ತಿರುವನಂತಪುರಂ | ಹಿರಿಯ ನಾಗರಿಕರಿಗೆ ಆರ್ಥಿಕ ಭದ್ರತೆ : ವಿಶೇಷ ಬಜೆಟ್‌ ಮಂಡಿಸಿದ ಕೇರಳ

ತಿರುವನಂತಪುರಂ : ಕೇರಳ ಸರ್ಕಾರ ಹಿರಿಯ ನಾಗರಿಕರ ಕಲ್ಯಾಣಕ್ಕೆ ಒತ್ತು ನೀಡುವ  ಉದ್ದೇಶದಿಂದ ಪ್ರತ್ಯೇಕ ಬಜೆಟ್‌  ಘೋಷಿಸಿದೆ. ಈ ಮೂಲಕ ಹಿರಿಯ ನಾಗರಿಕರಿಗಾಗಿ ವಿಶೇಷ ಬಜೆಟ್‌ ಮಂಡಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕೇರಳ ಪಾತ್ರವಾಗಿದೆ.

ಇದು ಸಿಪಿಐಎಂ ನೇತೃತ್ವದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸರ್ಕಾರದ ಕೊನೆಯ ಬಜೆಟ್ ಆಗಿದೆ. ಕೇರಳ ಸರ್ಕಾರವು 2026-27ನೇ ಸಾಲಿನ ಬಜೆಟ್ ಅನ್ನು ವಿಧಾನಸಭೆಯಲ್ಲಿ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರು ಮಂಡಿಸಿದರು.  ಮೇ ತಿಂಗಳಲ್ಲಿ ಕೇರಳ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬಜೆಟ್‌ಗೆ ವಿಶೇಷ ಮಹತ್ವ ದೊರೆತಿದೆ.

ಕೇರಳ ಸರ್ಕಾರ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಸಂಖ್ಯೆ ವೇಗವಾಗಿ ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪ್ರತ್ಯೇಕ ಬಜೆಟ್ ಅನ್ನು ಮಂಡಿಸಿದೆ. ಈ ಬಜೆಟ್‌ನಲ್ಲಿ ಹಿರಿಯ ನಾಗರಿಕರಿಗೆ ಅಗತ್ಯವಾದ ವಿಶೇಷ ಗಮನ ನೀಡಬೇಕಾದ ಸಮಯ ಬಂದಿದೆ ಎಂದು ಸರ್ಕಾರ ಸ್ಪಷ್ಟವಾಗಿ ಉಲ್ಲೇಖಿಸಿದೆ.

ಇದನ್ನೂ ಓದಿ : ಉಚಿತ ಪದವಿ ಶಿಕ್ಷಣ, ಕಲ್ಯಾಣ ಯೋಜನೆಗಳ ಮೂಲಕ ಕೇರಳ ಇತಿಹಾಸ ನಿರ್ಮಿಸಿದೆ – ಪ್ರೇರಿತ ಬಜೆಟ್

ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ರಾಜ್ಯದಲ್ಲಿ ಹಿರಿಯ ನಾಗರಿಕರ ಆಯೋಗ ಸ್ಥಾಪಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಅದಕ್ಕಾಗಿ ವರ್ಷಕ್ಕೆ 30 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ. ಅಲ್ಲದೆ, ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸ್ವಯಂಸೇವಕ ಪಡೆಗಳನ್ನು ರಚಿಸಿ, ಅವರ ಮೂಲಕ ಹಿರಿಯ ನಾಗರಿಕರಿಗೆ 24×7 ಸಹಾಯ ಸೇವೆ ಒದಗಿಸಲಾಗುತ್ತದೆ ಎಂದು ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ತಿಳಿಸಿದ್ದಾರೆ.

ಹಿರಿಯ ನಾಗರಿಕರಿಗಾಗಿ ವಿಶೇಷ ಡಿಜಿಟಲ್ ಪೋರ್ಟಲ್ ಸ್ಥಾಪಿಸಲಾಗುತ್ತಿದ್ದು, ಇದರ ಮೂಲಕ ಕಲ್ಯಾಣ ಯೋಜನೆಗಳ ಮಾಹಿತಿ, ಕುಂದುಕೊರತೆಗಳ ಪರಿಹಾರ, ವೈದ್ಯಕೀಯ ನೆರವು, ಕಾನೂನು ಸೇವೆಗಳು ಹಾಗೂ ಭದ್ರತೆ ಕುರಿತ ನಿಗಾವನ್ನು ವಹಿಸಲಾಗುತ್ತದೆ. ಈ ಉದ್ದೇಶಕ್ಕಾಗಿ ಸ್ವಯಂಸೇವಕ ಪಡೆಗಳಿಗೆ ಸುಮಾರು ₹10 ಕೋಟಿ ಅನುದಾನ ನೀಡಲಾಗುವುದು ಎಂದು ಅವರು ಹೇಳಿದರು.

ಆರ್ಥಿಕತೆಯ ದೃಷ್ಟಿಯಿಂದಲೂ ಹಿರಿಯ ನಾಗರಿಕರು ರಾಜ್ಯಕ್ಕೆ ಅತ್ಯಂತ ಮಹತ್ವದ್ದಾಗಿದ್ದಾರೆ. ಕೇರಳದ ಒಟ್ಟು ಜನಸಂಖ್ಯೆ (ಸುಮಾರು 3.5 ಕೋಟಿ)ಯಲ್ಲಿ ಶೇ.18.7ರಷ್ಟು ಜನರು ಹಿರಿಯ ನಾಗರಿಕರಾಗಿದ್ದು, ಈ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಅವರನ್ನು ಕೇಂದ್ರವಾಗಿಸಿಕೊಂಡು ಪ್ರತ್ಯೇಕ ಬಜೆಟ್ ಮಂಡಿಸುವುದು, ಆ ಕ್ಷೇತ್ರದ ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲಿದೆ ಎಂದು ಬಾಲಗೋಪಾಲ್ ಸ್ಪಷ್ಟಪಡಿಸಿದರು.

ವೃದ್ಧಾಪ್ಯ ಪಿಂಚಣಿ, ಆರೋಗ್ಯ ಸೇವೆಗಳ ಸುಧಾರಣೆ ಮತ್ತು ಸಾಮಾಜಿಕ ರಕ್ಷಣಾ ಯೋಜನೆಗಳನ್ನು ಇನ್ನಷ್ಟು ಬಲಪಡಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಈ ವಿಶೇಷ ಬಜೆಟ್‌ನಲ್ಲಿ ಹಿರಿಯ ನಾಗರಿಕರ ಆರೋಗ್ಯ, ಸಾಮಾಜಿಕ ಭದ್ರತೆ, ಆರ್ಥಿಕ ಸಹಾಯ, ವಸತಿ ಮತ್ತು ಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ರಾಜ್ಯದ ಜನಸಂಖ್ಯೆಯಲ್ಲಿ ಹಿರಿಯ ನಾಗರಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅವರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಈ ಕ್ರಮವು ದೇಶದ ಇತರ ರಾಜ್ಯಗಳಿಗೆ ಮಾದರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
https://www.youtube.com/watch?v=szp3BWeKb6M
Donate Janashakthi Media

Leave a Reply

Your email address will not be published. Required fields are marked *