ತವರು ಜಿಲ್ಲೆಗೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಂದ 1800 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆನ್‌ಲೈನ್‌ ಮೂಲಕ ಚಾಲನೆ ನೀಡಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದ ಆನ್‌ಲೈನ್‌ ಮೂಲಕ ಸುಮಾರು 1,800 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಉದ್ಘಾಟಿಸಿದರು. ಇತ್ತೀಚಿಗೆ ನಡೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಶಿವಮೊಗ್ಗ ಜಿಲ್ಲೆಗೆ ಸಂಬಂಧಪಟ್ಟ ಹಲವು ನಿರ್ಣಯಗಳಿಗೆ ಅನುಮೋದನೆ ನೀಡಿದ್ದರು. ಇಂದು ಸುಮಾರು 18 ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ್ ಬೊಮ್ಮಾಯಿ, ಬೈರತಿ ಬಸವರಾಜ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನು ಓದಿ: ಉತ್ತರ ಕರ್ನಾಟಕ,ಕರಾವಳಿ ಭಾಗಗಳಲ್ಲಿ ಮಳೆ ಅಬ್ಬರ : ಜನಜೀವನ ಅಸ್ತವ್ಯಸ್ತ

ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.

ಚಾಲನೆ ದೊರೆತ ಕಾಮಗಾರಿಗಳ ವಿವರ:

ರೂ.185 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಅಗತ್ಯ ಪ್ರವಾಸಿ ಸೌಲಭ್ಯಗಳ ಅಭಿವೃದ್ಧಿ ಕಾಮಗಾರಿಗಳು. ರೂ.100 ಕೋಟಿ ವೆಚ್ಚದಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 200 ಹಾಸಿಗೆಗಳ ಕಿದ್ವಾಯಿ ಮಾದರಿಯ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ. ರೂ. 120 ಕೋಟಿ ವೆಚ್ಚದಲ್ಲಿ ನೂತನ ಜಿಲ್ಲಾಡಳಿತ ಭವನ ಕಾಮಗಾರಿ ಕೆಲಸ ಚಾಲನೆ. ರೂ. 15 ಕೋಟಿ ವೆಚ್ಚದಲ್ಲಿ ಎನ್‌ಜಿಒ ಕ್ವಾಟ್ರಸ್ ಕಟ್ಟಡ ಕಾಮಗಾರಿಗೆ ಚಾಲನೆ. ರೂ. 107.89 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್ ಕಾಮಗಾರಿ ಹಾಗೂ ರೂ. 6 ಕೋಟಿ ವೆಚ್ಚದಲ್ಲಿ ಕೆಇಬಿ ವೃತ್ತದಲ್ಲಿ ನೌಕರರ ಸಮುದಾಯ ಭವನ ನಿರ್ಮಾಣಕ್ಕಾಗಿ ಚಾಲನೆ. ರೂ. 1.50 ಕೋಟಿ ವೆಚ್ಚದಲ್ಲಿ ಸಾಗರ ತಾಲೂಕು ನೀರುಕೋಡು ಗ್ರಾಮದಲ್ಲಿ ಸಾರ್ವಜನಿಕ ಸಮುದಾಯ ಭವನ ಕಾಮಗಾರಿ ಹಾಗೂ ರೂ. 10 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ರಸ್ತೆಗಳ ಕಾಮಗಾರಿಗಳ ಕೆಲಸಗಳಿಗೆ ಚಾಲನೆ. ರೂ. 20.89 ಕೋಟಿ ವೆಚ್ಚದಲ್ಲಿ ಸಕ್ರೆಬೈಲಿನಲ್ಲಿ ಜೈವಿಕ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಚಾಲನೆ. ರೂ. 32 ಕೋಟಿ ವೆಚ್ಚದಲ್ಲಿ ಊರಗಡೂರು ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಾಣ ಕಾಮಗಾರಿಗೆ ಚಾಲನೆ.

ರೂ. 55 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 169ರ (ತೀರ್ಥಹಳ್ಳಿ ಪಟ್ಟಣದಲ್ಲಿ ದ್ವಿಪಥದ ಬೃಹತ್ ಸೇತುವೆ ಮತ್ತು ಬೈಪಾಸ್ ರಸ್ತೆ) ಹಾಗೂ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಾಗರ ನಗರ ವ್ಯಾಪ್ತಿಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗಳಿಗೆ ಶಂಕುಸ್ಥಾಪನೆ.

ರೂ. 155 ಕೋಟಿ ವೆಚ್ಚದಲ್ಲಿ ಇರುವಕ್ಕಿಯಲ್ಲಿ ನಿರ್ಮಾಣಗೊಂಡಿರುವ ಕೃಷಿ ವಿಶ್ವವಿದ್ಯಾಲಯದ ಕಟ್ಟಡ ಉದ್ಘಾಟನೆ ಹಾಗೂ ರೂ. 850 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉಡುಗಣಿ, ತಾಳಗುಂದ, ಹೊಸೂರು ಹೋಬಳಿಗಳ 255 ಕೆರೆಗಳಿಗೆ ನೀರು ತುಂಬುವ ಏತ ನೀರಾವರಿ ಯೋಜನೆಯ ಲೋಕಾರ್ಪಣೆ ಮಾಡಿದರು.

ರೂ. 100 ಕೋಟಿ ವೆಚ್ಚದಲ್ಲಿ 50 ಹಾಸಿಗೆ ವ್ಯವಸ್ಥೆ ಹೊಂದಿರುವ ಹೃದಯ ರೋಗ ವಾರ್ಡ್ ಕ್ಯಾಡ್ ಲ್ಯಾಬ್ ಉದ್ಘಾಟನೆ ಹಾಗೂ ರೂ. 9.19 ಕೋಟಿ  ವೆಚ್ಚದಲ್ಲಿ ಮುಖ್ಯ ಇಂಜಿನಿಯರ್‌ ಕಟ್ಟಡ ನಿರ್ಮಾಣ ಕಾಮಗಾರಿ, 41.39 ಕೋಟಿ ರೂ. ವೆಚ್ಚದಲ್ಲಿ ನವುಲೆಯಲ್ಲಿ ಮೆಸ್ಕಾಂ ಶಾಖಾ ಕಚೇರಿ ಕಟ್ಟಡ ಕಾಮಗಾರಿ, ರೂ. 4.81 ಕೋಟಿ ವೆಚ್ಚದ ಭದ್ರಾವತಿ ನಗರದ ಮೆಸ್ಕಾಂ ವಿಭಾಗೀಯ ಕಚೇರಿ ಕಾಮಗಾರಿಗೆ ಚಾಲನೆ. ರೂ. 1.10 ಕೋಟಿ ವೆಚ್ಚದಲ್ಲಿ ಶಿವಮೊಗ್ಗ ನಗರದಲ್ಲಿ ನಿರ್ಮಿಸಿರುವ ಮೆಸ್ಕಾಂ ಅತಿಥಿ ಗೃಹ ಕಟ್ಟಡಗಳ ಲೋಕಾರ್ಪಣೆ ಮಾಡಲಾಗಿದೆ.

Donate Janashakthi Media

Leave a Reply

Your email address will not be published. Required fields are marked *