುಂದುವರಿಸಲು ಪ್ರಯತ್ನಿಸಿದ ಕಾರ್ಯಕರ್ತರ ಮೇಲೆ ಪೊಲೀಸರು ಲಾಟಿ ಬೀಸಿ ಚದುರಿಸಿದರು. ಪಟ್ಟು ಬಿಡದ ಹೋರಾಟಗಾರರು ಪ್ರತಿಭಟನೆಯ್ನು ಮುಂದುವರಿಸಿದ್ದರು. ಸರಕಾರ ಈಗ ಅಂತಿಮವಾಗಿ ಉಪಸಮಿತಿ ರಚಿಸುವ ಮೂಲಕ ಹೋರಾಟಗಾರರನ್ನು ಮನವೊಲಿಸುವ ಕಸರತ್ತು ಮಾಡುತ್ತಿದೆ.

ಸಚಿವ ಸಂಪುಟ ಉಪ ಸಮಿತಿಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಮೀನುಗಾರಿಕೆ ಸಚಿವ ಎಸ್‌. ಅಂಗಾರ, ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಇದ್ದಾರೆ.  ಈ ಸಮಿತಿಗೆ ಸಮಾಜ ಕಲ್ಯಾಣ ಇಲಾಖೆ ಅಗತ್ಯ ನೆರವು ನೀಡಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

Donate Janashakthi Media

Leave a Reply

Your email address will not be published. Required fields are marked *