ಜೆಇ ಮೆದುಳು ಜ್ವರ ನಿಯಂತ್ರಣಕ್ಕಾಗಿ ಡಿ.5 ರಿಂದ ಅಭಿಯಾನ-48 ಲಕ್ಷ ಮಕ್ಕಳಿಗೆ ಲಸಿಕೆ: ಆರೋಗ್ಯ ಡಾ. ಸುಧಾಕರ್

ಬೆಂಗಳೂರು: ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವೈಕಲ್ಯ ಮಾಡುವ ಮೆದುಳು ಜ್ವರ ಜಪಾನೀಸ್ ಎನ್ ಸೆಫಲೈಟಿಸ್ (ಜೆಇ) ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಲಸಿಕಾ ಅಭಿಯಾನ ನಡೆಸಲು ಮುಂದಾಗಿದ್ದು, ಡಿಸೆಂಬರ್ 5 ರಿಂದ ಆರಂಭವಾಗಲಿದೆ. ಇದರಡಿ 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ. ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಜೆಇ ಮೆದುಳು ಜ್ವರ ‘ಪ್ಲೇವಿವೈರಸ್’ ಎಂಬ ವೈರಾಣುವಿನಿಂದ ಬರುತ್ತದೆ. ಇದು ಕ್ಯುಲೆಕ್ಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಹಂದಿಗಳು ಮತ್ತು ಕಾಡಿನ ಪಕ್ಷಿಗಳಲ್ಲಿರುವ ಈ ವೈರಾಣು ಮಾನವರಲ್ಲಿಯೂ ಕಾಣಿಸಿಕೊಳ್ಳಲಿದ್ದು, ಅಪಾಯಕಾರಿಯಾಗಿದೆ.

ಲಸಿಕಾ ಅಭಿಯಾನದ ಬಗ್ಗೆ ಮಾಹಿತಿ ನೀಡಿದ ಸಚಿವರು, ಡಿಸೆಂಬರ್ ಮೊದಲನೇ ವಾರ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಲಾಗುತ್ತದೆ. ನಂತರದ ಎರಡು ವಾರಗಳಲ್ಲಿ ಎಲ್ಲಾ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರ ಹಾಗೂ ಸಮುದಾಯದ ಇನ್ನಿತರ ಪ್ರದೇಶಗಳಲ್ಲಿ ಲಸಿಕಾಕರಣ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರ ಉಚಿತವಾಗಿ ಜೆನವ್ಯಾಕ್ ಜೆಇ ಲಸಿಕೆಗಳನ್ನು ಸರಬರಾಜು ಮಾಡಿದೆ ಎಂದರು.

10 ಜಿಲ್ಲೆಗಳಲ್ಲಿ ಲಸಿಕಾಕರಣ

ರಾಜ್ಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು 10-ಜೆಇ ಎಂಡೆಮಿಕ್ ಜಿಲ್ಲೆಗಳು ಎಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಮೊದಲನೇ ಮತ್ತು 1.5 ವರ್ಷದ ವಯಸ್ಸಿನಲ್ಲಿ 2ನೇ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶನದಂತೆ ರಾಜ್ಯದ ಇತರೆ ಜಿಲ್ಲೆಗಳಾದ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜೆಇ ವೈರಾಣು ಹರಡದ ಅವಧಿಯಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ. ಈ ಅಭಿಯಾನದಲ್ಲಿ 1-15 ವರ್ಷ ವಯಸ್ಸಿನ ಮಕ್ಕಳಿಗೆ ಒಂದು ಲಸಿಕೆ ನೀಡಲಾಗುವುದು‌ ಎಂದು ಸಚಿವರು ವಿವರಿಸಿದರು.

ಪ್ರಪಂಚದ 24 ದೇಶಗಳಲ್ಲಿ ಜೆಇ ವೈರಾಣು ಪಿಡುಗು

ಪ್ರಪಂಚದ ಅತ್ಯಂತ ಪ್ರಮುಖ 24 ರಾಷ್ಟ್ರಗಳಲ್ಲಿ ಜಪಾನೀಸ್ ಎನ್‍ಸೆಫಲೈಟಿಸ್ (ಜೆಇ) ವೈರಾಣು ರೋಗ ಪಿಡುಗು ಗುರುತಿಸಿಕೊಂಡಿದೆ. ಭಾರತ ಸೇರಿದಂತೆ ಏಷ್ಯಾ ಖಂಡದ 11 ರಾಷ್ಟ್ರಗಳು ಈ ಪಟ್ಟಿಯಲ್ಲಿದೆ. ಪ್ರತಿ ವರ್ಷ ಸರಾಸರಿ 68,000 ಪ್ರಕರಣಗಳು ವರದಿಯಾಗುತ್ತಿವೆ. ಮರಣ ಪ್ರಮಾಣ ಶೇ. 20 ರಿಂದ ಶೇ. 30 ರಷ್ಟಿದೆ. ಗುಣಮುಖರಾದ ಶೇ. 30 ರಿಂದ ಶೇ. 50 ರಷ್ಟು ಪ್ರಕರಣಗಳಲ್ಲಿ ನರದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟಾಗಲಿದೆ ಎಂದು ತಿಳಿದು ಬಂದಿದೆ.

ಜೆಇ ಮೆದುಳು ಜ್ವರದ ಮೊದಲ ಪ್ರಕರಣ 1955 ರಲ್ಲಿ ತಮಿಳುನಾಡಿನ ವೆಲ್ಲೂರ್ ನಲ್ಲಿ ವರದಿಯಾಗಿತ್ತು. ಕರ್ನಾಟಕದಲ್ಲಿ 1978 ರಲ್ಲಿ ಕೋಲಾರ ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಹೆಚ್ಚಿನ ಪ್ರಕರಣಗಳು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕಂಡು ಬರುತ್ತಿದೆ. 2016ರಲ್ಲಿ 11 ಪ್ರಕರಣಗಳು, 2017ರಲ್ಲಿ 23 ಪ್ರಕರಣಗಳು, 2018ರಲ್ಲಿ 35 ಪ್ರಕರಣಗಳು, 2019ರಲ್ಲಿ 33 ಪ್ರಕರಣಗಳು, 2020ರಲ್ಲಿ 19 ಪ್ರಕರಣಗಳು, 2021ರಲ್ಲಿ 25 ಪ್ರಕರಣಗಳು, 2022ರಲ್ಲಿ 21 ಪ್ರಕರಣಗಳು ಪತ್ತೆಯಾಗಿವೆ.

ರೋಗ ಪತ್ತೆಗಾಗಿ ಎಸ್‌ಎಸ್‌ಎಲ್‌ ಕೇಂದ್ರ

ಜೆಇ ರೋಗವನ್ನು ಪತ್ತೆ ಮಾಡಲು ಕರ್ನಟಕ ರಾಜ್ಯದಲ್ಲಿ ಎಸ್‍ಎಸ್‍ಎಲ್‍ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ನಿಮ್ಹಾನ್ಸ್ -ಸ್ಟೇಟ್ ಅಪೆಕ್ಸ್ ಲ್ಯಾಬೊರೇಟರಿ, ವಿಮ್ಸ್-ಬಳ್ಳಾರಿ, ಕಿಮ್ಸ್-ಹುಬ್ಬಳ್ಳಿ, ಡಿಪಿಎಚ್‍ಎಲ್-ಕೋಲಾರ, ಮಣಿಪಾಲ್ ಸೆಂಟರ್ ಫಾರ್ ವೈರಸ್ ರಿಸರ್ಚ್-ಉಡುಪಿ, ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್‍ಐವಿ)-ಬೆಂಗಳೂರು ಕೇಂದ್ರಗಳು ಕಾರ್ಯನಿರ್ವಹಿಸಲಿವೆ.

Donate Janashakthi Media

Leave a Reply

Your email address will not be published. Required fields are marked *