ಹುಬ್ಬಳ್ಳಿ: ಮುಂದಿನ ದಿನಗಳಲ್ಲಿ ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುವುದು ಎಂದು ಮರ್ಯಾದೆಗೇಡು ಹತ್ಯೆ ನಡೆದ ತಾಲೂಕಿನ ಇನಾಂ ವೀರಾಪುರ ಗ್ರಾಮಕ್ಕೆ ಜನವರಿ 1ರಂದು ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿ ನಂತರ ಮಾಧ್ಯಮದವರ ಜತೆ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಎಚ್. ಸಿ. ಮಹದೇವಪ್ಪ ಹೇಳಿದರು.
ಉಗ್ರ ಕಾನೂನು ತರಲು ಸಿಎಂ ಜೊತೆ ಚರ್ಚೆ
ರಾಜ್ಯದಲ್ಲಿ ಇಂತಹ ಮರ್ಯಾದೆಗೇಡು ಹತ್ಯೆ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಯಾವ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸಿಎಂ, ಗೃಹ ಸಚಿವರೊಂದಿಗೆ ಚರ್ಚಿಸಲಾಗುವುದು. ಈ ಬಗ್ಗೆ ಉಗ್ರವಾದ ಕಾನೂನು ತರಲು ಮುಂದಿನ ಅಧಿವೇಶನದಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.
ಏಳು ತಿಂಗಳ ಗರ್ಭಿಣಿಯನ್ನು ಅವರ ಕುಟುಂಬಸ್ಥರೇ ಕೊಲೆ ಮಾಡಿರುವುದು ಅಮಾನವೀಯವಾದದು, ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ಎಂದು ಇದಾಗಿದೆ. ಸರಕಾರ ಇದನ್ನು ಸಹಿಸುವುದಿಲ್ಲ. ಮನುವಾದದ ಮನಸ್ಸುಗಳನ್ನು ಹತ್ತಿಕ್ಕಬೇಕು. ಈ ಪ್ರಕರಣದಲ್ಲಿ ಭಾಗಿಯಾಗಿದವರು, ಅದಕ್ಕೆ ಉತ್ತೇಜನ ಕೊಟ್ಟವರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಮತ್ತೊಮ್ಮೆ ಗುಂಡು ಹಾರಿಸಿ
ಮದುವೆಯಾಗುವುದು ಮೂಲಭೂತ ಹಕ್ಕು
ಇಂತಹ ಘಟನೆಗಳು ರಾಜಸ್ಥಾನ, ಹರಿಯಾಣದಂತಹ ರಾಜ್ಯಗಳಲ್ಲಿ ಹೆಚ್ಚು ನಡೆಯುತ್ತಿದ್ದವು. ನಮ್ಮ ರಾಜ್ಯದಲ್ಲಿ ಹೆಚ್ಚಾಗಿ ನಡೆಯುತ್ತಿರಲಿಲ್ಲ. ನಮ್ಮದು ನಾಗರಿಕ ಮತ್ತು ಮುಂದುವರಿದ ರಾಜ್ಯ. ಪ್ರಾಯಕ್ಕೆ ಬಂದ ಯುವಕ, ಯುವತಿ ತಮ್ಮ ಒಪ್ಪಿಗೆ ಮೇರೆಗೆ ಯಾವುದೇ ಧರ್ಮ, ಜಾತಿಯವರನ್ನು ಮದುವೆಯಾಗಲು ಮುಕ್ತವಾದ ಅವಕಾಶವಿದೆ. ಅದು ಅವರ ಮೂಲಭೂತ ಹಕ್ಕು, ಇದನ್ನು ಹತ್ತಿಕ್ಕುವ ಕೆಲಸ ಮಾಡಬಾರದು ಎಂದರು.
ಈ ಪ್ರಕರಣದಲ್ಲಿ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಇಂತಹ ಕೃತ್ಯಗಳನ್ನು ಬೆಂಬಲಿಸುವ ವ್ಯಕ್ತಿಗಳನ್ನು ಸರಕಾರ ಬಿಡುವುದಿಲ್ಲ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂಬುದು ನಮ್ಮ ಆಶಯ ಎಂದು ತಿಳಿಸಿದರು. ಯುವತಿಯ ಇಚ್ಚೆಯ ವಿರುದ್ಧವಾಗಿ ವಿವಾಹ ಮಾಡಬಾರದು. ಆಕೆಯ ಆಸೆಯಂತೆ ಮದುವೆ ಆಗಬೇಕು ಎಂದು ಹಿಂದೂ ಕೋಡ್ ಬಿಲ್ನಲ್ಲಿ ಅಂಬೇಡ್ಕರ್ ಅವರು ಹೇಳಿದ್ದರು ಎನ್ನುವುದನ್ನು ಸಚಿವ ಮಹದೇವಪ್ಪನವರು ಪ್ರಸ್ತಾಪಿಸಿದರು.
ಸಂತ್ರಸ್ತರಿಗೆ ಪರಿಹಾರ ಕೊಡಲು ಸೂಚನೆ
ಘಟನೆ ನಡೆದ ಕೂಡಲೇ ಪರಿಶಿಷ್ಟ ಜಾತಿ, ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಸಂತ್ರಸ್ತರಿಗೆ ಪರಿಹಾರ ಕೊಡುವಂತೆ ಜಿಲ್ಲಾಧಿಕಾರಿಗೆ ಕರೆ ಮಾಡಿ ಸೂಚನೆ ಕೊಟ್ಟಿದ್ದೆ. ಈ ಘಟನೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರೇ ಅವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಪ್ರಕರಣದಲ್ಲಿ ಎಂಟು ಜನ ಸಂತ್ರಸ್ತರಿಗೆ ತಲಾ ₹2 ಲಕ್ಷದಂತೆ ₹16 ಲಕ್ಷ ಪರಿಹಾರದ ಚೆಕ್ ಅನ್ನು ಕುಟುಂಬಸ್ಥರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಯಿತು.
ಇನಾಂ ವೀರಾಪುರಕ್ಕೆ ತೆರಳುವ ಮಾರ್ಗ ಮಧ್ಯೆ ಹುಬ್ಬಳ್ಳಿಯಲ್ಲಿ ಇಂದು ಪೊಲೀಸ್ ಸಿಬ್ಬಂದಿಗಳೊಂದಿಗೆ ಘಟನೆಯ ಕುರಿತು ಸಂಪೂರ್ಣ ವಿವರವನ್ನು ಪಡೆದೆನು. ಜಾತಿ ದ್ವೇಷ ಮತ್ತು ಕ್ರೌರ್ಯದ ವಿರುದ್ಧ ಸಾಕಷ್ಟು ಅರಿವು ಮೂಡಿಸುವ ಪ್ರಯತ್ನಗಳು ಬಹುಕಾಲದಿಂದ ಜಾರಿಯಲ್ಲಿ ಇರುವಂತೆ, ಜಾತೀಯ ದ್ವೇಷವೂ ಕೂಡಾ ಜಾರಿಯಲ್ಲಿರುವುದು ಕಾಲದ ವಾಸ್ತವ. ಆದರೂ ನಾವು ಜಾತಿ ದ್ವೇಷ ಸಮಾಜದ ನಾಶಕ್ಕಾಗಿ ಆಶಯ ಹೊಂದಿ ಪ್ರಯತ್ನಿಸಬೇಕಾದ್ದು ಎಲ್ಲರ ಆದ್ಯ ಜವಾಬ್ದಾರಿ ಎಂದು ಎಕ್ಸ್ನಲ್ಲಿ ಸಚಿವ ಮಹದೇವಪ್ಪನವರು ಟ್ವೀಟ್ ಹಂಚಿಕೊಂಡಿದ್ದಾರೆ.
ಇದನ್ನೂ ನೋಡಿ: ಬಿಕ್ಲು ಶಿವ ಕೊಲೆ ಪ್ರಕರಣ | ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ Janashakthi Media
