ವಿಧಾನಪರಿಷತ್‌: 4ರಲ್ಲಿ 4 ಕ್ಷೇತ್ರ ಬಿಜೆಪಿಗೆ

ಬೆಂಗಳೂರು: ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ಕೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆದ್ದಿದೆ.  ಆರ್‍.ಆರ್‍.ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎರಡನ್ನೂ ಗೆದ್ದುಕೊಂಡ ಬಿಜೆಪಿ ವಿಧಾನಪರಿಷತ್ತಿಗೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ಕಕ್ಕೆ ನಾಲ್ಕನ್ನೂ ಗೆದ್ದು ಬೀಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಮತ್ತು ಪಶ್ಚಿಮ ಪದವೀಧರರ ಕ್ಷೇತ್ರದಿಂದ ಪ್ರೊ.ಎಸ್.ವಿ. ಸಂಕನೂರ ಅವರು ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವಿನ ದಡ ಸೇರಿದರು. ಆದರೆ, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಶೀಲ್‌ ಜಿ. ನಮೋಶಿ ಎರಡನೇ ಪ್ರಾಶಸ್ತ್ಯದ ಮತ ಎಣಿಕೆ ಬಳಿಕ ನಿಗದಿತ ಕೋಟಾದ ಮತಗಳನ್ನು ಪಡೆಯವಲ್ಲಿ ಸಫಲರಾದರು.

ಪುಟ್ಟಣ್ಣ ಅವರು ಈ ಹಿಂದೆ ಹಾಲಿ ಕ್ಷೇತ್ರದಿಂದ ಮೂರು ಬಾರಿ ಜೆಡಿಎಸ್‌ನಿಂದ ಆಯ್ಕೆಯಾಗಿದ್ದರು. ಆದರೆ, ಈ ಬಾರಿ ಪಕ್ಷಾಂತರಗೊಂಡು ಬಿಜೆಪಿಯಿಂದ ಕಣಕ್ಕಿಳಿದಿದ್ದು, ನಾಲ್ಕನೇ ಬಾರಿ ಜಯಭೇರಿ ಬಾರಿಸಿದ್ದಾರೆ. ಇಲ್ಲಿ ಜೆಡಿಎಸ್‌ ಅಭ್ಯರ್ಥಿ ಎ.ಪಿ. ರಂಗನಾಥ ಪ್ರಬಲ ಸ್ಪರ್ಧೆ ಒಡ್ಡಬಹುದೆಂಬ ನಿರೀಕ್ಷೆ ಹುಸಿಯಾಗಿದೆ.

ಪಶ್ಚಿಮ ಪದವೀಧರರ ಕ್ಷೇತ್ರದ ಹಾಲಿ ಸದಸ್ಯರಾಗಿರುವ ಸಂಕನೂರ, ಅವರಿಗೆ ಕಾಂಗ್ರೆಸ್‌ನ ಆರ್.ಎಂ. ಕುಬೇರಪ್ಪ ಮತ್ತು ಜೆಡಿಎಸ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಸ್ಪರ್ಧೆ ಒಡ್ಡಿದರೂ ಗೆಲುವು ಸಾಧ್ಯವಾಗಲಿಲ್ಲ.

ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಪುನರಾಯ್ಕೆ ಬಯಸಿದ್ದ ಕಾಂಗ್ರೆಸ್‌ನ ಶರಣಪ್ಪ ಮಟ್ಟೂರ ಅವರನ್ನು ಎರಡನೇ ಸ್ಥಾನಕ್ಕೆ ತಳ್ಳಿ ನಮೋಶಿ ಆಯ್ಕೆ ಆಗಿದ್ದಾರೆ. ಇಲ್ಲಿ ಜೆಡಿಎಸ್‌ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ ಪರಾಭವಗೊಂಡರೂ ಹೆಚ್ಚು ಮತಗಳನ್ನು ಬುಟ್ಟಿಗೆ ಹಾಕಿಕೊಂಡಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಚಿದಾನಂದಗೌಡ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರ ಜೆಡಿಎಸ್‍ ವಶದಲ್ಲಿತ್ತು. ಕ್ಷೇತ್ರವನ್ನು ಜೆಡಿಎಸ್‍ನ ತೂಪಲ್ಲಿ ಚೌಡರೆಡ್ಡಿ ಪ್ರತಿನಿಧಿಸುತ್ತಿದ್ದರು.

Donate Janashakthi Media

Leave a Reply

Your email address will not be published. Required fields are marked *