ಬಡ್ತಿ, ವರ್ಗಾವಣೆಯಲ್ಲಿನ ಅನ್ಯಾಯ ಖಂಡಿಸಿ ಶಿಕ್ಷಕರ ಪ್ರತಿಭಟನೆ

ಬೆಂಗಳೂರು: ಶಿಕ್ಷಕರ ಬಡ್ತಿ ಮತ್ತು ವರ್ಗಾವಣೆಗಾಗಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

1ರಿಂದ 5ನೇ ತರಗತಿವರೆಗೆ ಪಾಠ ಮಾಡುವ ಶಿಕ್ಷಕರು ಪದವೀಧರರಾಗಿದ್ದಲ್ಲಿ ಅವರನ್ನು 6ರಿಂದ 8ನೇ ತರಗತಿವರೆಗೆ ಪಾಠ ಮಾಡುವ ‘ಜಿಪಿಟಿ ಶಿಕ್ಷಕರು’ ಹುದ್ದೆಗಳಿಗೆ ಬಡ್ತಿ ನೀಡಬೇಕು. ಈ ಬಡ್ತಿಗೆ ಅಡ್ಡಿಯಾಗಿರುವ ವೃಂದ ಮತ್ತು ನೇಮಕಾತಿ ನಿಯಮ-2017ಕ್ಕೆ ತಿದ್ದುಪಡಿ ಮಾಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಸೇವಾ ಜ್ಯೇಷ್ಠತೆ, ಬಡ್ತಿ, ವರ್ಗಾವಣೆ ಪ್ರಕ್ರಿಯೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಬೇಕು. ಮುಖ್ಯ ಶಿಕ್ಷಕರ ಹುದ್ದೆಗೆ ಸೇವಾ ಹಿರಿತನ ಪರಿಗಣಿಸಿ, ಪದವಿ ಮತ್ತು ಬಿ.ಎಡ್ ಪೂರ್ಣಗೊಳಿಸಿದವರಿಗೆ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೊತೆಗಿನ ಸಂಧಾನ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಿಕ್ಷಕರು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಇದರಿಂದ ಸರ್ಕಾರಿ ಶಾಲೆಗಳಲ್ಲಿ ತರಗತಿಗಳಿಗೆ ವ್ಯತ್ಯಯ ಉಂಟಾಗಿದೆ.

ಬೃಹತ್ ಪ್ರತಿಭಟನೆ ಅಂಗವಾಗಿ ಆಗಸ್ಟ್ 1 ರಿಂದಲೇ ವಿವಿಧ ಸ್ವರೂಪದ ಹೋರಾಟಗಳನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಆದರೆ ರಾಜ್ಯ ಸರ್ಕಾರ ಬೇಡಿಕೆ ಈಡೇರಿಸಲು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಇಂದು ಬೃಹತ್ ಪ್ರತಿಭಟನೆ ಕರೆ ನೀಡಲಾಗಿತ್ತು.

ಸಾಹಿತಿ ಬರಗೂರು ರಾಮಚಂದ್ರಪ್ಪ, ಶಿಕ್ಷಣ ತಜ್ಞ ವಿ.ಪಿ‌. ನಿರಂಜನಾರಾಧ್ಯ, ಸಂಘದ ಅಧ್ಯಕ್ಷ ಕೆ. ನಾಗೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಶಿಕ್ಷಕರ ಬೇಡಿಕೆಗಳು

ಸರ್ಕಾರ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮೊದಲು ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತಃ 1 ರಿಂದ 7, 8ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5ಕ್ಕೆ ಹಿಂಬಡ್ತಿ ನೀಡಿದ್ದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಆದ್ದರಿಂದ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು.

2016ಕ್ಕಿಂತ ಮೊದಲು ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ಈ ನಿಯಮದ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು.

ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮೊದಲು ನೇಮಕಾತಿ ಹೊಂದಿದ ಹಾಗೂ ಬಿ ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು. ಈ  ಮೊದಲಿನ ನಿಯಮದಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಅಖಂಡ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು.

Donate Janashakthi Media

Leave a Reply

Your email address will not be published. Required fields are marked *