ಹಾವೇರಿ: ಜಿಲ್ಲೆಯ ತಡಸ, ಮತ್ತೂರು, ಮಡ್ಲೂರು, ಕಚವಿ, ಚಿನ್ನಮುಳಗುಂದ, ಬಾಳೂರು, ಹನುಮನಹಳ್ಳಿ, ಬಾಳಂಬಿಡ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜಮೀನುಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಗೋವಿನ ಜೋಳ, ಹೆಸರು, ಭತ್ತ, ಶುಂಠಿ ಸೇರಿದಂತೆ ಎಲ್ಲ ಬಗೆಯ ಬೆಳೆಯ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿಯವರು ತಿಳಿದುಕೊಂಡರು. ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಿದರು. ಹಾವೇರಿ
ತಮ್ಮ ಜಮೀನಿಗೆ ಬಂದ ಜಿಲ್ಲಾಧಿಕಾರಿ ಎದುರು ಅಳಲು ತೋಡಿಕೊಂಡ ರೈತರು, ‘ಮುಂಗಾರು ಪೂರ್ವ ಮಳೆ ಮುಗಿದು ಮುಂಗಾರು ಮಳೆ ಶುರುವಾಗುತ್ತಿದ್ದಂತೆ, ಜಮೀನು ಹದಗೊಳಿಸಿ ಗೋವಿನ ಜೋಳ ಬಿತ್ತನೆ ಮಾಡಿದ್ದೆವು. ಆದರೆ, ಜಿಟಿ ಜಿಟಿ ಮಳೆ ಹಾಗೂ ಮೋಡ ಕವಿದ ವಾತಾವರಣದಿಂದಾಗಿ ಇಡೀ ಬೆಳೆ ಹಾನಿಯಾಗಿದೆ’ ಎಂದು ಹೇಳಿದರು.
ಇದನ್ನೂ ಓದಿ: ದೇವನಹಳ್ಳಿ| ಭೂ ಸ್ವಾಧೀನ ವಿರುದ್ಧ ಹೋರಾಟ ಮುಂದುವರಿಕೆ
‘ಎಕರೆಗೆ ₹ 15 ಸಾವಿರದಿಂದ ₹30 ಸಾವಿರ ಖರ್ಚು ಮಾಡಿ ಬಿತ್ತನೆ ಮಾಡಿದ್ದೆವು. ಕಟಾವು ಬರುವ ಸಮಯದಲ್ಲಿಯೇ ಇಡೀ ಬೆಳೆ ಒಣಗಿದೆ. ಈ ವರ್ಷ ಬೆಳೆ ಸಂಪೂರ್ಣ ನಾಶವಾಗಿದ್ದು, ನಮಗೆ ಪರಿಹಾರ ನೀಡಬೇಕು. ಇಲ್ಲದಿದ್ದರೆ, ಮಾಡಿದ ಸಾಲ ತೀರಿಸಲು ಸಹ ನಾವೆಲ್ಲರೂ ಪರದಾಡಬೇಕಾಗುತ್ತದೆ’ ಎಂದು ತಿಳಿಸಿದರು.
ರೈತರ ಮನವಿ ಆಲಿಸಿದ ಜಿಲ್ಲಾಧಿಕಾರಿ ವಿಜಯಮಹಾಂತೇಶ, ‘ಜಿಲ್ಲೆಯಲ್ಲಿ ಅಂದಾಜು 22 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿರುವ ಮಾಹಿತಿಯಿದೆ. ಹಾನಿ ಬಗ್ಗೆ ರೈತರು ನೀಡಿರುವ ಮನವಿಗಳನ್ನು ಪರಿಗಣಿಸಲಾಗಿದೆ. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಮೂಲಕ ಜಂಟಿ ಸಮೀಕ್ಷೆಯನ್ನೂ ಆರಂಭಿಸಲಾಗಿದೆ’ ಎಂದರು.
ಜಿಲ್ಲೆಯಲ್ಲಿ ಅಂದಾಜು 22 ಸಾವಿರ ಹೆಕ್ಟೇರ್ ಬೆಳೆ ಹಾನಿ ಕೃಷಿ, ತೋಟಗಾರಿಕೆ, ಹಾಗೂ ಕಂದಾಯ ಇಲಾಖೆಯಿಂದ ಜಂಟಿ ಸಮೀಕ್ಷೆ ಸಮೀಕ್ಷೆ ಬಳಿಕ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.
ಇದನ್ನೂ ನೋಡಿ: ಸಾಮಾಜಿಕ ನ್ಯಾಯವನ್ನು ಜಾರಿ ಮಾಡಬೇಕಿರುವ ಸಂಸತ್ತು ಮಾಡುತ್ತಿರುವುದೇನು? ದಿನೇಶ್ ಅಮಿನ್ ಮಟ್ಟು Janashakthi Media
