ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ವರೆಗೆ ಹೆಚ್ಚುತ್ತಿದ್ದೂ, ಹಲವು ಜಿಲ್ಲೆಗಳಲ್ಲಿ ಈಗಾಗಲೇ ತಾಪಮಾನವು 36 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ.
ಇದರಿಂದಾಗಿ ಮಾರ್ಚ್ ತಿಂಗಳಲ್ಲಿಯೇ ಉಷ್ಣಾಂಶವು ಗಣನೀಯವಾಗಿ ಏರಿಕೆ ಕಾಣುತ್ತಿದೆ. ಪರಿಣಾಮ, ಮಕ್ಕಳು, ವೃದ್ಧರು ಹಾಗೂ ಮಹಿಳೆಯರು ಬಸವಳಿಯುತ್ತಿದ್ದಾರೆ. ಬಿಸಿಲಿನಿಂದ ರಕ್ಷಣೆ ಪಡೆಯಲು ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ: ಎಪ್ಸ್ಟೀನ್ ಕಡತಗಳ ಛಾಯೆ: ವಾಷಿಂಗ್ಟನ್ ನಿಂದ ದಿಲ್ಲಿಯ ವರೆಗೆ – ಬೃಂದಾ ಕಾರಟ್
ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದಲ್ಲಿ ಒಣಹವೆ ಮುಂದುವರಿಯಲ್ಲಿದೆ. ಮುಂದಿನ ಐದು ದಿನಗಳ ಅವಧಿಯಲ್ಲಿ ಗರಿಷ್ಠ ತಾಪಮಾನವು 2ರಿಂದ 4 ಡಿಗ್ರಿ ಸೆಲ್ಸಿಯಸ್ವರೆಗೆ ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಮೂಲಕ ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಕೊಪ್ಪಳ, ಬೀದರ್, ಬಾಗಲಕೋಟೆ, ಗದಗ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶವು 40 ಡಿಗ್ರಿ ಸೆಲ್ಸಿಯಸ್ ದಾಟುವ ಬಗ್ಗೆ ಮುನ್ಸೂಚನೆ ನೀಡಿದೆ.
ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ, ರಾಜ್ಯದ 12 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು 35 ಡಿಗ್ರಿ ಸೆಲ್ಸಿಯಸ್ ದಾಟಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 40 ಡಿಗ್ರಿ ಸೆಲ್ಸಿಯಸ್ (39.8) ಸಮೀಪಿಸಿದರೆ, ರಾಯಚೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.
ಬೆಂಗಳೂರಿನಲ್ಲಿಯೂ ತಾಪಮಾನ ಏರಿಕೆ ಕಂಡಿದ್ದು, 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನಗಳು ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ನೋಡಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ – ಹಾಸನ | ಉದ್ಘಾಟನಾ ಕಾರ್ಯಕ್ರಮದಲ್ಲಿ ಸೇರಿದ ಜನಸ್ತೋಮ Janashakthi Media
