ಶಿವಮೊಗ್ಗ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಕ್ಲೀನ್ ಚಿಟ್ ಪಡೆಯಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.
ಕಾಲ್ತುಳಿತದ ದುರ್ಘಟನೆಯಲ್ಲಿ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ಎ 1, ಎ 2 ಹಾಗೂ ಎ 3 ಆರೋಪಿಗಳು. ಆದರೆ ಲೋಪ ಮುಚ್ಚಿ ಹಾಕಲು ಪೊಲೀಸ್ ಅಧಿಕಾರಿಗಳನ್ನು ಹರಕೆಯ ಕುರಿ ಮಾಡಿದ್ದಾರೆ ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಆರ್ ಸಿಬಿ ಗೆಲುವಿನ ಜನಪ್ರಿಯತೆಯ ವಾತಾವರಣವನ್ನು ವೈಯಕ್ತಿಕ ವರ್ಚಸ್ಸು ಹೆಚ್ಚಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಪೈಪೋಟಿಗಿಳಿದಿದ್ದರು. ಹೀಗಾಗಿಯೇ ವಿಧಾನಸೌಧದ ಆವರಣದ ಕಾರ್ಯಕ್ರಮ ಒಬ್ಬರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ವಿಜಯೋತ್ಸವವನ್ನು ಮತ್ತೊಬ್ಬರು ಹಂಚಿಕೊಂಡಿದ್ದರು.
ಅದೇ ಕಾರಣಕ್ಕೆ ‘ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರ್ಘಟನೆಗೆ ನಾನು ಜವಾಬ್ದಾರ ಅಲ್ಲ’ ಎಂದು ಸಿಎಂ ಹೇಳುತ್ತಿದ್ದಾರೆ. ಪರೋಕ್ಷವಾಗಿ ಡಿಸಿಎಂ ಕಡೆ ಬೆಟ್ಟು ಮಾಡುತ್ತಿದ್ದಾರೆ ಎಂದು ಹೇಳಿದರು.
ಕಾಲ್ತುಳಿತದಲ್ಲಿ 11 ಜನ ಅಮಾಯಕರ ಸಾವಿನ ಪ್ರಕರಣವನ್ನು ಕಾಂಗ್ರೆಸ್ ಹೈಕಮಾಂಡ್ ಯಾವ ರೀತಿ ಪರಿಗಣಿಸಿದೆಯೋ ಗೊತ್ತಿಲ್ಲ. ಆ ಪಕ್ಷದ ಹೈಕಮಾಂಡ್ ಪ್ರಬಲವಾಗಿದ್ದರೆ, ರಾಜ್ಯದ ಜನರ ಆಕ್ರೋಶವನ್ನು ಗ್ರಹಿಸಿ ಇಷ್ಟೊತ್ತಿಗೆ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ರಾಜೀನಾಮೆ ಪಡೆಯಬೇಕಿತ್ತು. ಆದರೆ ರಾಜ್ಯದಲ್ಲಿ ಪ್ರಬಲರೇ ಅಧಿಕಾರದಲ್ಲಿ ಜಂಡಾ ಹೂಡಿದ್ದಾರೆ. ಇಲ್ಲಿ ಬಾಲವೇ ದೇಹವನ್ನು ಅಲುಗಾಡಿಸುತ್ತಿದೆ. ಹೀಗಾಗಿ ಸರ್ಕಾರ ಹುಚ್ಚು ಕುದುರೆಯಂತೆ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.